ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರತಿ ಕುಟುಂಬಕ್ಕೂ 25 ದಿನಕ್ಕೊಂದು ಗೃಹಬಳಕೆಯ ಸಿಲಿಂಡರ್ ಪೂರೈಸಲಾಗುತ್ತಿದೆ, ಹೀಗಾಗಿ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಅಡುಗೆ ಅನಿಲ ಕೊರತೆಯ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ಡಾ. ಎಚ್.ಡಿ. ರಂಗನಾಥ್, ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸರಾಗವಾಗಿ ನಡೆಯದೆ ಕೆಲವು ಹೋಟೆಲ್ ಹಾಗೂ ರೆಸ್ಟೋರೆಂಟ್ಗಳು ಮುಚ್ಚುವ ಪರಿಸ್ಥಿತಿ ಉಂಟಾಗಿದೆ ಎಂದು ಸದನದ ಗಮನಕ್ಕೆ ತಂದರು. ಕೆಲವರು ವಾಣಿಜ್ಯ ಬಳಕೆಯ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಕೂಡ ಆತಂಕ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಡುಗೆ ಅನಿಲ ಪೂರೈಸುವ ಬಿಪಿಸಿಎಲ್, ಎಚ್ಪಿಸಿಎಲ್ ಹಾಗೂ ಇಂಡಿಯನ್ ಆಯಿಲ್ ಕಂಪನಿಗಳ ಮುಖ್ಯಸ್ಥರೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಗೃಹಬಳಕೆಯ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದರು.
ಸದನದಲ್ಲಿ ಈ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಗೊಂದಲದ ವಾತಾವರಣವೂ ನಿರ್ಮಾಣವಾಯಿತು. ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೈಲ ಪೂರೈಕೆ ಕಂಪನಿಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳ ಮಾತಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಪ್ರತಿಕ್ರಿಯಿಸಿ, ಇರಾನ್–ಇಸ್ರೇಲ್ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಪೂರೈಕೆ ಸಮಸ್ಯೆಗಳು ಉಂಟಾಗುತ್ತಿರುವುದಾಗಿ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿದರು.
ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಚಿವ ಮುನಿಯಪ್ಪ, ಗ್ರಾಹಕರು ಅನಿಲವನ್ನು ಮಿತವಾಗಿ ಬಳಸಬೇಕು ಹಾಗೂ ಅಕ್ರಮ ದಾಸ್ತಾನು ಮಾಡಬಾರದು ಎಂದು ಮನವಿ ಮಾಡಿದರು. ಆಸ್ಪತ್ರೆಗಳು ಮತ್ತು ಹಾಸ್ಟೆಲ್ಗಳಿಗೆ ಆದ್ಯತೆಯ ಮೇಲೆ ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ. ಹೋಟೆಲ್ ಹಾಗೂ ಕಲ್ಯಾಣ ಮಂಟಪ ಮಾಲೀಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Karnataka Food and Civil Supplies Minister K.H. Muniyappa has assured that there is no shortage of domestic LPG supply in the state. He stated that one cylinder will be supplied to each household every 25 days and urged consumers to use gas judiciously while avoiding illegal hoarding.

