Advertisement
ಅನುಕ್ರಮ

ಕೃಷಿಮಾತು | ಕೃಷಿಯಲ್ಲಿ “ವಿಷ” ವಾದ | ನಮ್ಮ ಕಣ್ಣೆದುರಲ್ಲೇ ನಾಶವಾದ ಜೀವ ಸಂತಾನಗಳು ಎಷ್ಟು ? | ಕೃಷಿಕ ಎ ಪಿ ಸದಾಶಿವ ತೆರೆದಿಟ್ಟ ಸತ್ಯ |

Share

ಕೆಲದಿನಗಳ ಹಿಂದೆ ಸಂಜೆಯ ಹೊತ್ತು ಗದ್ದೆಯ ಬದಿಗೆ ಹೋಗಿದ್ದೆ. ಸ್ಥಳೀಯರೊಬ್ಬರು ಹಡಿಲು ಬಿದ್ದ ಗದ್ದೆಯನ್ನು ವೀಕ್ಷಿಸುತ್ತಿದ್ದರು. ನನ್ನನ್ನು ಕಂಡೊಡನೆ ನಮಸ್ಕಾರಗಳ ವಿನಿಮಯದೊಂದಿಗೆ, ಈ ವರ್ಷ ಗದ್ದೆ ಬೇಸಾಯ ಮಾಡಿದರೆ ಹೇಗೆ?ಎಂದು ಆಲೋಚಿಸುತ್ತಿದ್ದೇನೆ ಅಂದರು. ಮನೆಯಲ್ಲಿ ಕುಳಿತು ಕುಳಿತು ಬೇಸರವಾಗುತ್ತಿದೆ, ಮನಸ್ಸಿನ ನೋವು ಪರಿಹಾರವಾಗಲು ಗದ್ದೆ ಬೇಸಾಯ ಸಹಾಯಕವಾಗಬಹುದು ಎನ್ನುವ ದೃಷ್ಟಿಯಿಂದ ಆಲೋಚನೆ ಬಂತು ಅಂತಂದರು.

ಮನಸ್ಸಿನ ನೋವು,ಗದ್ದೆ ಬೇಸಾಯ ಈ ಎರಡು ವಿಷಯಗಳು ನನಗೇಕೋ ಕುತೂಹಲವುಂಟಾಯಿತು. ಅವರು ಮುಂದುವರಿದು ಹೇಳಿದ ವಿಷಯ ಮಾತ್ರ ತುಂಬಾ ಆಘಾತಕಾರಿ ಮತ್ತು ಸರ್ವರಿಗೂ ಎಚ್ಚರಿಕೆಯ ಗಂಟೆ ಎಂದು ನನ್ನ ಮನಸ್ಸಿಗೆ ಅರಿವಾಯಿತು.

ಇನ್ನೂ ಚಿಕ್ಕಪ್ರಾಯದ ಮಗಳು, ಮದುವೆಯಾಗಿ ವರುಷ ಎರಡಾಯಿತು. ಆಗಾಗ ಬಂದ ಅಸೌಖ್ಯದ ಕಾರಣದಿಂದ ಆಸ್ಪತ್ರೆಗೆ ಭೇಟಿ ನೀಡಿತು. ಆಧುನಿಕ ಪರೀಕ್ಷೆಗಳ ಮೂಲಕ ಗರ್ಭಕೋಶದಲ್ಲಿ ಕ್ಯಾನ್ಸರ್ ಗಡ್ಡೆ ಇದೆ ಎಂಬ ಉತ್ತರ ಬಂತು. ಮಗಳ ಜೀವ ಉಳಿಸುವುದಕ್ಕಾಗಿ ಗರ್ಭ ಕೋಶವನ್ನು ತೆಗೆದದ್ದೂ ಆಯಿತು. ಮುಂದೇನು?ಎಂಬ ಭವಿಷ್ಯದ ಯೋಚನೆಯಲ್ಲಿ ಮನೆಯಲ್ಲೇ ಕುಳಿತರೆ ಮತ್ತಷ್ಟು ನೋವು ಜಾಸ್ತಿ ಆಗುವ ಸಂಭವವನ್ನು ತಪ್ಪಿಸುವುದಕ್ಕಾಗಿ ಗದ್ದೆ ಬೇಸಾಯದ ಕಡೆಗೆ ಮನ ಮಾಡಿದೆ ಎಂಬ ಮಾತು ಮುಗಿಸುವಾಗ ನನ್ನ ಅಂತರಂಗದಲ್ಲಿಯೇ ನೋವುಗಳು ಉಲ್ಬಣಿಸಿ ಬಂತು. ನನ್ನ ಅರಿವಿಗೆ ಬಾರದಂತೆ ಕಣ್ಣಂಚಿನಲ್ಲಿ ಅಲ್ಪಸ್ವಲ್ಪ ನೀರೂ ಜಿನುಗಿತು.

ಇದು ಇಲ್ಲಿಗೆ ಮುಗಿಯಲಿಲ್ಲ, ನಮ್ಮ ಸುತ್ತಮುತ್ತಲಿನಲ್ಲೇ ಅನೇಕ ಮನೆಗಳಲ್ಲೂ ಇದೆ ಮತ್ತು ಓರ್ವ ಹುಡುಗಿ ಅಕಾಲ ಮೃತ್ಯುವಶ ಆಗಿದ್ದಾಳೆ ಎಂದೆನ್ನುವಾಗ ಭಯವೂ ಆಯಿತು.

