Advertisement
ಅನುಕ್ರಮ

ನಂಬಿ ಕೆಟ್ಟವರಿಲ್ಲ… ನಂಬದೆ ಬದುಕಿಲ್ಲ ಜಗದೊಳಗೆ….!

Share

ನಂಬಿಕೆ ಎಂಬುದು ಕೇವಲ ಮೂರಕ್ಷರದ ಪದ.ಆದರೆ ಅದಿಲ್ಲದೆ ಜೀವನವಿಲ್ಲ.ಅದನ್ನೆಂದೂ ತುಲನೆ ಮಾಡಲಾಗದು. ಪ್ರಪಂಚದ ಎಲ್ಲಾ ಸಂಬಂಧಗಳು ,ವ್ಯವಹಾರಗಳು ನಿಂತಿರುವುದು ಈ ನಂಬಿಕೆ ಎಂಬ ಅಡಿಪಾಯದ ಮೇಲೆ. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ…. ಎಂಬ ದಾಸರವಾಣಿಯೇ ಇದೆ.

ಪ್ರಸ್ತುತ ದಿನಗಳಲ್ಲಿ ಈ ನಂಬಿಕೆ ಎಂಬ ಪದ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ.ನಾವು ಮೋಸಕ್ಕೊಳಗಾಗುವುದು ಯಾರಿಂದ ಎಂದರೆ ನಾವು ಯಾರ ಮೇಲೆ ಅತಿಯಾದ ನಂಬಿಕೆ ಇಡುತ್ತೇವೆಯೋ ಅವರಿಂದಲೇ.ನಮ್ಮ ಊರಿನ ಪ್ರಗತಿಯಾಗಬಹುದೆಂಬ ಅತಿಯಾದ ನಂಬಿಕೆಯಿಂದ ಒಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿ ಕಳುಹಿಸುತ್ತೇವೆ. ಆ ನಂಬಿಕೆ ಅವನ ಅವಧಿ ಮುಗಿಯುವವರೆಗೂ ನಂಬಿಕೆಯಾಗಿಯೇ ಉಳಿದು ಬಿಡುತ್ತದೆ. ಇದು ಕೇವಲ ಒಂದು ಉದಾಹರಣೆ ಅಷ್ಟೇ. ನಂಬಿಕೆಯ ಅಡಿಪಾಯ ಗಟ್ಟಿಯಾಗಿಲ್ಲದಿದ್ದರೆ ಯಾವ ಸಂಬಂಧವೂ ಉಳಿಯಾರವು. ಪ್ರೀತಿಸುವ ಮನಸುಗಳ ನಡುವೆ ಸುಳಿಯುವ ಸಣ್ಣ ಅನುಮಾನ ಸಂಬಂಧವನ್ನೇ ಮುರಿದುಬಿಡಬಹುದು. ಎಲ್ಲರ ಮೇಲೂ,ಎಲ್ಲಾ ವಿಷಯಗಳ ಮೇಲೂ ನಂಬಿಕೆ ಇಡುವುದು ಸಾಧ್ಯವಿಲ್ಲ.

ಏಕೆಂದರೆ ಮೋಸ ಎನ್ನುವ ಪದ ಹುಟ್ಟಿಕೊಂಡದ್ದೇ ನಂಬಿಕೆಯ ಕೊಂಡಿಯನ್ನು ಕಳಚಲು. ಜೀವನದಲ್ಲಿ ಎಷ್ಟು ಹುಡುಕಿದರೂ ಉತ್ತರ ಸಿಗದ ಪ್ರಶ್ನೆ ಎಂದರೆ ಯಾರನ್ನು ನಂಬಬೇಕು? ಎಂಬುದಾಗಿದೆ. ಯಾರನ್ನು ,ಯಾವ ಸಂದರ್ಭದಲ್ಲಿ ಎಷ್ಟು ನಂಬಬೇಕು ಎಂಬ ನಿರ್ಧಾರವನ್ನು ಕೈಗೊಳ್ಳುವುದು ತುಸು ಕಷ್ಟದ ಕೆಲಸವೇ ಆಗಿದೆ.

ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಕಡಿಮೆಯಾದಾಗ ಬಾಗಿಲು ಹುಟ್ಟಿಕೊಂಡಿತು.ಆ ನಂಬಿಕೆಗೆ ಕೊಡಲಿಯೇಟು ಬಿದ್ದಾಗ ಬೀಗ ಹುಟ್ಟಿಕೊಂಡಿತು.ನಂಬಿಕೆ ಎಂಬ ಪದವೇ ಕಳಚಿಕೊಂಡಾಗ ಸಿಸಿಟಿವಿ ಹುಟ್ಟಿಕೊಂಡಿತು. ಇದು ಅಕ್ಷರಶಃ ಸತ್ಯ. ಸಿಸಿಟಿವಿಯ ಆಚೆಗೂ ದ್ರೋಹಗಳಾಗುತ್ತಿರುವುದು ದುಸ್ತರ.

ಇಷ್ಟಾದರೂ ಈ ಜಗತ್ತು ನಿಂತಿರುವುದು ನಂಬಿಕೆಯ ಮೇಲೆಯೇ.ನಂಬಿಕೆ ಎಂದರೆ ಒಬ್ಬರಿಗೆ ಮತ್ತೊಬ್ಬರ ಮೇಲೆ ಇರೋ ವಿಶ್ವಾಸ. ಜೊತೆಗೆ ನಮಗೆ ನಮ್ಮ ಮೇಲಿರುವ ವಿಶ್ವಾಸ.ನಂಬಿಕೆಯನ್ನು ಗಳಿಸಿಕೊಳ್ಳುವುದು ಎಷ್ಟು ಕಷ್ಟವೋ ಅದನ್ನು ಉಳಿಸಿಕೊಳ್ಳುವುದು ಅಷ್ಟೇ ಕಷ್ಟ. ನಂಬಿಕೆ ಇಲ್ಲದೆ ಜೀವನ ನಡೆಸಲು ಸಾಧ್ಯವಿಲ್ಲ ಅದಕ್ಕೆಂದೇ ” ನಂಬದೆ ಬದುಕಿಲ್ಲ, ನಂಬಿ ಕೆಟ್ಟವರಿಲ್ಲ ನಂಬದೇ ವಿಧಿಯಿಲ್ಲ‌ ಜಗದೊಳಗೆ “ಎಂದು ಹೇಳುವುದು.ನಂಬಿಕೆಯಿಲ್ಲದೆ ಬದುಕಿನ ಒಂದು ಕ್ಷಣವನ್ನೂ ಕಳೆಯಲು ಸಾಧ್ಯವಿಲ್ಲ. ನಂಬಿಕೆಲ್ಲದಿದ್ದರೆ ಬದುಕೇ ಶೂನ್ಯ. ನಂಬಿಕೆಯಿಂದ ಎಲ್ಲವನ್ನೂ ಬದಲಾಯಿಸಲು ಸಾಧ್ಯವಿಲ್ಲದಿದ್ದರೂ ಅಸಾಧ್ಯವಾದುದನ್ನೂ ಸಾಧ್ಯವಾಗಿಸಬಹುದು.

