Advertisement
Opinion

7 ನೇ ವೇತನ ಆಯೋಗದ ವರದಿ ಜಾರಿ | ಸರ್ಕಾರಕ್ಕೆ ವಾರ್ಷಿಕ ಸುಮಾರು 20208 ಕೋಟಿ ಹೆಚ್ಚುವರಿ ಒತ್ತಡ | ನೌಕರರೇ ಮನಸಾಕ್ಷಿ ಇಟ್ಟುಕೊಂಡು ಕೆಲಸ ಮಾಡಿ

Share

7 ನೇ ವೇತನ ಆಯೋಗದ(7th pay commission) ವರದಿ ಜಾರಿಯಾಗಿದೆ. ರಾಜ್ಯ ಸಚಿವ ಸಂಪುಟ(Cabinet of Ministers of State)ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರ(Govt employees payment) ಸಂಬಳ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 20208 ಕೋಟಿ( ಇಪ್ಪತ್ತು ಸಾವಿರದ ಇನ್ನೂರ ಎಂಟು ಕೋಟಿ ) ಹೆಚ್ಚುವರಿ ಒತ್ತಡ ಬೀಳಲಿದೆ….. ತುಂಬಾ ಸಂತೋಷ ಸಂಬಳ ಹೆಚ್ಚಾಗಿದ್ದಕ್ಕೆ, ಅಭಿನಂದನೆಗಳು ಸುಖವಾಗಿರಿ…. ಆದರೆ ಎಲ್ಲಾ ಸರ್ಕಾರದ ಸಂಬಳ ಪಡೆಯುವ ಅಧಿಕಾರಿಗಳೇ, ಇನ್ನು ಮುಂದಾದರು ನಿಮ್ಮ ಆತ್ಮವನ್ನು ಮುಟ್ಟಿಕೊಂಡು, ಹೃದಯವನ್ನು ತೆರೆದುಕೊಂಡು, ಮನಸ್ಸನ್ನು ಅಪ್ಪಿಕೊಂಡು, ಸ್ವಲ್ಪ ಸ್ವಲ್ಪ ಆತ್ಮಾವಲೋಕನ ಮಾಡಿಕೊಳ್ಳಿ…….

ಎಷ್ಟೊಂದು ಜನ ಎರಡು ಹೊತ್ತಿನ ಊಟ ಬಟ್ಟೆಗೆ ಅಥವಾ ತಾವು ಇಷ್ಟಪಟ್ಟ ಅಡುಗೆ ಮತ್ತು ತೊಡುಗೆ ತೊಡಲು ಎಷ್ಟೊಂದು ಶ್ರಮ ಪಡುತ್ತಾರೆಂದು. ಕೆಲವರಿಗೆ ಅದು ಸಿಗುವುದೇ ಇಲ್ಲ. ಸಣ್ಣಪುಟ್ಟ ಬೀದಿ ವ್ಯಾಪಾರ ಮಾಡುವ ಹಣ್ಣು ತರಕಾರಿ ಹೂವು ದಿನಸಿ ಔಷಧಿ ಮುಂತಾದ ಚಿಲ್ಲರೆ ಅಂಗಡಿಗಳ ಜನರು ಹತ್ತು/ಇಪ್ಪತ್ತು/ಮೂವತ್ತು ಸಾವಿರ ಲಾಭ ಮಾಡಲು ಎಷ್ಟೆಲ್ಲಾ ಕಷ್ಟಪಡುವರೆಂದು. ಕೆಲವೊಮ್ಮೆ ಲಾಭ, ಕೆಲವೊಮ್ಮೆ ನಷ್ಟ, ಅದರಿಂದಾಗಿ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುವರು, ಕೆಲವರು ಊರು ಬಿಡುವರು, ಮತ್ತೆ ಕೆಲವರು ಪರಾರಿಯಾಗುವರು……

ಎಷ್ಟೊಂದು ರೈತರು ಇಡೀ ವರ್ಷ ದುಡಿದರು ಲಕ್ಷ ರೂಪಾಯಿ ನೋಡಲು ಹರಸಾಹಸ ಪಡುವರು. ಕೆಲವರು ಇರುವ ಹಣವನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಗುವವರು. ಈಗಲೂ ಅನೇಕ ಮಹಿಳೆಯರು ತಮ್ಮ ದೇಹವನ್ನು ಮಾರಿಕೊಂಡು ಮಕ್ಕಳು ಮತ್ತು ಕುಟುಂಬದ ನಿರ್ವಹಣೆ ಮಾಡುವ ಪರಿಸ್ಥಿತಿ ಇದೆ. ಎಷ್ಟೋ ಜನ ಬಿಇ, ಎಂಬಿಎ, ಎಂಸಿಎ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಇತ್ಯಾದಿ ಶಿಕ್ಷಣ ಪಡೆದವರು ಸಹ 10/15/20 ಸಾವಿರಕ್ಕೆ ಯಾವುದೇ ಭದ್ರತೆ ಇಲ್ಲದೆ ಈಗಲೂ ದುಡಿಯುತ್ತಿದ್ದಾರೆ….

