ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಮೂವತ್ತೈದು ಲಕ್ಷರೂ. ವೆಚ್ಚದಲ್ಲಿ ಹತ್ತು ಲಕ್ಷ ಗಿಡಗಳನ್ನು ನಾಟಿ ಮಾಡಲಾಗುವುದು ಎಂದು ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದಡಂತಮಲೆರಕ್ಷಿತಾರಣ್ಯದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿಅರಣ್ಯ ಇಲಾಖೆ ಮತ್ತು ಸ್ಥಳೀಯ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾಡುಪ್ರಾಣಿಗಳಿಗಾಗಿ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ “ ಬಿತ್ತೋತ್ಸವ” ಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಂದರ ಪ್ರಕೃತಿ-ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಕೃತಿಯ ಸಮತೋಲನವನ್ನುಕಾಪಾಡುವ ಕಾಡು ಪ್ರಾಣಿಗಳನ್ನು ರಕ್ಷಿಸಬೇಕು. ಎಲ್ಲರೂ ಪರಿಸರ ಸಂರಕ್ಷಣೆಗೆ ದೃಢ ಸಂಕಲ್ಪ ಮಾಡಿ ಕೆಲಸ ಮಾಡಿದರೆಅದು ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆಯಾಗುತ್ತದೆ. ಮಣ್ಣಿನ ಸವಕಳಿಯಿಂದ ಅಪಾಯ ಉಂಟಾಗಲು ಅರಣ್ಯ ನಾಶವೇ ಕಾರಣವೆಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ ಶಾಸಕ ಹರೀಶ್ ಪೂಂಜ, ಹೆಗ್ಗಡೆಯವರ ಪರಿಸರ ಸಂರಕ್ಷಣೆಯ ಕಾಳಜಿ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿದರು.ಜಿಲ್ಲಾ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಲ್ಕರ್, ಉಪ ಸಂರಕ್ಷಣಾಧಿಕಾರಿ ಡಾ. ವೈ.ಕೆ. ದಿನೇಶ್ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಉಪಸ್ಥಿತರಿದ್ದರು.
ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ವಿ. ಕಾರ್ಯಪ್ಪ ಸ್ವಾಗತಿಸಿದರು. ಜೈವಂತ ಪಟಗಾರ್ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು. ಧರ್ಮಸ್ಥಳದ ನೇತೃತ್ವದಲ್ಲಿ ಈ ಬಾರಿ ಜೂನ್ 5 ರಂದು ರಾಜ್ಯದ 175 ತಾಲೂಕುಗಳ 875 ಸ್ಥಳಗಳಲ್ಲಿ 1,81,000 ಗಿಡಗಳನ್ನು ನೆಡಲಾಗಿದೆ.


