ಇತ್ತೀಚಿನ ದಿನಗಳಲ್ಲಿ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವುದು ಅರಣ್ಯ ಇಲಾಖೆಗೆ ಸವಾಲಿನ ಕೆಲಸವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ ತಂತ್ರಜ್ಞಾನದ ಮೊರೆ ಹೋಗಿದೆ.
ಕೊಡುಗು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ತಂತ್ರಜ್ಞಾನವನ್ನು ಅಳವಡಿಸಿ, ಸ್ವಲ್ಪಮಟ್ಟಿನ ಯಶಸ್ಸು ಗಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಇದೀಗ ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ವಿಭಾಗದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಈ ಎಐ ಆಧಾರಿತ ತಂತ್ರಜ್ಞಾನವಿರುವ ಕ್ಯಾಮೆರಾಗಳು ಆನೆಗಳು ಕಂಡಾಕ್ಷಣ ಅರಣ್ಯ ಸಿಬ್ಬಂದಿಗೆ ಮೊಬೈಲ್ ಮೂಲಕ ಸಂದೇಶವನ್ನು ರವಾನಿಸುತ್ತವೆ. ಜೊತೆಗೆ, ಸೈರನ್ ರೀತಿಯ ಶಬ್ಧ ಬರುವುದರಿಂದ ಆನೆಗಳು ಮರಳಿ ಕಾಡಿಗೆ ವಾಪಸಾಗುತ್ತವೆ. ಇದು ಸ್ವಲ್ಪ ಮಟ್ಟಿಗೆ ಯಶಸ್ಸು ಕಂಡಿರುವುದರಿಂದ ಅರಣ್ಯಾಧಿಕಾರಿಗಳು ಹಾಗೂ ಕಾಡಂಚಿನ ರೈತರಿಗೆ ಸ್ವಲ್ಪಮಟ್ಟಿನ ಪರಿಹಾರವಾಗಿ ಕಾಣಿಸಿದೆ.
ಮಾನವ – ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆ ಎಐ ಆಧಾರಿತ ಅಡ್ವಾನ್ಸ್ ಅಲರ್ಟ್ ಸಿಸ್ಟಂ ಅನ್ನು ಅಳವಡಿಸಿದ್ದು, ಇದು ಆನೆಗಳು ಬಂದಾಗ ಅರಣ್ಯ ಇಲಾಖೆ ಸಿಬ್ಬಂದಿಗೆ ಸಂದೇಶವನ್ನು ರವಾನಿಸುತ್ತದೆ. ಇದರಿಂದ ಆನೆಗಳ ಮೇಲೆ ನಿಗಾ ಇಡಲು ಮತ್ತು ಅವು ನಾಡಿನೊಳಗೆ ಪ್ರವೇಶಿಸದಂತೆ ತಡೆಯಲು ಸಹಕಾರಿಯಾಗಿದೆ ಎನ್ನುತ್ತಾರೆ ಮೈಸೂರು ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ. ರಮೇಶ್ ಕುಮಾರ್.
ವನ್ಯಜೀವಿ ಸಂಘರ್ಷ ತಡೆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಲುತ್ತಿದೆ. ಹಿಂದೆ ರೈಲ್ವೆ ಹಳಿ ಬ್ಯಾರಿಕೇಡ್, ಕಂದಕ ನಿರ್ಮಾಣ, ಸೋಲಾರ್ ಫೆನ್ಸಿಂಗ್ ಅಳವಡಿಸಲಾಗುತ್ತಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆಧುನಿಕ ತಂತ್ರಜ್ಞಾನ ಬಳಸಿ, ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಇದು ಆನೆಗಳ ಹಾವಳಿಯನ್ನು ತಡೆಯಲು ನೆರವಾಗಲಿದೆ ಎಂದು ಹೇಳುತ್ತಾರೆ ಮಲೈಮಹಾದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ಭಾಸ್ಕರ್.