ನಾವು ಸದಾ ಇತರರ ನಂಬಿಕೆ ಗಳಿಸಲು ಪ್ರಯತ್ನಿಸುತ್ತೇವೆ.ಇತರರ ಮೇಲೆಯೇ ಅತಿಯಾದ ನಂಬಿಕೆಯನ್ನು ಇಡುತ್ತೇವೆ. ಮೊದಲು ನಾವು ನಂಬಿಕೆಯ ಮೇಲೆ ನಂಬಿಕೆಯಿಡಬೇಕು.ನಮ್ಮ ಮೇಲೆ ನಂಬಿಕೆಯಿಡಬೇಕು. ನಾವು ಮಾಡುವ ಕಾರ್ಯದ ಮೇಲೆ ನಂಬಿಕೆಯಿಡಬೇಕು. ನಾವು ಇತರರನ್ನು ನಂಬಿಸುವ ಅಗತ್ಯವಿಲ್ಲ. ಸಮಯ ಬಂದಾಗ ಅವರಲ್ಲಿ‌ ನಂಬಿಕೆ ತಾನಾಗಿಯೇ ಹುಟ್ಟಿಕೊಳ್ಳುತ್ತದೆ.ನಮ್ಮ ಮನಸ್ಸನ್ನು ನಕರಾತ್ಮಕ ಚಿಂತನೆಗಳಿಗೆ ,ಭಾವನೆಗಳಿಗೆ ಅಡಿಯಾಳಾಗಿಸದೆ ಸಕರಾತ್ಮಕ ಧೋರಣೆಯೊಂದಿಗೆ ಬದುಕಿನ ಹೆಜ್ಜೆಗಳನ್ನಿಡಬೇಕು.

ನಂಬಿಕೆಗಳು ನಮ್ಮನ್ನು ಕಾಯುತ್ತದೆ.ಮತ್ತು ಬೆಳೆಸುತ್ತದೆ.ಮಹಾಭಾರತ ಯುದ್ದದಲ್ಲಿ ಅರ್ಜುನ ಕೌರವರನ್ನು ಗೆದ್ದಿದ್ದು ಕೃಷ್ಣ ತನ್ನೊಂದಿಗೆ ಇದ್ದಾನೆ ಎಂಬ ನಂಬಿಕೆಯಿಂದಲೇ. ಅಭಿಮನ್ಯು ಚಕ್ರವ್ಯೂಹ ಬೇಧಿಸಿದ್ದು ತನ್ನ ಸಾಮರ್ಥ್ಯದ ಮೇಲಿನ ನಂಬಿಕೆಯಿಂದ. ಇತರರ ಕೈಯಲ್ಲಿ ಅಳುವ ಮಗುವು ತಾಯಿಯ ಕೈಯಲ್ಲಿ ಅಳುನಿಲ್ಲಿಸಿ ನಗುವುದು ಅಮ್ಮನ ಮೇಲಿನ ನಂಬಿಕೆಯಿಂದಲೇ. ನಂಬಿಕೆಯಿಂದ ಉತ್ಸಾಹ ಹುಟ್ಟುತ್ತದೆ.

ಬದುಕು ಬದಲಾಗಬೇಕಾದರೆ ನಮ್ಮ ನಂಬಿಕೆಗಳು ಬದಲಾಗಬೇಕು. ಇಂದು ಅಕ್ಕಿ ನೆನೆ ಹಾಕಿ ಮಲಗುವುದು ನಾಳೆ ನಾವು ಏಳುತ್ತೇವೆ ಎಂಬ ನಂಬಿಕೆಯಿಂದ.ಇಂದು ಮುಳುಗಿದ ಸೂರ್ಯ ನಾಳೆ ಉದಯಿಸುತ್ತಾನೆ ಎಂಬ ನಂಬಿಕೆಯಿಂದಲೇ ನಾವು ಬದುಕುತ್ತಿದ್ದೇವೆ‌. ಸುಂದರವಾದ ನಾಳೆಗಳು ನಮಗಾಗಿ ಕಾಯುತ್ತಿವೆ. ಆ ಸುಂದರ ನಾಳೆಗಳನ್ನು ಕಾಣಲು ಇಂದಿನ ಕತ್ತಲನ್ನು ಎದುರಿಸುವ ಮನೋಭಾವ ನಮ್ಮಲ್ಲಿರಬೇಕಷ್ಟೆ!

# ಅಪೂರ್ವ ಚೇತನ್ ಪೆರಂದೋಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

3 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

3 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

8 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

8 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

8 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

23 hours ago