ದಾವಣಗೆರೆ ಜಿಲ್ಲೆಯಲ್ಲಿ ಸಗಟು ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಚಿಲ್ಲರೆ ಮಾರಾಟಗಾರರಿಗೆ ಪೂರೈಕೆ ಮಾಡದೆ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ 8 ಪರವಾನಿಗೆಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಂ.ಗಂಗಾಧರ್ ಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ತಪಾಸಣೆಯನ್ನು ಕಂದಾಯ ಅಧಿಕಾರಿಗಳು ಮತ್ತು ಕೃಷಿ ಅಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಜಂಟಿ ತಪಾಸಣೆ ನಡೆಸಿ, ನಿಯಮಗಳನ್ನು ಉಲ್ಲಂಘನೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯೂರಿಯಾ ಹೊರತುಪಡಿಸಿ, ಇತರೆ ರಸಗೊಬ್ಬರಗಳ ವ್ಯತ್ಯಯ ಉಂಟಾಗಿಲ್ಲ. ಹರಳು ಯೂರಿಯಾಗೆ ಹೆಚ್ಚಿನ ಬೇಡಿಕೆ ಬಂದಿದ್ದರಿಂದ ರೈತರಲ್ಲಿ ಆತಂಕವಾಗಿತ್ತೆ ವಿನಃ ಬೇಡಿಕೆಯಷ್ಟು ಪೂರೈಕೆ ಮತ್ತು ಹಂಚಿಕೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದ್ದಾರೆ. ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಸಾವಿರ ಮೆಟ್ರಿಕ್ ಟನ್ ಯೂರಿಯಾ ದಾಸ್ತಾನಿದ್ದು, ಇನ್ನು ಕೆಲವೇ ದಿನದಲ್ಲಿ1800 ಮೆಟ್ರಿಕ್ ಟನ್ ಯೂರಿಯಾ ಸರಬರಾಜಾಗಲಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿರುವ ಭೌತಿಕ ಹಾಗೂ ಆನ್ಲೈನ್ ದಾಸ್ತಾನು ಒಂದೆ ರೀತಿ ಇರುವಂತೆ ನೋಡಿಕೊಳ್ಳಬೇಕು. ಮಾರಾಟವಾದ ತಕ್ಷಣ ನಮೂದಿಸಿದರೆ ಸರಿಯಾದ ಲೆಕ್ಕ ಸಿಗುತ್ತದೆ. ರಸಗೊಬ್ಬರದ ಕೃತಕ ಕೊರತೆ ಉಂಟಾಗುವ ರೀತಿ ಸನ್ನಿವೇಶ ಸೃಷ್ಟಿಸುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

