ಜಮ್ಮು-ಕಾಶ್ಮೀರದಲ್ಲಿ ಮತ್ತೆ ನಿನ್ನೆ ಮೇಘಸ್ಫೋಟ ಸಂಭವಿಸಿದೆ. ರಾಸಿ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮನೆಯೊಂದು ಕುಸಿತಗೊಂಡು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಅತಿವೃಷ್ಟಿ ಹಾಗೂ ದಿಢೀರ್ ಪ್ರವಾಹದಿಂದ ಇದುವರೆಗೆ ಕಣಿವೆ ರಾಜ್ಯದಲ್ಲಿ 11 ಮಂದಿ ಮೃತಪಟ್ಟಿದ್ದು, ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ಉತ್ತರಾಖಂಡ್ ನ ವಿವಿಧ ಸ್ಥಳಗಳಲ್ಲೂ ನಿನ್ನೆ ಮೇಘಸ್ಫೋಟದ ಘಟನೆಗಳು ವರದಿಯಾಗಿವೆ. ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 18 ರಿಂದ 20 ಮಂದಿ ಕಾಣೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ದೇವಲ್ ಬ್ಲಾಕ್ ನಲ್ಲಿ 20 ಜಾನುವಾರುಗಳು ಮೃತಪಟ್ಟಿವೆ. ತೆಹ್ರಿ, ರುದ್ರಪ್ರಯಾಗ್, ಜಕೋಲಿ, ಬಂಗಾರ್ ಸೇರಿದಂತೆ ಹಲವು ಸ್ಥಳಗಳಲ್ಲಿ ಮೇಘ ಸ್ಫೋಟ ಹಾಗೂ ಅತಿವೃಷ್ಟಿಯಿಂದ ಭಾರೀ ಪ್ರಮಾಣದಲ್ಲಿ ಹಾನಿಯಾಗಿರುವುದಾಗಿ ವರದಿಯಾಗಿದೆ. ಇದೇ ವೇಳೆ ಇಂದು ಸಹ ರಾಜಸ್ತಾನ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

