ಮಡಿಕೇರಿ: ಕೊಡಗಿನ ಕೆಲವು ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಅಲ್ಲಿನ ನಿವಾಸಿಗಳನ್ನು ಮಳೆಗಾಲಕ್ಕೂ ಮೊದಲು ಸ್ಥಳಾಂತರಗೊಳ್ಳುವಂತೆ ತಿಳಿಸಿರುವ ರಾಜ್ಯ ಸರಕಾರದ ಕ್ರಮ ಖಂಡನೀಯ. ಗ್ರಾಮದಿಂದ ಸ್ಥಳಾಂತರಗೊಳ್ಳುವವರಿಗೆ ಅಗತ್ಯ ವಸತಿ ವ್ಯವಸ್ಥೆ ಅಥವಾ ಮನೆ ಬಾಡಿಗೆಯನ್ನು ಒದಗಿಸಿಕೊಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಗ್ರಾಮಸ್ಥರು ಇನ್ನೂ ಕೂಡ ಸುಧಾರಿಸಿಕೊಳ್ಳದ ಸ್ಥಿತಿಯಲ್ಲಿರುವಾಗ ರಾಜ್ಯ ಸರಕಾರ ದಿಢೀರಾಗಿ ಗ್ರಾಮ ಬಿಡುವಂತೆ ತಿಳಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸ್ಥಳಾಂತರಗೊಳ್ಳುವವರು ಅತಂತ್ರ ಸ್ಥಿತಿಯನ್ನು ಅನುಭವಿಸುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆ ಏನು ಎಂಬುವುದನ್ನು ಸ್ಪಷ್ಟಪಡಿಸಿಲ್ಲ. ಸರಕಾರದ ಈ ನಿರ್ಲಕ್ಷ್ಯ ಮನೋಭಾವನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಅಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೇಂದ್ರ ಸರಕಾರ ಮಳೆಹಾನಿ ಪರಿಹಾರವಾಗಿ ಕೊಡಗು ಜಿಲ್ಲೆಗೆ ಸೀಮಿತವಾಗಿ 546 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರಕಾರ ಇದನ್ನು ಜಿಲ್ಲೆಗೆ ಸದ್ಬಳಕೆ ಮಾಡದೆ ಇತೆರೆಡೆಗೆ ಹಂಚಿಕೆ ಮಾಡುವ ಮೂಲಕ ದುರಪಯೋಗಪಡಿಸಿದೆ ಎಂದು ಆರೋಪಿಸಿದರು. ಸಂತ್ರಸ್ತ ರೈತರು ಹಾಗೂ ಬೆಳೆಗಾರರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಮನವಿಮಾಡಿಕೊಳ್ಳಲಾಗುವುದು. ಈ ಬೇಡಿಕೆಗೆ ಎರಡೂ ಸರಕಾರಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಲಿವೆ ಎನ್ನುವ ವಿಶ್ವಾಸವಿದೆ ಎಂದು ರವಿಕಾಳಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ , ಪ್ರಧಾನ ಕಾರ್ಯದರ್ಶಿಗಳಾದ ಕಾಂತಿ ಸತೀಶ್ ಹಾಗೂ ವಿ.ಕೆ.ಲೋಕೇಶ್ ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕೊಡಗು ದುರಂತ: ಸ್ಥಳಾಂತರಕ್ಕೂ ಮುನ್ನ ಪರ್ಯಾಯ ವ್ಯವಸ್ಥೆ ಕಲ್ಪಿಸಿ"