ಎಷ್ಟೊಂದು ಜನ ಮಕ್ಕಳ ಶಾಲಾ ಫೀಸು ಕಟ್ಟದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ, ಹಣಕಾಸಿನ ತೊಂದರೆಯಿಂದ ಪ್ರತಿದಿನ ನರಳುತ್ತಿರುತ್ತಾರೆ. ಕೆಲವರಂತೂ ಜೀವನಪೂರ್ತಿ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲೇ ಒದ್ದಾಡುತ್ತಿರುತ್ತಾರೆ. ಇಂತಹ ಸಂದರ್ಭ – ಸನ್ನಿವೇಶದಲ್ಲಿ ನೀವೆಷ್ಟು ಅದೃಷ್ಟವಂತರು ಯೋಚಿಸಿ.. ಪ್ರತಿ ತಿಂಗಳು ಹೆಚ್ಚು ಕಡಿಮೆ 30 ನೇ ತಾರೀಕು ನಿಮ್ಮ ಅಕೌಂಟಿಗೆ ಕನಿಷ್ಠವೆಂದರು ಐವತ್ತು ಸಾವಿರದಷ್ಟು ಹಣ ಕಡ್ಡಾಯವಾಗಿ ಜಮೆ ಆಗುತ್ತದೆ. ಇವತ್ತಿನ ಪರಿಸ್ಥಿತಿಯಲ್ಲಿ 50,000 ದಲ್ಲಿ ಒಂದು ಸರಳ ಬದುಕು ಬದುಕುವುದು ಏನು ಕಷ್ಟವಲ್ಲ. ಅನೇಕರಿಗೆ ಸಂಬಳ ಲಕ್ಷ ದಾಟುತ್ತದೆ……

ಹೌದು, ಬೆಲೆ ಏರಿಕೆ, ವಿದ್ಯಾಭ್ಯಾಸ, ಅನಾರೋಗ್ಯ, ಮದುವೆ ಮುಂತಾದ ಸಂದರ್ಭದಲ್ಲಿ ಒಂದಷ್ಟು ಹೆಚ್ಚು ಹಣ ಬೇಕಾಗುತ್ತದೆ. ಹೇಗಿದ್ದರೂ ಒಂದಷ್ಟು ಉಳಿತಾಯಗಳು ಸಹ ಇರುತ್ತದೆ. ಆದ್ದರಿಂದ ಇದೆಲ್ಲವನ್ನು ಗಮನಿಸಿ ಭ್ರಷ್ಟಾಚಾರವನ್ನು, ಲಂಚದ ಹಣ ಸ್ವೀಕರಿಸುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳಿ. ಲಂಚದ ಹಣದಿಂದ ಬದುಕುವುದು ಇನ್ನೊಬ್ಬರ ಹೇಸಿಗೆ, ಎಂಜಲು ತಿನ್ನುವುದು ಎಂದು ಮನಸ್ಸಿಗೆ ಅರ್ಥ ಮಾಡಿಸಿ, ಕುಟುಂಬಗಳಿಗೆ ಅರ್ಥ ಮಾಡಿಸಿ. ಈ ಭ್ರಷ್ಟ ಹಣದಿಂದ ನನ್ನ ಮಕ್ಕಳನ್ನು ನಮ್ಮ ತಂದೆ ತಾಯಿಯನ್ನು ಸಾಕುವುದಿಲ್ಲ ಎಂದು ಅಂತರ್ಯದಲ್ಲಿ ಪ್ರತಿಜ್ಞೆ ಮಾಡಿಕೊಳ್ಳಿ……

ಬೇಕು ಬೇಕು ಎನ್ನುವ ಮನಸ್ಥಿತಿಯಿಂದ ಸಾಕು ಸಾಕು ಎನ್ನುವ ಮನಸ್ಥಿತಿಗೆ ಬನ್ನಿರಿ. ನಿಮಗೆ ಸಿಗುವ ಸಂಬಳಕ್ಕೆ ತೃಪ್ತರಾದ ನಂತರ ನೀವು ಮಾಡಬೇಕಾದ ಕೆಲಸ ಜನರ ಪ್ರಾಮಾಣಿಕ ಮತ್ತು ದಕ್ಷ ಸೇವೆ. ಲಂಚ ಸ್ವೀಕರಿಸಿಲ್ಲ ಎಂದ ಮಾತ್ರಕ್ಕೆ ನೀವು ಪ್ರಾಮಾಣಿಕರೆಂದು ಸೋಮಾರಿಗಳಾಗಬಾರದು. ಎಷ್ಟು ಸಾಧ್ಯವೋ ಅಷ್ಟು ನಿಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಜನರಿಗೆ ಸೇವೆ ಸಲ್ಲಿಸಿ. ಅದರಲ್ಲೂ ಲಂಚವಿಲ್ಲದೆ ಸಾರ್ವಜನಿಕ ಕೆಲಸಗಳು ಆದಾಗ ಆ ವ್ಯಕ್ತಿಗಳು ನಿಮ್ಮ ಬಗ್ಗೆ ತೋರುವ ಅಭಿಮಾನ, ಪ್ರೀತಿ, ವಿಶ್ವಾಸ, ಕೃತಜ್ಞತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿರಿಸಿಕೊಳ್ಳಿ…..

