ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ | ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಇವರ ಹಿನ್ನೆಲೆ ಏನು..?

March 14, 2024
3:47 PM

ಹಲವು ದಿನಗಳ ಕುತೂಹಲಕ್ಕೆ ನಿನ್ನೆ ತೆರೆ ಬಿದ್ದಿದ್ದೆ. ಲೋಕಸಭೆ ಚುನಾವಣೆಯಲ್ಲಿ(Loka sabha Election) ದಕ್ಷಿಣ ಕನ್ನಡ(Dakshina Kannada) ಅಭ್ಯರ್ಥಿ(Candidate) ಯಾರಾಗುತ್ತಾರೆ ಅನ್ನುವ ಕಾತುರ ತುಳುನಾಡ(Tulunadu) ಜನರಲ್ಲಿ ಮನೆ ಮಾಡಿತ್ತು. ಹಾಲಿ ಸಂಸದ ನಳಿನ್‌ ಕಟೀಲ್‌(Mp Nalin Kateel) ವಿರುದ್ಧ ಹೆಚ್ಚಿನ ಜನರ ಅಭಿಮತ ಇದ್ದ ಕಾರಣ ಹೊಸ ಅಭ್ಯರ್ಥಿಯ ನಿರೀಕ್ಷೆಯಲ್ಲಿ ಕರಾವಳಿಗರಿದ್ರು. ಇದೀಗ ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ(BJP State secretory) ಕ್ಯಾಪ್ಟನ್ ಬೃಜೇಶ್ ಚೌಟ(Captain Brijesh Chouta) ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್(BJP High command) ಆಯ್ಕೆ ಮಾಡಿದೆ. ಇದು ಬಹುತೇಕ ದಕ್ಷಿಣ ಕನ್ನಡದ ಮತದಾರರಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ನಾಯಕನ ಭರವಸೆ ಮೂಡಿಸಿದೆ.

Advertisement
Advertisement

ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು.

ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು. ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು.

2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ. ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜಿಸುತ್ತಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror