ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿದ್ದಾರೆ.
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು. ಅಕ್ರಮ ಗೋಹತ್ಯೆ ಮತ್ತು ಸಾಗಾಟ, ಮಾದಕ ಪದಾರ್ಥಗಳ ಸಾಗಾಟ ಅಥವಾ ಮಾರಾಟ, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಅರುಣ್ ಎಚ್ಚರಿಸಿದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ನಿನ್ನೆ ಜಿಲ್ಲೆಯ ಪ್ರಸಕ್ತ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.