ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಸೆ.5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿತ್ತು. ಜೀವಹಾನಿ, ಜಾನುವಾರು ಹಾನಿ ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯಲ್ಲಿ ಮತ್ತೆ ಮಳೆಯ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟ್ರೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 08272-221077 ಹಾಗೂ ವ್ಯಾಟ್ಸ್ ಆಪ್ ನಂ. 8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆ ಬುಧವಾರ ತೀವ್ರತೆಯನ್ನು ಪಡೆದುಕೊಂಡಿದೆ. ಜೀವನದಿ ಕಾವೇರಿ ಮತ್ತೆ ಉಕ್ಕಿ ಹರಿಯಲಾರಂಭಿಸಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿರುವುದರಿಂದ ಭಾಗಮಂಡಲವನ್ನು ಸಂಪರ್ಕಿಸುವ ರಸ್ತೆಗಳು ಜಲಾವೃತಗೊಂಡಿವೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ಮಳೆಯ ತೀವ್ರತೆ ಇದೇ ರೀತಿ ಮುಂದುವರಿದಲ್ಲಿ ಭಾಗಮಂಡಲ ಮತ್ತೊಮ್ಮೆ ಸಂಪೂರ್ಣವಾಗಿ ಜಲಾವೃತಗೊಳ್ಳುವ ಆತಂಕ ಎದುರಾಗಿದೆ.ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಳಲ್ಲಿ, ವೀರಾಜಪೇಟೆ, ಬಾಳೆಲೆ ವ್ಯಾಪ್ತಿಯಲ್ಲಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲೂ ನಿರಂತರವಾಗಿ ಮಳೆಯಾಗುತ್ತಿದೆ.
ಎಡೆಬಿಡದೆ ಸುರಿಯುತ್ತಿರುವ ಗಾಳಿ, ಮಳೆಯಿಂದ ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಡಿಕೇರಿ-ಮಂಗಳೂರು ಮುಖ್ಯ ರಸ್ತೆಯ ಜೋಡುಪಾಲದಲ್ಲಿ ಗುರುವಾರ ಬೆಳಗ್ಗೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದೆ. ರಸ್ತೆಯ ಕೆಲವೆಡೆಗಳಲ್ಲಿ ಬರೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಮರ ಮತ್ತು ಮಣ್ಣನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಕ್ರಮ ಕೈಗೊಂಡರು.
ಜಿಲ್ಲೆಯ ನದಿಪಾತ್ರ ಹಾಗೂ ಬೆಟ್ಟಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ಅತಿವೃಷ್ಟಿ ಸಂದರ್ಭ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ತಂಡ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕಾರ್ಯೋನ್ಮುಖವಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ತಿಳಿಸಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…