ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಳೆಯ ಕಾರಣದಿಂದ ಹಾಸನ-ಮಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಗುಡ್ಡ ಕುಸಿದಿದ್ದು ಶಿರಾಡಿ ಘಾಟ್ ರಸ್ತೆ ಸಂಚಾರ ಈಗ ಸಂಕಷ್ಟವಾಗಿದೆ.
ವ್ಯಾಪಕ ಮಳೆಯಿಂದ ಕೆಆರ್ಎಸ್ ಅಣೆಕಟ್ಟು ಭರ್ತಿಯಾಗುತ್ತಲೇ ನದಿಗೆ ನೀರು ಬಿಡಲಾಗುತ್ತಿದ್ದು, 33 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೊಡಗಿನಿಂದ ಮಾತ್ರವಲ್ಲದೇ ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಿಂದಲೂ ಕೆ.ಆರ್.ಎಸ್.ಗೆ ನೀರು ಹರಿದು ಬರುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದು ನೀರಾವರಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀರಂಗಪಟ್ಟಣದ ಹಲವು ನದಿ ಪಾತ್ರಗಳ ಗ್ರಾಮಗಳಿಗೆ ಮುಳುಗಡೆಯ ಭೀತಿ ಎದುರಾಗಿದೆ. ಯಾರೂ ಸಹ ನದಿಗೆ ಇಳಿಯದಂತೆ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.