ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಮಳೆಗಾಲದಲ್ಲಿ ಮುಳುಗಡೆಯಾದ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಂತಹ ಪ್ರದೇಶಗಳಿಗೆ ನಿರಂತರ ಭೇಟಿ ನೀಡಿ ನೀರಿನ ಹರಿವಿಗೆ ತಡೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು. ಮಾನವನ ನಿರ್ಲಕ್ಷದಿಂದ ಯಾವುದೇ ಪ್ರಾಣ ಹಾನಿ ಆಗದಂತೆ ಎಚ್ಚರಿಕೆ ವಹಿಸಬೇಕು. ಭೂಕುಸಿತ,ನೆರೆ ಸೇರಿದಂತೆ ಅಪಾಯಕಾರಿ ಸ್ಥಳಗಳನ್ನು ಮೊದಲೇ ಗುರುತಿಸಿ ರೆಡ್ ಅಲರ್ಟ್ ಸಮಯದಲ್ಲಿ ಅಲ್ಲಿನ ನಿವಾಸಿಗಳನ್ನು ತೆರವುಗೊಳಿಸಬೇಕು. ಪ್ರಾಕೃತಿಕ ದುರಂತ ನಡೆದರೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸಬೇಕು. ವಿಪತ್ತು ನಿರ್ವಹಣೆ ಕಾರ್ಯದಲ್ಲಿ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ನಿರ್ಲಕ್ಷ ತೋರುವ ಅಧಿಕಾರಿ ಸಿಬ್ಬಂದಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ಗ್ರಾಮಕರಣಿಕರು, ಪಿಡಿಒ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು. ಕಂಟ್ರೋಲ್ ರೂಂ 24 ಗಂಟೆಯೂ ಚಾಲನೆಯಲ್ಲಿರಬೇಕು ಎಂದು ಡಾ. ಆನಂದ್ ಕೆ ಸೂಚಿಸಿದರು.
ಮಳೆಗಾಲದಲ್ಲಿ ಮರ ಹಾಗೂ ವಿದ್ಯುತ್ ಲೈನ್ ಗಳಿಂದ ಯಾವುದೇ ಸಮಸ್ಯೆ ಅಥವಾ ಪ್ರಾಣ ಹಾನಿ ಆಗದಂತೆ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಕೂಡಲೇ ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ವಿದ್ಯುತ್ ಲೈನ್ ಗಳನ್ನು ತೆರವುಗೊಳಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ವಾರು ವಿಪತ್ತು ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಗ್ನಿಶಾಮಕ ಮತ್ತು ಮೆಸ್ಕಾಂ ಇಲಾಖೆಗಳು ಅಗತ್ಯ ಬಿದ್ದರೆ ಹೆಚ್ಚುವರಿ ವಾಹನ ಬಳಸಿಕೊಳ್ಳಬೇಕು. ಹೆದ್ದಾರಿಗಳಲ್ಲಿ ನೀರು ನಿಲ್ಲದಂತೆ ಎರಡು ಬದಿಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಶಾಲೆ ಮತ್ತು ಅಂಗನವಾಡಿಗಳ ಶಿಥಿಲಗೊಂಡಿರುವ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಬೇಕು. ಶಾಲೆಗಳಲ್ಲಿ ಮಕ್ಕಳು ವಿದ್ಯುತ್ ಸ್ವಿಚ್, ಕೇಬಲ್ಗಳನ್ನು ಮುಟ್ಟದಂತೆ ಶಿಕ್ಷಕರು ನಿಗಾ ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು. ಶಿಥಿಲಗೊಂಡಿರುವ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ಪಾಠ ಮಾಡಬಾರದು ಎಂದು ತಿಳಿಸಿದರು.
ತೀವ್ರ ಮಳೆ ಸಂದರ್ಭದಲ್ಲಿ ಮಲೆನಾಡಿನ ಜಲಪಾತಗಳಿಗೆ ಹಾಗೂ ಸಮುದ್ರ ಕಿನಾರೆಗೆ ಪ್ರವಾಸಿಗರು, ಸಾರ್ವಜನಿಕರು ತೆರಳದಂತೆ ನಿರ್ಬಂಧ ವಿಧಿಸಬೇಕು. ಅಗತ್ಯವಿದ್ದರೆ ಹೋಂ ಗಾರ್ಡ್ ಅಥವಾ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮೀನುಗಾರಿಕಾ ದೋಣಿಗಳು ನದಿಗಿಳಿಯದಂತೆ ಈಗಾಗಲೇ ಸೂಚಿಸಲಾಗಿದೆ. ಮೀನುಗಾರಿಕಾ ರಜಾ ಅವಧಿಯಲ್ಲಿ ಬೋಟ್ನಲ್ಲಿ ಕಾರ್ಮಿಕರು ಮಲಗದಂತೆ ಸೂಚಿಸಬೇಕು. ಸಣ್ಣ ನೀರಾವರಿ ಇಲಾಖೆಯ ಅಧೀನದ ಡ್ಯಾಮ್, ಕಿರು ಅಣೆಕಟ್ಟುಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕು. ಮರಳು ಹಳ್ಳಗಳಲ್ಲಿ ಮಳೆ ನೀರು ನಿಲ್ಲುವುದರಿಂದ ಮಕ್ಕಳು ಈಜಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಹಲವಾರು ಘಟನೆ ನಡೆದಿದೆ. ಗಣಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…