ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್ ಪ್ರದೇಶ ಅಡಿಕೆಬೆಳೆ ಕೊಳೆರೋಗಕ್ಕೆ ತುತ್ತಾಗಿದೆ. ಸಹಸ್ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬೆಳೆಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವ ಬಗ್ಗೆಯೂ ಮಾಹಿತಿ ಇದೆ. ಈಗಾಗಲೇ ಆಗಿರುವ ಬೆಳೆನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಅಲ್ಲದೇ ಸಂಭಾವ್ಯ ಬೆಳೆಹಾನಿಯನ್ನು ತಡೆಗಟ್ಟಲು ಇರುವ ಕ್ರಮಗಳ ಬಗ್ಗೆಯೂ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದರು. ಬೆಳೆಹಾನಿಗೊಳಗಾಗಿರುವ ರೈತರಿಗೆ ಸಮಾಧಾನ ತರುವ ರೀತಿಯಲ್ಲಿ ಕೇಂದ್ರ ಸರ್ಕಾರವು ಪರಿಹಾರದ ಮೊತ್ತ ಘೋಷಿಸಬೇಕು. ಈಗಾಗಲೇ ಘೋಷಿಸಿರುವ ಮೊತ್ತ ಅತ್ಯಲ್ಪವಾಗಿದೆ. ಪರಿಹಾರಧನ ವಿತರಿಸುವ ವಿಷಯದಲ್ಲಿ ತಾರತಮ್ಯ ಧೋರಣೆ ಸರಿಯಲ್ಲ ಎಂದ ಅವರು, ತೆಂಗು ಅಭಿವೃಧ್ಧಿ ಮಂಡಳಿಯ ಶಾಖೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಮಳೆಹಾನಿಗೊಳಗಾಗಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ರಸ್ತೆಯನ್ನು ದುರಸ್ತಿಗೊಳಿಸಲು ಉದ್ದೇಶಿಸಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….


