ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಈ ಬಾರಿ 1414.8 ಮಿಲಿಮೀಟರ್ ಮಳೆಯಾಗಿದೆ. ಮಂಗಳೂರು ನಗರಕ್ಕೆ ನೀರುಣಿಸುವ ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್ ಅಣೆಕಟ್ಟೆಯ ನೀರಿನ ಮಟ್ಟ 4.50 ಮೀಟರ್ಗೆ ಏರಿಕೆಯಾಗಿದೆ. ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.
ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ 6 ಸಾಂತ್ವನ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ಒಂದು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಮಳೆಯ ಪರಿಣಾಮ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯೂ ಸಂಭವಿಸಿದೆ. ಏಪ್ರಿಲ್ 1 ರಿಂದ ಇದುವರೆಗೆ ಒಟ್ಟು 751 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 72 ಮನೆಗಳು ಸಂಪೂರ್ಣ ನಾಶವಾಗಿವೆ. ಪ್ರಾಕೃತಿಕ ವಿಕೋಪದಿಂದ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 35 ಜಾನುವಾರು ಪ್ರಾಣಹಾನಿ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ 4.93 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4123 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 115 ವಿದ್ಯುತ್ ಪರಿವರ್ತಕಗಳು ಹಾನಿಗೀಡಾಗಿವೆ. 19 ಸೇತುವೆಗಳಿಗೆ ಹಾನಿಯಾಗಿದೆ. 206 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.