ಎಥೆನಾಲ್ ಉತ್ಪಾದನೆ ಕೃಷಿ ಕ್ಷೇತ್ರಕ್ಕೆ ದೊಡ್ಡ ಅವಕಾಶವಾಗಿದ್ದು, ಇದು ರೈತ ಕೇಂದ್ರಿತ ನೀತಿಯಾಗಿರುವುದರಿಂದ ಬೆಳೆಗೆ ನ್ಯಾಯಯುತ ಬೆಲೆ ನೇರವಾಗಿ ರೈತರ ಕೈ ಸೇರಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿಯ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ನಾಯಕರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು.
ಎಥೆನಾಲ್ ನೀತಿಗೆ ಸರ್ಕಾರದ ಬದ್ಧತೆ : ಎಥೆನಾಲ್ ನೀತಿಯು ಕೇವಲ ಪರ್ಯಾಯ ಇಂಧನ ಉತ್ಪಾದನೆಗೆ ಸೀಮಿತವಾಗಿಲ್ಲ. ಇದು ರೈತರ ಆದಾಯ ಹೆಚ್ಚಿಸುವ ಜೊತೆಗೆ ದೇಶದ ಇಂಧನ ಭದ್ರತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದರು.
ಬೆಳೆಗಳಿಗೆ ಉತ್ತಮ ಮಾರುಕಟ್ಟೆ ದೊರೆಯುವುದರಿಂದ ರೈತರಿಗೆ ಆರ್ಥಿಕ ಲಾಭವಾಗಲಿದ್ದು, ದೇಶದ ಇಂಧನ ಆಮದು ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ರೈತ ಸಂಘಟನೆಗಳು ನೀತಿ ಪಾಲುದಾರರು : ರೈತ ಸಂಘಟನೆಗಳನ್ನು ಸರ್ಕಾರದ ವಿರೋಧಿಗಳಾಗಿ ನೋಡುವ ಬದಲು, ಕೃಷಿ ನೀತಿಗಳ ರೂಪಿಕರಣದಲ್ಲಿ ಪ್ರಮುಖ ಪಾಲುದಾರರಾಗಿ ಸರ್ಕಾರ ಪರಿಗಣಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ರೈತರ ಅಭಿಪ್ರಾಯಗಳನ್ನು ಆಲಿಸಿ, ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ನೀತಿಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ರೈತ ಮುಖಂಡರು ಎಥೆನಾಲ್ ಉತ್ಪಾದನೆಗೆ ಬಲವಾದ ಬೆಂಬಲ ವ್ಯಕ್ತಪಡಿಸಿದರು. ಮೆಕ್ಕೆಜೋಳ, ಕಬ್ಬು ಸೇರಿದಂತೆ ಎಥೆನಾಲ್ ಉತ್ಪಾದನೆಗೆ ಬಳಸುವ ಯಾವುದೇ ಬೆಳೆಗೆ ರೈತರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Union Agriculture Minister Shivraj Singh Chouhan said ethanol presents a major opportunity for Indian agriculture by ensuring better prices for farmers while strengthening the country’s energy security. During a meeting with farmer leaders, he assured that the government would seriously consider their suggestions and emphasized that farmer organizations are policy partners, not opponents.

