ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

July 3, 2025
11:38 PM

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತವೂ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಗ್ರಾಮೀಣ ಜನಜೀವನ ವ್ಯತ್ಯಯಗೊಂಡಿದ್ದು, ಗಾಳಿಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ಮಡಿಕೇರಿಯ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದಾಗಿ ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಹರಿವೂ ಹೆಚ್ಚಾಗಿದ್ದು ಪ್ರಸ್ತುತ 7500 ಕ್ಯೂಸೆಕ್ ಹರಿವಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಸತತ ಮಳೆಯ ಹಿನ್ನೆಲೆಯಲ್ಲಿ  ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸೇರಿದಂತೆ ಪದವಿ ಪೂರ್ವ ಕಾಲೇಜುವರೆಗೆ ರಜೆ ಘೋಷಿಸಲಾಗಿತ್ತು.

ಉತ್ತರಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಾಂಡೇಲಿ ಹಾಗೂ ಜೊಯಿಡಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ರಜೆ ಘೋಷಿಸಿದ್ದರು. ಸತತ ಮಳೆಗೆ  ಕಾರವಾರ ಹಾಗೂ ಶಿರಸಿಯಲ್ಲಿ ಭೂ ಕುಸಿತ ಸಂಭವಿಸಿದೆ. ಕಾರವಾರ ತಾಲೂಕಿನ ಬಾಳೆಮನೆ ಸಮೀಪ ಇಂದು ನಸುಕಿನ ಜಾವ ಭೂಕುಸಿತ ಉಂಟಾಗಿದ್ದು, ಕದ್ರಾದಿಂದ ಕೊಡಸಳ್ಳಿ ಅಣೆಕಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ ಹಾಗೂ ಸಾರ್ವಜನಿಕರ ಸಂಚಾರವನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದಾರೆ.

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಸಾಮಾನ್ಯ ಜನ ಜೀವನ ಬಾಧಿತಗೊಂಡಿದೆ. ಶೀತಗಾಳಿ, ರಭಸವಾದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಡ್ಡಿ ಉಂಟಾಗಿದೆ. ತರಕಾರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಸಂಭವಿಸಿದೆ. ಈ ಮಧ್ಯೆ ತುಂಗಾಭದ್ರಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದ್ದು, ಹರಿಹರ ತಾಲೂಕು  ಆಡಳಿತ ಮತ್ತು  ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಿವೆ. ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮತ್ತೆ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿದೆ.

ಯಾದಗಿರಿ ಜಿಲ್ಲೆಯ ಭೀಮಾ ಹಾಗೂ ಕೃಷ್ಣಾ ನದಿ ಸೇರಿದಂತೆ ಜಲಾಶಯಗಳ ವ್ಯಾಪ್ತಿಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಮಾನವ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಎಲ್ಲ ನೋಡಲ್ ಅಧಿಕಾರಿಗಳು, ಆಯಾ ತಹಶೀಲ್ದಾರ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಮಾನವ, ಜಾನುವಾರು ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror