ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಸೂಚನೆ ನೀಡಿದೆ.
ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್ ಪೈಪ್ ಕೂಡಾ ತೆಗೆದು ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.
ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.