ದೇವಸ್ಥಾನದ ಆವರಣದೊಳಗೆ ವ್ಯಕ್ತಿಯೊಬ್ಬ ಸಾಕು ನಾಯಿಯನ್ನು ಕರೆದುಕೊಂಡು ಹೋಗಿ ವಿಗ್ರಹಕ್ಕೆ ನಾಯಿಯನ್ನು ಸ್ಪರ್ಶಿಸಿ ಪ್ರಾರ್ಥನೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿಯ ಬಂಧನಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ಅಗರ್ವಾಲ್ ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯ ದೂರಿನ ಮೇರೆಗೆ, ದೇವಾಲಯದ ಆವರಣದಲ್ಲಿ ನಾಯಿಯೊಂದಿಗೆ ತಿರುಗಾಡುತ್ತಿದ್ದ ಮತ್ತು ನಾಯಿಯೊಂದಿಗೆ ನಂದಿ ದೇವರ ವಿಗ್ರಹವನ್ನು ಸ್ಪರ್ಶಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಗರ್ವಾಲ್ ಹೇಳಿದರು. ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವನ್ನು ಗಮನಿಸಿ ದೂರು ನೀಡಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ದೇಗುಲ ಸಮಿತಿ ಅಧ್ಯಕ್ಷ ಅಜೇಂದ್ರ ಅವರು ದೇವಸ್ಥಾನ ಸಮಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇಂತಹ ಅನಗತ್ಯ ಚಟುವಟಿಕೆಗಳನ್ನು ನಿಲ್ಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.