ಮಾನವೀಯ ಸಂಬಂಧಗಳು ಈ ಸಮಾಜದಲ್ಲಿ ಉಳಿಯಲು ಬಹು ಮುಖ್ಯ ಜವಾಬ್ದಾರಿ ಇರುವುದು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ. ಅವರೇನಾದರೂ ಒಂದಷ್ಟು ಪ್ರಾಮಾಣಿಕತೆ ಮತ್ತು ದಕ್ಷತೆ ತೋರಿಸಿದ್ದೇ ಆದರೆ ಖಂಡಿತವಾಗಲು ಈ ಸಮಾಜದ ಮುಂದಿನ ಭವಿಷ್ಯ ಉತ್ತಮ ಮಟ್ಟದಲ್ಲಿರುತ್ತೆ. ನಮ್ಮ ಮಕ್ಕಳು ಸಹ ನೆಮ್ಮದಿಯಿಂದ ಜೀವನ ಮಾಡುವ ಸಾಧ್ಯತೆ ಇದೆ…..

ರಾಜ್ಯ ಬೊಕ್ಕಸದ ಸುಮಾರು ಶೇಕಡ 50% ರಷ್ಟು ಹಣ ಹೆಚ್ಚು ಕಡಿಮೆ ಶಾಸಕಾಂಗ, ಕಾರ್ಯಂಗ ಮತ್ತು ನ್ಯಾಯಾಂಗವೇ ಉಪಯೋಗಿಸುತ್ತದೆ. ಅದಕ್ಕೆ ತಕ್ಕ ಸೇವೆಯನ್ನು ಸಲ್ಲಿಸಿ. ನೀವು ಒಳ್ಳೆಯವರಾದರೆ ಸಹಜವಾಗಿಯೇ ಇಡೀ ಸಮಾಜ ನಿಮ್ಮನ್ನು ಅನುಸರಿಸುತ್ತದೆ‌. ಜನರನ್ನು ಅನಾವಶ್ಯಕವಾಗಿ ಅಲೆದಾಡಿಸಬೇಡಿ. ಮುಂದೆ ಎಂಟನೇ ವೇತನ ಆಯೋಗ ನಿಮಗಾಗಿ ಎಷ್ಟೇ ಹಣ ನೀಡಿದರು ಜನ ಪ್ರಶ್ನಿಸುವುದಿಲ್ಲ. ಏಕೆಂದರೆ ನೀವು ಅವರ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತೀರಿ ಎನ್ನುವ ಭರವಸೆ ಮೂಡಿರುತ್ತದೆ……

ಸಾಧ್ಯವಾದರೆ ಇದನ್ನು ಯಾರಾದರೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ತಲುಪಿಸಿ. ಅವರು ಇನ್ನೊಂದಿಷ್ಟು ಒಳ್ಳೆಯ ಅಂಶಗಳನ್ನು ಸೇರಿಸಿ ಇಡೀ ರಾಜ್ಯದ ಸರ್ಕಾರಿ ನೌಕರರಿಗೆ ಒಂದು ಸುತ್ತೋಲೆ ಹೊರಡಿಸಿ ಇನ್ನು ಮುಂದೆ ದಕ್ಷತೆ, ಪ್ರಾಮಾಣಿಕ ಸೇವೆಗೆ ಹೆಚ್ಚು ಮಹತ್ವ ನೀಡಲಿ. ಭ್ರಷ್ಟಾಚಾರವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಲಿ. ಇದು ಈ ಸಮಾಜಕ್ಕೆ, ಈ ದೇಶಕ್ಕೆ, ಈ ರಾಜ್ಯಕ್ಕೆ ನಾವು ಕೊಡಬಹುದಾದ ಒಂದು ಸಣ್ಣ ಕೊಡುಗೆ ಎನ್ನುವ ಮನಃಪರಿವರ್ತನೆ ಸರ್ಕಾರಿ ಅಧಿಕಾರಿಗಳಲ್ಲಿ ಆಗಲಿ ಎಂದು ಆಶಿಸುತ್ತಾ……

ಬರಹ :
ವಿವೇಕಾನಂದ. ಎಚ್‌. ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago