ಕಾಂಗ್ರೆಸ್ 2 ನೇ ಪಟ್ಟಿಯ ಬಿಡುಗಡೆ ಚಾಮುಂಡೇಶ್ವರಿಗೆ ಸಿದ್ದೇಗೌಡ | ಚಾಮರಾಜ ಹಾಗೂ ಕೆ.ಆರ್.ಕ್ಷೇತ್ರ ಸಸ್ಪೆನ್ಸ್ | ದಕ್ಷಿಣ ಕನ್ನಡ ಜಿಲ್ಲೆಯ ಸದ್ದಿಲ್ಲ…! |

April 6, 2023
1:31 PM

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ‘ಕೈ’ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ.

ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಈ ಬಾರಿಯೂ ಘೋಷಣೆ ಆಗಿಲ್ಲ. ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ನೀಡಲು ವಿರೋಧ ಇದೆ. ಈ‌ ಹಿನ್ನೆಲೆಯಲ್ಲಿ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇರಲಿಲ್ಲ. ಟಿಕೆಟ್ ಘೋಷಣೆ ಆಗದ ಹಿನ್ನೆಲೆಯಲ್ಲಿ ಅವರು ಜಮೀರ್ ಅಹ್ಮದ್ ಖಾನ್ ಮೂಲಕ ಸಾಕಷ್ಟು ಲಾಬಿ ನಡೆಸಿದ್ದರು.

ಆದರೆ, ಎರಡನೇ ಪಟ್ಟಿಯಲ್ಲೂ ಅಖಂಡ ಶ್ರೀನಿವಾಸ್ ಮೂರ್ತಿ ಹೆಸರು ಕಾಣಿಸಿಕೊಂಡಿಲ್ಲ. ಜೊತೆಗೆ ಲಿಂಗಸುಗೂರಿನ ಹಾಲಿ ಶಾಸಕ ಡಿಎಸ್‌ ಹುಲಗೇರಿ, ಹರಿಹರ ಕ್ಷೇತ್ರದ ಹಾಲಿ ಶಾಸಕ ರಾಮಪ್ಪ, ಕುಂದಗೋಳದ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್‌ ಘೋಷಣೆ ಆಗಿಲ್ಲ.

ಕಳೆದ ಬಾರಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದ ಬಾದಾಮಿ ಕ್ಷೇತ್ರದಿಂದ ಭೀಮಸೇನ್‌ ಬಿ. ಚಿಮ್ಮನಕಟ್ಟಿಗೆ ಟಿಕೆಟ್‌ ನೀಡಲಾಗಿದೆ.

ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎನ್ನಲಾದ ವಿನಯ್ ಕುಲಕರ್ಣಿ ಅವರಿಗೆ ಧಾರವಾಡದಿಂದ ಟಿಕೆಟ್‌ ನೀಡಲಾಗಿದೆ. ಇತ್ತ, ಕಡೂರು ಕ್ಷೇತ್ರದಲ್ಲಿ ವೈ.ಎಸ್‌.ವಿ ದತ್ತ ಬದಲಿಗೆ ಆನಂದ್‌ಗೆ ಟಿಕೆಟ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್‌ ಬಿಟ್ಟು ಬಂದಿದ್ದ ಎಸ್‌.ಆರ್‌ ಶ್ರೀನಿವಾಸ್‌ ಅವರಿಗೆ ಗುಬ್ಬಿಯಲ್ಲಿ ಟಿಕೆಟ್‌ ಸಿಕ್ಕಿದೆ.  ಇತ್ತೀಚೆಗೆ ಬಿಜೆಪಿ ತೊರೆದಿದ್ದ ಕೂಡ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮುರಿಂದ ಟಿಕೆಟ್‌ ನೀಡಲಾಗಿದೆ. ಮತ್ತೊಂದೆಡೆ ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ಕೆ.ಪಿ. ವಿರೇಂದ್ರಗೆ (ಪಪ್ಪಿ) ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಲಾಗಿದೆ.

ಬೆಂಗಳೂರಿನ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ಪದ್ಮನಾಭನಗರದಿಂದ ವಿ.ರಘುನಾಥ ನಾಯ್ಡುಗೆ ಟಿಕೆಟ್ ಘೋಷಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದೇಗೌಡ (ಮಾವಿನಹಳ್ಳಿ ಸಿದ್ದೇಗೌಡ) ಅವರಿಗೆ ಮಣೆ ಹಾಕಲಾಗಿದ್ದು, ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ವಿರುದ್ಧ ಸೆಣಸಾಟ ನಡೆಸಲಿದ್ದಾರೆ.

ಬಾಗಲಕೋಟೆ ಜಿಲ್ಕೆಯ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರದಿಂದ ಎಚ್.ವೈ. ಮೇಟಿ, ಬಾದಾಮಿ ಕ್ಷೇತ್ರದಿಂದ ಭೀಮಸೇನ ಚಿಮ್ಮನಕಟ್ಟಿ, ಬೀಳಗಿ ಕ್ಷೇತ್ರದಿಂದ ಜೆ.ಟಿ. ಪಾಟೀಲ ಹಾಗೂ ಮುಧೋಳ ಕ್ಷೇತ್ರದಿಂದ ಅರ್. ಬಿ. ತಿಮ್ಮಾಪುರ ಅವರಿಗೆ ಟಿಕೆಟ್ ನೀಡಲಾಗಿದೆ.

ಗುರುಮಠಕಲ್ ಕ್ಷೇತ್ರಕ್ಕೆ ಬಾಬುರಾವ ಚಿಂಚನಸೂರ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.  ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. ಈಗಾಗಲೇ ಹುನಗುಂದ, ಜಮಖಂಡಿ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗಿದೆ. ತೇರದಾಳ  ಕ್ಷೇತ್ರಕ್ಕೆ ಉಮಾಶ್ರೀ ಸೇರಿದಂತೆ ಹಲವರು ಆಕಾಂಕ್ಷಿಗಳು ಇರುವುದರಿಂದ ಒಮ್ಮತ ಮೂಡದ್ದರಿಂದ ಘೋಷಣೆ ಮಾಡಿಲ್ಲ.

ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕೋಲಾರ ಕ್ಷೇತ್ರಕ್ಕೆ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್‌ನ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈ ಪಟ್ಟಿಯಲ್ಲಿ ಉತ್ತರ ಸಿಕ್ಕಿಲ್ಲ. ಶಿರಸಿ ಕ್ಷೇತ್ರಕ್ಕೆ ಭೀಮಣ್ಣ ನಾಯ್ಕ, ಯಲ್ಲಾಪುರ ಕ್ಷೇತ್ರಕ್ಕೆ ವಿ.ಎಸ್.ಪಾಟೀಲ್ ಅವರನ್ನು ಅಭ್ಯರ್ಥಿಯಾಗಿಸಲಾಗಿದೆ. ಪೈಪೋಟಿ ಹೆಚ್ಚಿರುವ ಕುಮಟಾ ಕ್ಷೇತ್ರಕ್ಕೆ ಟಿಕೆಟ್ ಅಂತಿಮಗೊಳಿಸಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror