ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್ ಕೇಸು ದಾಖಲಿಸಲು ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ.
ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಕಾರ್ಡು ಪಡೆದಿರುವುದು ಅಕ್ಷಮ್ಯ ವಂಚನೆಯಾಗಿದೆ. ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಿಂದಿರುಗಿಸಲು ಈಗಾಗಲೇ ಗಡುವು ನೀಡಲಾಗಿದೆ. ಆದರೂ ಮತ್ತೊಮ್ಮೆ ಅವಕಾಶ ನೀಡಿ ಕೂಡಲೇ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧ ಪಟ್ಟ ಕಚೇರಿಗೆ ಹಿಂದಿರುಗಿಸಬೇಕು. ಹಿಂದಿರುಗಿಸದೇ ಇದ್ದಲ್ಲಿ ಅಂತಹವರ ಕುಟುಂಬಗಳನ್ನು ಪತ್ತೆ ಮಾಡಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರವಾಹ ಪುನರ್ವಸತಿ : ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಗಳು, ಬೆಳ್ತಂಗಡಿ ತಾಲೂಕಿನ ಕೆಲವಡೆ ಸಂತ್ರಸ್ತರ ಮನೆ ಪುನರ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ತಕರಾರು ಎತ್ತಿರುವುದಕ್ಕೆ ಅಸಮಾಧಾನ ಸೂಚಿಸಿದರು. ಸಂತ್ರಸ್ತರ ಬದುಕು ಪುನರ್ ನಿರ್ಮಾಣದಲ್ಲಿ ಸರಕಾರ ನಿರಂತರವಾಗಿ ತೊಡಗಿಸಿದ್ದು, ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ನೆರೆ ಹಾವಳಿಯಲ್ಲಿ ಫಲಾನುಭವಿಗಳಿಗೆ ಆದಷ್ಟು ಬೇಗ ಪರಿಹಾರ ದೊರಕುವಂತೆ ಕಾರ್ಯನಿರ್ವಹಿಸಬೇಕು ಎಂದರು. ಪಿಂಚಣಿದಾರರಿಗೆ ತಾಂತ್ರಿಕ ಸಮಸ್ಯೆಗಳಿಂದ ಪಿಂಚಣಿ ಸರಿಯಾಗಿ ದೊರಕದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಇವುಗಳನ್ನು ತ್ವರಿತವಾಗಿ ಪರಿಹರಿಸಿ ಕ್ಲಪ್ತವಾಗಿ ಪಿಂಚಣಿ ದೊರಕಿಸಿಕೊಡಲು ಮಂಜುನಾಥ್ ಪ್ರಸಾದ್ ತಿಳಿಸಿದರು. ಪ್ರತಿಯೊಂದು ಗ್ರಾಮದಲ್ಲಿ ರುದ್ರಭೂಮಿ ಕಡ್ಡಾಯವಾಗಿ ಇರಬೇಕು, ಇಲ್ಲದ್ದಿದ್ದ ಪಕ್ಷದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಜಾಗವನ್ನು ಗುರುತಿಸಿ ರುದ್ರಭೂಮಿ ನಿರ್ಮಾಣ ಮಾಡುವಂತೆ ಆದೇಶ ನೀಡಿದರು. ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಗೊಂಡವರಿಗೆ ಸಕಾಲಕ್ಕೆ ವಿಮಾ ಹಣ ದೊರಕದಿರುವ ಬಗ್ಗೆ ವಿಮಾ ಕಂಪೆನಿಗಳ ಅಧಿಕಾರಿಗಳೊಂದಿಗೆ ಕೂಡಲೇ ಚರ್ಚಿಸಲು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವೇದಿಕೆಯಲ್ಲಿದ್ದರು. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ , ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ತರಭೇತಿ ಐಎಎಸ್ ಅಧಿಕಾರಿ ರಾಹುಲ್ ಸಿಂಧ್ಯಾ, ಡಿಸಿಪಿ ಅರುಣಾಂಶು ಗಿರಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…