ತೆಂಗು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ತಿಳಿಸಿದ ಅವರು, ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ ಅತಿ ಹೆಚ್ಚು ತೆಂಗು ಉತ್ಪಾದನೆ ಮಾಡುವ ದೇಶವಾಗಿದೆ. ತೆಂಗು ಬೆಳೆಗೆ ಸಂಬಂಧಿಸಿದಂತೆ ಅನೇಕ ರೋಗ ಬಾಧೆಗಳು ಹೆಚ್ಚಾಗಿದ್ದು, ಇವುಗಳನ್ನು ನಿಯಂತ್ರಿಸಲು ಹಲವು ಸಂಶೋಧನೆಗಳನ್ನು ಕೈಗೊಳ್ಳಲಾಗಿದೆ. ತೆಂಗು ಅಭಿವೃದ್ಧಿ ಮಂಡಳಿಯ ವಿವಿಧ ಕೃಷಿ ವಿಶ್ವವಿದ್ಯಾಲಯಗಳು, ಕೀಟ ಸಂಶೋಧನಾ ಮಂಡಳಿ ಸೇರಿದಂತೆ ಹಲವು ಇತರ ಸಂಸ್ಥೆಗಳ ಜತೆಗೂಡಿ ರೋಗಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರೋಗ ನಿರೋಧಕ ಶಕ್ತಿ ಹೊಂದಿರುವ ತೆಂಗು ಬೆಳೆಗೆ ಆದ್ಯತೆ ನೀಡಲಾಗಿದೆ. ತೆಂಗು ಬೆಳೆ ಪ್ರದೇಶದ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗಿದ್ದು, ವಿಭಿನ್ನ ಯೋಜನೆಗಳ ಮೂಲಕ ಗುಣಮಟ್ಟದ ತೆಂಗು ಉತ್ಪಾದನೆ, ಕ್ಷೇತ್ರಾಭಿವೃದ್ಧಿ, ರೋಗ ನಿಯಂತ್ರಣ, ಕೌಶಲ ವಿಕಾಸಕ್ಕೆ ಹಣಕಾಸು ನೆರವು ನೀಡಲಾಗುತ್ತಿದೆ. ತೆಂಗಿನ ಮರಕ್ಕೆ ಉಂಟಾಗುವ ಕೀಟಬಾಧೆ ನಿಯಂತ್ರಣಕ್ಕೆ ಕೇರಳ ವಿಶ್ವವಿದ್ಯಾಲಯ ಹೊಸ ತಳಿ ಅಭಿವೃದ್ಧಿ ಪಡಿಸಿದೆ.ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಕೀಟ ಸಮಸ್ಯೆ ನಿಭಾಯಿಸಲು ರೈತರಿಗೆ 50 ಕೋಟಿ ರೂಪಾಯಿ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರಿಗೆ ಹೆಚ್ಚು ಲಾಭ ದೊರೆಯುವಂತಾಗಲು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ನೀಡಲಾಗುತ್ತಿದ್ದು, ಪ್ರಸ್ತುತ ದರ ಕ್ವಿಂಟಾಲ್ ಗೆ 11 ಸಾವಿರ ರೂಪಾಯಿಗೂ ಅಧಿಕ ಮೌಲ್ಯವನ್ನು ನಿಗದಿಪಡಿಸಲಾಗಿದೆ. ಹಿಂದಿನ 3 ವರ್ಷಗಳಲ್ಲಿ 2 ಲಕ್ಷದ 75 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದೆ ಎಂದು ವಿವರಿಸಿದರು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೆಲವು ರಾಜ್ಯಗಳು ಜಾರಿಗೊಳಿಸಿಲ್ಲ. ರೈತರಿಗೆ ಯಾವುದೇ ರೀತಿಯಲ್ಲಿ ನಷ್ಟವಾದರೆ ಅದನ್ನು ಭರಿಸಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿಲುವಾಗಿದೆ. ಮುಂದಿನ ದಿನಗಳಲ್ಲಿ ಋತುಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ರಾಜ್ಯಗಳ ಪ್ರಸ್ತಾವನೆ ಆಧರಿಸಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ಇ-ನಾಮ್ ವೇದಿಕೆಗೆ ಕೃಷಿ ಮಾರುಕಟ್ಟೆಗಳನ್ನು ಸೇರ್ಪಡೆಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 23 ರಾಜ್ಯಗಳ ಸಾವಿರಕ್ಕೂ ಅಧಿಕ ಎಪಿಎಂಸಿಗಳು ಸೇರ್ಪಡೆಯಾಗಿವೆ. ಇ-ನಾಮ್ ಮೂಲಕ 4 ಲಕ್ಷ ಕೋಟಿ ರೂಪಾಯಿ ವಹಿವಾಟು ನಡೆಸಲಾಗಿದೆ. 1 ಕೋಟಿಗೂ ಅಧಿಕ ರೈತರು ಇ-ನಾಮ್ ನಲ್ಲಿ ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…