ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ವಾತಾವರಣ ಮುಂದುವರಿದಿದ್ದರೂ, ಆಗಸ್ಟ್ 3 ರಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ. 02.08.2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಕ್ರಮೇಣ ಇಳಿಮುಖವಾಗಲಿದ್ದು, ರೈತರಿಗೆ ತೋಟಗಾರಿಕಾ ಬೆಳೆಗಳಲ್ಲಿ ಔಷಧಿ ಸಿಂಪಡಿಸಲು ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಎಲ್ಲೆಲ್ಲಿ ಮಳೆ? : ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಗಾಳಿ ಸಹಿತ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳು ಹಾಗೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.
ಪ್ರಸ್ತುತ ಮುನ್ಸೂಚನೆಯಂತೆ ಆಗಸ್ಟ್ 3ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಮಳೆ ಸಂಪೂರ್ಣ ನಿಲ್ಲುವ ಸಾಧ್ಯತೆ ಕಡಿಮೆ. ಈ ಅವಧಿಯನ್ನು ಬಳಸಿಕೊಂಡು ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಅಗತ್ಯ ಔಷಧಿ ಸಿಂಪಡಿಸುವುದು ಸೂಕ್ತ.
ಮಲೆನಾಡಿನಲ್ಲಿ ಕೊಡಗಿಗೆ ಹೆಚ್ಚು ಮಳೆ : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗಲಿದೆ. ಆಗಸ್ಟ್ 3ರಿಂದ ಈ ಭಾಗಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ತೋಟಗಾರಿಕಾ ಬೆಳೆಗಳ ನಿರ್ವಹಣಾ ಕಾರ್ಯಗಳಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಮೂರು ದಿನ ಮಳೆ ವಿರಾಮ : ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಆಗಸ್ಟ್ 5ರಿಂದ ಮತ್ತೆ ಅಲ್ಲಲ್ಲಿ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.
ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ : ದಾವಣಗೆರೆ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಈ ಭಾಗದಲ್ಲೂ ಮುಂದಿನ ಎರಡು ದಿನಗಳ ಕಾಲ ಮಳೆ ಕಡಿಮೆಯಾಗಲಿದ್ದು, ಆಗಸ್ಟ್ 4ರಿಂದ ಮತ್ತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಸುಳ್ಯ-ಕಡಬ, ಕೊಡಗಿನಲ್ಲಿ ಮಳೆ ಹೆಚ್ಚಲು ಇದೇ ಕಾರಣ : ಪ್ರಸ್ತುತ ವಾಯವ್ಯದಿಂದ ಆಗ್ನೇಯಕ್ಕೆ ಗಾಳಿಯ ದಿಕ್ಕು ಬೀಸುತ್ತಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಗಾಳಿಯ ದಿಕ್ಕು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ರಾಜ್ಯದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದೆ. ಗುಜರಾತ್ ತಲುಪಿರುವ ವಾಯುಭಾರ ಕುಸಿತವು ಇವತ್ತು ಸಂಜೆ ಅಥವಾ ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.
ವಾಯುಭಾರ ಕುಸಿತ ಶಿಥಿಲ, ಹೊಸ ವ್ಯವಸ್ಥೆಯ ಮೇಲೆ ಗಮನ: ಗುಜರಾತ್ ತಲುಪಿರುವ ವಾಯುಭಾರ ಕುಸಿತವು ಶನಿವಾರ ಸಂಜೆ ಅಥವಾ ರಾತ್ರಿ ವೇಳೆಗೆ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮವಾಗಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಆಗಸ್ಟ್ 4ರಂದು ಶ್ರೀಲಂಕಾದ ಪೂರ್ವ ಕರಾವಳಿಯ ಸಮೀಪ ಮಧ್ಯಮ ಸ್ತರದಲ್ಲಿ ಹೊಸ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಕಂಡುಬಂದಿದ್ದು, ಅದರ ತೀವ್ರತೆ ಮತ್ತು ಸಾಗುವ ಹಾದಿಯ ಮೇಲೆ ಮುಂದಿನ ದಿನಗಳ ಮಳೆಯ ಪ್ರಮಾಣ ನಿರ್ಧಾರವಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Rain is expected to continue intermittently across coastal and Malnad Karnataka until August 2, with a noticeable decline from August 3. Kodagu and Kasaragod are likely to receive better rainfall, while Sullia and Kadaba may see light showers. The expected dry spell could provide an opportunity for arecanut growers to undertake plant protection measures. A new mid-level low-pressure system may develop near Sri Lanka’s east coast on August 4.