ಆ ನಂತರದ ದಿನಗಳಲ್ಲಿ ನನ್ನ ಮನಸ್ಸನ್ನು ಈ ವಿಷಯ ಕೊರೆಯುತ್ತಿತ್ತು. ಉಣ್ಣುವ ಆಹಾರವನ್ನು ಬೆಳೆಸುವಲ್ಲಿ ಬಳಸುವ ವಿಷ, ಬೆಳೆದು ಬಂದದ್ದನ್ನು ಸಂಗ್ರಹಿಸಿ ಕಾಪಿಡುವಲ್ಲಿ ಬಳಸುವ ವಿಷ, ಅಯ್ಯೋ ಕಳೆಗಳೇ ಎಂದು ಬಳಸುವ ಕಳೆನಾಶಕ , ಬೇಕೋ ಬೇಡವೋ ಎಂಬ ಅರಿವಿಲ್ಲದೆ ಅವರಿವರ ಮಾತನ್ನು ಕೇಳಿ ಬಳಸುವ ಕೀಟನಾಶಕಗಳು ನನ್ನ ಕಣ್ಣ ಮುಂದೆ ಧುತ್ತೆಂದು ಬಂತು.

ಆಧುನಿಕ ಬದುಕಿನ ವ್ಯಾಯಾಮ ರಹಿತ ಜೀವನಶೈಲಿ, ರಂಗುರಂಗಿನ ಬೇಕರಿ ತಿಂಡಿಗಳು, ಗಲ್ಲಿಗಲ್ಲಿಗಳಲ್ಲಿ, ಬೀದಿಬೀದಿಗಳಲ್ಲಿ, ಮಾಲುಗಳಲ್ಲಿ ದೊರೆಯುವ ಸಾಲು ಸಾಲು ಜಂಕ್ ಫುಡ್‌ ಗಳ ದುರ್ವಾಸನೆ ಮೂಗಿಗೆ ಅಪ್ಪಳಿಸುತ್ತಿತ್ತು. ಅಭಿವೃದ್ದಿಯ ಪಥವನ್ನು ಉದ್ಘೋಷಿಸಿಕೊಂಡು ಹೋಗುವ ಸಮಾಜ ಎತ್ತ ಸಾಗುತ್ತಿದೆ, ಮತ್ತು ಅವನತಿಯ ಹತ್ತಿರ ಸಾಗುತ್ತಿದೆಯೇ?ಎಂಬ ಚಿಂತೆ ಮನದಲ್ಲಿ ಮೂಡಿತ್ತು.

ವಾಟ್ಸಪ್ ಗುಂಪೊಂದರಲ್ಲಿ ಇತ್ತೀಚೆಗೆ ಕಣ್ಮರೆಯಾಗುತ್ತಿರುವ ಕಾಗೆ, ಗುಬ್ಬಿ ಕೆಲವೊಂದು ಹಾವುಗಳು, ಜೀವಿಗಳ ಬಗ್ಗೆ ವಿಮರ್ಶೆಯೊಂದು ನಡೆಯುತ್ತಿತ್ತು. ಅದನ್ನು ಓದುತ್ತಿದ್ದಂತೆ ಮೇಲಿನ ಪ್ರಕರಣಕ್ಕೂ ಅದಕ್ಕೂ ತಾಳೆ ಬಂತು. ಈಗಿನ 30 ವರ್ಷಗಳಲ್ಲಿ ನಮ್ಮ ಕಣ್ಣೆದುರಲ್ಲೇ ನಾಶವಾದ ಅನೇಕ ಜೀವ ಸಂತಾನಗಳು ಅದೆಷ್ಟು ನರಕ ಯಾತನೆ ಅನುಭವಿಸಿರಬಹುದು, ತಮ್ಮ ಕಣ್ಣೆದುರೇ ನಾಶವಾಗುವ ಭವಿಷ್ಯದ ಕುಡಿಗಳಿಗೋಸ್ಕರ ಬೇಸರಿಸಿರಬಹುದು ಎಂಬುದನ್ನು ಯೋಚಿಸುವಾಗ ನಾವೂ ಆ ದಿಕ್ಕಿನಲ್ಲಿಯೇ ಸಾಗುತ್ತಿದ್ದೇವೆ ಎಂಬ ಎಚ್ಚರಿಕೆ ಗಂಟೆ ಇರಬಹುದೆಂದು ಮನಸ್ಸು ಕೂಗಿ ಹೇಳುತ್ತಿತ್ತು. ಅದೆಷ್ಟೋ ನಾಗರೀಕತೆಗಳು ನಾಶವಾಗಿ ಹೋಗಿದೆಯಂತೆ, ಅದೆಷ್ಟೋ ಸಂಸ್ಥಾನಗಳು ಅಳಿದು ಹೋಗಿದೆಯಂತೆ, ಅಂತೆಯೇ ಈ ನಾಗರೀಕತೆಯು ನಾಶದತ್ತ ಸಾಗುತ್ತಿದೆಯೇ? ಎಂಬ ಪ್ರಶ್ನೆ ಮನದಲ್ಲಿ ಮೂಡಿದೆ.

ಚಿಂತ್ಯಾಕೆ ಮಾಡುತಿದ್ದಿ ಚಿನ್ಮಯನಿದ್ದಾನೆ, ನಿನ್ನ ಚಿಂತೆಯ ಬಿಡಿಸೋ ಗೌರಿಕಾಂತ ನಿದ್ದಾನೆ……..  ಎಂಬ ದಾಸ ವಾಣಿಯನ್ನು ಸ್ಮರಿಸುತ್ತಾ ಗೌರೀಕಾಂತನನ್ನು ಉತ್ತಮ ಭವಿಷ್ಯಕ್ಕಾಗಿ ನೆನೆಯ ಹತ್ತಿದೆ.
ಬರಹ :
ಎ.ಪಿ. ಸದಾಶಿವ, ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

4 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

4 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

22 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago