ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಕೋರ್ಟ್ ತಡೆ ನೀಡಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಕುರಿತು ಕಾಂಗ್ರೆಸ್ ನಿಲುವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 75 ಕ್ಕೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ, ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ.
ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದಿದ್ದಾರೆ.
ಗೃಹ ಸಚಿವ ಅಮಿತ್ ಶಾ ವಿರುದ್ಧ ಹಿರಿಯ್ದಿರುವ ಸಿದ್ಧರಾಮಯ್ಯ, ಗೃಹ ಸಚಿವ ಅಮಿತ್ ಶಾ ಅವರೇ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡಲು ಮುಸ್ಲಿಮರ ಮೀಸಲಾತಿಯನ್ನು ಇಲ್ಲವೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗ-ಲಿಂಗಾಯತರ ಮೀಸಲಾತಿ ಕಡಿತಗೊಳಿಸಬೇಕಾಗಿಲ್ಲ.
ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಈ ವಿವಾದವನ್ನು ಸುಲಭದಲ್ಲಿ ಬಗೆಹರಿಸಬಹುದು. ಬಿಜೆಪಿಗೆ ಒಕ್ಕಲಿಗರು-ಲಿಂಗಾಯತರ ಮೀಸಲಾತಿ ಹೆಚ್ಚಿಸುವ ಸದುದ್ದೇಶ ಇರಲಿಲ್ಲ. ಮುಸ್ಲಿಮರ ಮೀಸಲಾತಿಯನ್ನು ರದ್ದು ಮಾಡುವ ದುರುದ್ದೇಶವಷ್ಟೇ ಇತ್ತು. ಇದನ್ನು ಅರ್ಥಮಾಡಿಕೊಂಡೇ ಸುಪ್ರೀಂ ಕೋರ್ಟ್ ಸರ್ಕಾರದ ಮೀಸಲಾತಿ ನೀತಿಗೆ ತಡೆಯಾಜ್ಞೆ ನೀಡಿರುವುದು ಎಂದು ಕಿಡಿಕಾರಿದ್ದಾರೆ.
ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ.
ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ಗೆ ಸೇರಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…