ಮಡಿಕೇರಿ : ಮಡಿಕೇರಿ -ಸಂಪಾಜೆ- ಮಂಗಳೂರು ರಸ್ತೆಯಲ್ಲಿ ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದಕ್ಕೆ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ ಕೆ ಜಿ ಬೋಪಯ್ಯ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದಂತೆಯೇ ಮಡಿಕೇರಿ -ಸಂಪಾಜೆ- ಮಂಗಳೂರು ರಸ್ತೆಯ ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು ಬಿಟ್ಟಿತ್ತು. ಹೀಗಾಗಿ ಶುಕ್ರವಾರ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಮೇಲೆ ನೀರು ಹರಿಯದಂತೆ ಸ್ಯಾಂಡ್ ಬಂಡ್ಗಳನ್ನು ಅಳವಡಿಸಿ ರಸ್ತೆ ಕುಸಿಯದಂತೆ ಕ್ರಮಕೈಗೊಳ್ಳಲಾಗಿದೆ. ಭಾರೀ ವಾಹನಗಳ ಸಂಚಾರದ ಮಾರ್ಗವನ್ನು ಈಗಾಗಲೇ ಬದಲಾಯಿಸಲಾಗಿದ್ದು, ರಸ್ತೆಯ ಅರ್ಧಭಾಗದ ಮೂಲಕ ಇತರ ವಾಹನಗಳು ಸಂಚರಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಪೊಲೀಸರು ನಿಗಾ ವಹಿಸಿದ್ದಾರೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ಜೆ.ಸಿ.ಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಘಟಕದ ಅಭಿಯಂತರರೊಂದಿಗೆ ಸಮಾಲೋಚಿಸಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಶಾಸಕದ್ವಯರ ಭೇಟಿ:
ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚರಂಡಿ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಸ್ತೆ ದುರಸ್ತಿ ಸಂದರ್ಭ ಅಳವಡಿಸಿಕೊಳ್ಳಲಾದ ತಂತ್ರಜ್ಞಾನದ ಬಗ್ಗೆ ಶಾಸಕರು ಮಾಹಿತಿ ಪಡೆದರು. ಕುಸಿದಿರುವ ಸ್ಥಳದಲ್ಲಿ ಕಾಂಕ್ರೀಟ್ ತಡೆಗೋಡೆ ಮತ್ತು ಕಾಂಕ್ರೀಟ್ ಒಳಚರಂಡಿ ವ್ಯವಸ್ಥೆ ಮಾಡಬೇಕೆಂದರು. ಯಾವುದೇ ಕಾರಣಕ್ಕೂ ವಾಹನಗಳ ಸಂಚಾರಕ್ಕೆ ತಡೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸೂಚಿಸಿದರು.
ಈ ಸಂದರ್ಭ ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಕಾಟಿಕೇರಿ ಗ್ರಾಮಸ್ಥರು ಹಾಜರಿದ್ದರು.
ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ,
ಕಳೆದ ಬಾರಿ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಮಳೆ ಸುರಿದು ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗಿತ್ತು. ಬಳಿಕ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ. ಆದರೆ ಶಾಶ್ವತ ಯೋಜನೆ ರೂಪಿಸಲು ಹೆಚ್ಚುವರಿ 45 ಕೋಟಿ ರೂ.ಗಳ ಅನುದಾನ ಅಗತ್ಯವಿದ್ದು, ಚುನಾವಣಾ ನೀತಿ ಸಂಹಿತೆ ಮತ್ತಿತ್ತರ ಕಾರಣಗಳಿಂದ ಈ ಹಣ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರ ಗಮನ ಸೆಳೆದಿದ್ದು, ಪ್ರಸ್ತುತ ಈ ಮನವಿ ಕೇಂದ್ರ ಸರಕಾರದ ಬಳಿ ಇದೆ. ಈ ಅನುದಾನ ಬಿಡುಗಡೆಯಾದ ಬಳಿಕ ಶಾಶ್ವತ ಕಾಮಗಾರಿಗಳು ಆರಂಭವಾಗುತ್ತದೆ ಎಂದು ತಿಳಿಸಿದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ,
ಸ್ಯಾಂಡ್ ಬಂಡ್ ಮತ್ತು ಕಾಂಕ್ರೀಟ್ ಬಳಸಿ ಹೆಚ್ಚಿನ ಅನಾಹುತವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಕುಸಿಯದಂತೆ ಹೆದ್ದಾರಿ ಬದಿಯಲ್ಲಿ ಕಾಂಕ್ರಿಟ್ ವಾಲ್ ನಿರ್ಮಿಸಿದರೇ ಶಾಶ್ವತ ಪರಿಹರ ದೊರೆಯಲಿದೆ ಎಂದರು. ಕಳೆದ ಬಾರಿ ಮರಳಿನ ತಡೆಗೋಡೆ ನಿರ್ಮಿಸುವ ಸಂದರ್ಭ ನಾನು ಆಕ್ಷೇಪ ವ್ಯಕ್ತಪಡಿಸಿ ಕೊಡಗಿನ ವಾತಾವರಣಕ್ಕೆ ಇದು ಸೂಕ್ತವಲ್ಲವೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೆ. ಆದರೆ ಅಧಿಕಾರಿಗಳು ತಮ್ಮದೇ ಆದ ಕಾರಣಗಳನ್ನು ನೀಡಿ ಮರಳಿನ ಮೂಟೆಗಳನ್ನು ಇಟ್ಟರು. ಇದೀಗ ಮತ್ತೆ ರಸ್ತೆ ಬಿರುಕು ಕಾಣಿಸಿಕೊಂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…