ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಪೂರ್ಣ ಹದಗೆಟ್ಟಿರುವ ಅಡ್ಡಹೊಳೆಯಿಂದ ಬಿ.ಸಿ.ರೋಡ್ ತನಕ ರಸ್ತೆ ಮರು ಡಾಮರೀಕರಣ ನಡೆಸಿ ಅಭಿವೃದ್ಧಿಪಡಿಸಬೇಕು ಮತ್ತು ಅಡ್ಡಹೊಳೆ-ಬಿ.ಸಿ.ರೋಡ್ ಮಧ್ಯೆ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ತಿಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ಅ.10ರಂದು ನೆಲ್ಯಾಡಿಯಲ್ಲಿ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮೂರು ವಾರದೊಳಗೆ ದುರಸ್ಥಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಮತ್ತು ಚತುಷ್ಪಥ ಕಾಮಗಾರಿ ಶೀಘ್ರ ಆರಂಭಿಸುವುದಾಗಿ ನೀಡಿದ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ನೆಲ್ಯಾಡಿ ಗಾಂಧಿ ಮೈದಾನದಲ್ಲಿನ ಗಾಂಧಿ ಪ್ರತಿಮೆಗೆ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ವಿವಿಧ ಘೋಷಣೆ, ನಾಮಫಲಕಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ನೆಲ್ಯಾಡಿ ಪೇಟೆಗೆ ಆಗಮಿಸಿ ಬಳಿಕ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ, ಉಪಾಧ್ಯಕ್ಷ, ಅಬ್ರಹಾಂ ವರ್ಗೀಸ್, ಹೋರಾಟ ಸಮಿತಿ ಸದಸ್ಯ ಫಾ.ಆದರ್ಶ ಜೋಸೆಫ್, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ಮಾತನಾಡಿದರು. ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ಕೋಶಾಧಿಕಾರಿ ಯು.ಪಿ.ವರ್ಗೀಸ್, ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ಉಷಾ ಅಂಚನ್, ಹೋರಾಟ ಸಮಿತಿ ಕಾರ್ಯದರ್ಶಿ ಜೋಸ್ ಕೆ.ಜೆ., ಉಪಾಧ್ಯಕ್ಷ ಸುಧೀರ್ಕುಮಾರ್, ಜೊತೆ ಕಾರ್ಯದರ್ಶಿಗಳಾದ ಮನೋಜ್ ವರ್ಗೀಸ್, ಜಯೇಶ್ ವಿ.ಜೆ., ಕೋಶಾಧಿಕಾರಿ ಒ.ಜಿ.ನೈನಾನ್, ಫಾ.ಹನಿ ಜೇಕಬ್, ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್ ಕಡಬ, ಕೆ.ಪಿ.ತೋಮಸ್, ಕೆ.ಕೆ.ಸೆಬಾಸ್ಟಿಯನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.
ನೆಲ್ಯಾಡಿ ಭಾಗದ ವಿವಿಧ ಚರ್ಚ್ಗಳ ಧರ್ಮಗುರುಗಳು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೆಲ್ಯಾಡಿ ಪೇಟೆಯಲ್ಲಿನ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅಧಿಕಾರಿಗಳ ಭರವಸೆ:
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿ ಕಾಮರಾಜ್ ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚಿ ದುರಸ್ಥಿ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ. ಮೂರು ವಾರಗಳ ಒಳಗಾಗಿ ರಸ್ತೆ ಸಂಪೂರ್ಣವಾಗಿ ದುರಸ್ಥಿ ಆಗಲಿದೆ. ಅಲ್ಲದೆ ಚತುಷ್ಫಥ ಕಾಮಗಾರಿಯನ್ನು ಶೀಘ್ರ ಪುನರಾರಂಭಿಸಲಾಗುವುದು ಎಂದರು.
ಬಿಗಿ ಬಂದೋಬಸ್ತ್:
ಪ್ರತಿಭಟನೆಯ ಹಿನ್ನೆಲೆಯಲ್ಲಿ ನೆಲ್ಯಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ಕರೆಸಿಕೊಂಡು ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಡಿವೈಎಸ್ಪಿ ದಿನಕರ ಶೆಟ್ಟಿ, ಉಪ್ಪಿನಂಗಡಿ ಎಸ್.ಐ.ನಂದಕುಮಾರ್ರವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…
ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…