ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಲಿ, ರೈತರಿಗೆ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆಯಲಿ ಹಾಗೂ ಜನರ ಬದುಕು ಸುಧಾರಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಅವರು ತಿಳಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ವಿಜಯೇಂದ್ರ, ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಮಹತ್ವದ ಚರ್ಚೆ ನಡೆಸಿ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ್ದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಯೆ ಲಕ್ಷಾಂತರ ಮಂದಿ ಪಕ್ಷದ ಕಾರ್ಯಕರ್ತರು ನೋವನ್ನು ಅನುಭವಿಸಿದ್ದಾರೆ. ಇದು ಬೇರೆ ಬೇರೆ ಚರ್ಚೆಗಳಿಗೆ ಗ್ರಾಸವಾಗಿತ್ತು. ತಾನು ಧರ್ಮಸ್ಥಳದ ಅಭಿಮಾನಿ ಭಕ್ತನಾಗಿದ್ದು, ಯಾವುದೇ ನೋವಾದಾಗ ಇಲ್ಲಿಗೆ ಬಂದು ಪರಿಹರಿಸಿಕೊಳ್ಳುತ್ತೇನೆ. ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ನಡೆಯಬೇಕು. ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದ್ದೆ, ಹಿರಿಯರ ಸಲಹೆಯಂತೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರ ಸಲಹೆಯಂತೆ ನಿರ್ಧಾರ ಕೈಬಿಟ್ಟು ದೇವರ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಮ್ಮ ಸಂಬಂಧದ ಕುರಿತು ನಡೆದ ಅಪಪ್ರಚಾರವನ್ನು ತಳ್ಳಿಹಾಕಿದ ವಿಜಯೇಂದ್ರ, ಯಾವುದೇ ಅಕ್ರಮ ಅಥವಾ ಅವ್ಯವಹಾರದ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯವಾಗಿ ನೀಡಬೇಕಾದ ಗೌರವವನ್ನು ಮಾತ್ರ ನೀಡಿದ್ದೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಜನರ ಸಮಸ್ಯೆಗಳು ಹೆಚ್ಚಾಗಿವೆ ಎಂದು ಆರೋಪಿಸಿದ ಅವರು, ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.
ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರು ಈಗ ಪಕ್ಷದಲ್ಲಿಯೂ ಇಲ್ಲ, ಶಾಸಕರೂ ಅಲ್ಲ. ಆದ್ದರಿಂದ ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದರು.
ಪಕ್ಷದ ವಿರುದ್ಧ ದ್ರೋಹ ಮಾಡಿದವರು ಯಾರು ಎಂಬುದು ಸದ್ಯದಲ್ಲೇ ಬಹಿರಂಗವಾಗಲಿದೆ ಎಂದು ಹೇಳಿದ ಅವರು, ತಾವು ಎಂದಿಗೂ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಡದಿ ರೈತರ ಭೂ ಸಮಸ್ಯೆ ಕುರಿತೂ ದೆಹಲಿಯಲ್ಲಿ ಚರ್ಚೆ ನಡೆದಿದ್ದು, ರೈತರನ್ನು ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ. ಅವರ ಪರ ಬಿಜೆಪಿ ಹೋರಾಟ ನಡೆಸಲಿದೆ ಎಂದು ಭರವಸೆ ನೀಡಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ವಿಜಯೇಂದ್ರ, ಸಿಎಜಿ ವರದಿಯ ಆಧಾರದ ಮೇಲೆ ಕ್ರಮ ಕೈಗೊಂಡು ಯೋಜನೆಯನ್ನು ಪಾರದರ್ಶಕವಾಗಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಎಸ್.ಟಿ. ಸೋಮಶೇಖರ್, ಡಿ.ವಿ. ಸದಾನಂದ ಗೌಡ ಹಾಗೂ ಸಿ.ಟಿ. ರವಿ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ಕೆಲಸಕ್ಕೆ ಮುಂದಾಗುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ ಗಂಟಿಹೊಳೆ, ಯಶಪಾಲ್ ಸುವರ್ಣ, ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಕೆ. ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
BJP Karnataka President B.Y. Vijayendra visited Dharmasthala, offered special prayers for good rainfall, better crop prices, and the welfare of farmers. Addressing the media, he dismissed allegations regarding cross-voting, criticized the Congress government over corruption and governance, reiterated support for farmers, and expressed confidence that the BJP would return to power in Karnataka.

