ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಪರಿಣಾಮ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕುದುರೆಮುಖ, ಕಿಗ್ಗಾ, ಕೆರೆಕಟ್ಟೆ ಹಾಗೂ ಕಳಸ ವ್ಯಾಪ್ತಿಯಲ್ಲಿ ನಿರಂತರ ಮಳೆಯ ಪರಿಣಾಮ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದೆ.
ಶೃಂಗೇರಿ ಶ್ರೀ ಶಾರದಾ ಪೀಠದ ಸಮೀಪ ತುಂಗಾ ನದಿ ತಟದಲ್ಲಿರುವ ಪ್ರಸಿದ್ಧ ಕಪ್ಪೆ ಶಂಕರ ಗುಡಿ ಸಂಪೂರ್ಣ ಜಲಾವೃತಗೊಂಡಿತ್ತು. ಮತ್ತೊಂದೆಡೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಾಂಬಳೆ ಗ್ರಾಮದ ಬಳಿ ಸೇತುವೆ ಮುಳುಗಡೆಯಾಗಿದ್ದು, ಕಳಸ–ಕಾರ್ಕಳ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ನದಿಗಳಿಗೆ ಇಳಿಯದಂತೆ, ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳದಂತೆ ಹಾಗೂ ಭೂಕುಸಿತ ಸಂಭವಿಸಬಹುದಾದ ಗುಡ್ಡ ಪ್ರದೇಶಗಳಿಂದ ದೂರವಿರುವಂತೆ ಸೂಚಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಇನ್ನೊಂದೆಡೆ ಕೊಡಗು ಜಿಲ್ಲೆಯ ಮಡಿಕೇರಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೂ ತೊಂದರೆಯಾಗಿದೆ. ಕಾವೇರಿಯ ಉಗಮತಾಣವಾದ ತಲಕಾವೇರಿ ಹಾಗೂ ಭಾಗಮಂಡಲಗಳಲ್ಲಿಯೂ ಧಾರಾಕಾರ ಮಳೆ ಬೀಳುತ್ತಿದೆ. ಭಾಗಮಂಡಲದಲ್ಲಿ ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಪ್ರಸಿದ್ಧ ತ್ರಿವೇಣಿ ಸಂಗಮ ಸ್ಥಾನ ಜಲಾವೃತಗೊಂಡಿದೆ. ಕಾವೇರಿ ನದಿ ನೀರು ಭಾಗಮಂಡಲದ ಸುತ್ತಮುತ್ತಲಿನ ಹೊಲಗದ್ದೆಗಳಿಗೆ ನುಗ್ಗಿದೆ.
ಇನ್ನೊಂದೆಡೆ, ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಹರಿವು ನಿರಂತರವಾಗಿ ಹೆಚ್ಚುತ್ತಲೇ ಇದೆ. 2,859 ಅಡಿ ಗರಿಷ್ಠ ಮಟ್ಟ ಹೊಂದಿರುವ ಹಾರಂಗಿ ಅಣೆಕಟ್ಟೆಯಲ್ಲಿ ಪ್ರಸ್ತುತ 2,857.83 ಅಡಿ నీರು ಸಂಗ್ರಹವಾಗಿದೆ. ಜಲಾಶಯಕ್ಕೆ 10,000 ಕ್ಯೂಸೆಕ್ನಷ್ಟು ನೀರಿನ ಹರಿವಿದ್ದು, ಜಲಾಶಯದ ಸುರಕ್ಷತೆಯ ಹಿತದೃಷ್ಟಿಯಿಂದ ನದಿಗೆ 11,000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಬಿರುಸು ಪಡೆದುಕೊಂಡಿದ್ದು, ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಜಿರೆ–ಬೆಳ್ತಂಗಡಿ ಮಾರ್ಗದ ಕೆಲ ಭಾಗಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಿತ್ತು.
ಹವಾಮಾನ ಇಲಾಖೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೂ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಮುನ್ನೆಚ್ಚರಿಕೆ ನೀಡಿದ್ದು, ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.
Heavy rainfall continues across Karnataka, severely affecting Chikkamagaluru, Kodagu and Dakshina Kannada districts. Rivers Tunga, Bhadra and Netravathi have crossed danger levels, inundating bridges and roads. The Kalasa–Karkala road has been closed due to flooding, while the famous Kappe Shankara shrine near Sringeri is submerged. Authorities have advised people to avoid rivers, flooded areas and landslide-prone regions as more heavy rainfall is forecast.

