Advertisement
ಅನುಕ್ರಮ

ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |

Share

ಕಾಸರಗೋಡು ಜಿಲ್ಲೆಯ ಕೂಡ್ಲು ವಿಷ್ಣುಮಂಗಲ ದೇವಳದ ಸನಿಹ ‘ಮಥುರಾ’ದಲ್ಲಿ ವಾಸ್ತವ್ಯವಿರುವ ಕೂಡ್ಲು ಕೃಷ್ಣ ಮಯ್ಯರು (78) ಸೆಪ್ಟೆಂಬರ್ 21ರಂದು ಮುಂಜಾನೆ ವಿಧಿವಶರಾದರು.

ಮಯ್ಯರ ಜನನ 28-4-1943. ಪುರೋಹಿತರಾಗಿ ಜನಾನುರಾಗಿ. ತಾನು ಮಾಡುವ ಕರ್ಮಾಂಗಗಳಲ್ಲಿ ರಾಜಿಯಿಲ್ಲದ ನಿರ್ವಹಣೆ. ಹಾಗಾಗಿ ಅವರನ್ನು ಹೋಮ-ಪೂಜಾದಿಗಳಿಗೆ ಹುಡುಕಿ ಬರುವವರ ಸಂಖ್ಯೆ ಸಣ್ಣದಲ್ಲ. ಈಚೆಗಿನ ಕೆಲವು ವರುಷಗಳಲ್ಲಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಆಸಕ್ತಿ ಹೊಂದಿ ಅಧ್ಯಯನ ಮಾಡುತ್ತಿದ್ದರು.

ಯಾವುದೇ ಆರ್ಥಿಕ ಸುದೃಢತನವು ಇಲ್ಲದೆ ಬೆವರಿನಿಂದ ಕಟ್ಟಿದ ಸ್ವ-ರೂಢಿತ ಬದುಕು. ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು. ಎಚ್ಚರದ ಆರ್ಥಿಕ ನಿರ್ವಹಣೆ, ತನುಶ್ರಮವನ್ನು ಮರೆತ ದುಡಿಮೆ, ಸ್ವ-ಹಿತಕ್ಕಾಗಿ ಕೈಚಾಚದ ವ್ಯಕ್ತಿತ್ವ, ಗುರುತರವಾದ ಸಾಮಾಜಿಕ ಕಾಳಜಿಗಳು ಮಯ್ಯರನ್ನು ಸಾಮಾಜಿಕವಾಗಿ ಗುರುತಿಸುವಂತೆ ಮಾಡಿತ್ತು.

ಕೂಡ್ಲುಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಶ್ರೀ ಶೇಷವನ ದೇವಸ್ಥಾನದ ಆಗು ಹೋಗುಗಳಲ್ಲಿ ಯಥಾಸಾಧ್ಯ ಭಾಗವಹಿಸುತ್ತಿದ್ದರು. ಶೇಷವನದ ಕುರಿತು ತುಂಬಾ ಗೌರವ, ಅಭಿಮಾನ ಹೊಂದಿದ್ದರು. ಬದುಕಿನ ಪೂರ್ವಾರ್ಧದಲ್ಲಿ ಕಾಸರಗೋಡು ಜಿಲ್ಲೆಯ ಸಹಕಾರಿ ಸ್ಟೋರ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು. ತನ್ನ ಸೇವೆಯಿಂದ ಗ್ರಾಹಕ ಸ್ವೀಕೃತಿಯನ್ನು ಪಡೆದಿದ್ದರು.

ಪುಸ್ತಕ, ಪತ್ರಿಕೆಗಳನ್ನು ಓದುವುದು ಮಯ್ಯರ ಮೆಚ್ಚಿನ ಹವ್ಯಾಸ. ಅದರಲ್ಲೂ ‘ಹೊಸದಿಗಂತ’ದ ಖಾಯಂ ಓದುಗ. ಪತ್ರಿಕೆಯ ಸಂಪಾದಕೀಯ ಪುಟಗಳ ಲೇಖನಗಳನ್ನು ಓದುತ್ತಿದ್ದರು. ಸಮಾನ ಮನಸ್ಸಿನವರೊಡನೆ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು. ಜಾಗತಿಕ ಆಗು ಹೋಗುಗಳನ್ನು ಚರ್ಚಿಸುತ್ತಿದ್ದರು. ರಾಜಕೀಯಕ್ಕಿಂತಲೂ ದೇಶ, ಸಂಸ್ಕೃತಿ, ಆಚಾರ, ವಿಚಾರಗಳ ಮಾತುಕತೆಗಳಲ್ಲಿ ತೆರೆದುಕೊಳ್ಳುತ್ತಿದ್ದರು.

ಯಾವುದೇ ವಿಚಾರಗಳನ್ನು ‘ನನಗೆ ಅದರಲ್ಲಿ ಆಸಕ್ತಿಯಿಲ್ಲ’ ಎಂದವರಲ್ಲ. ಯಕ್ಷಗಾನ, ನಾಟಕ.. ಮೊದಲಾದ ಕಲೆಗಳಲ್ಲಿ ಆಸಕ್ತ. ಕ್ರಿಕೆಟ್ ಅವರ ಮೆಚ್ಚಿನ ಕ್ರೀಡೆ. ಕ್ರಿಕೆಟಿನ ಸೂಕ್ಷ್ಮಾತಿಸೂಕ್ಷ್ಮಗಳನ್ನು ಬಲ್ಲವರು. ಅದನ್ನು ಚರ್ಚಿಸಬಲ್ಲರು.

ಆಧುನಿಕವಾದ ಯಾವುದೇ ರಂಗಸಜ್ಜಿಕೆಗಳಿಲ್ಲದ ಸಮಯದಲ್ಲಿ ನಾಟಕ ರಂಗವು ಜನಮಾನಸದಲ್ಲಿ ತನ್ನ ಬೇರನ್ನು ಇಳಿಬಿಟ್ಟಿದ್ದ ಕಾಲದಲ್ಲಿ ಮಯ್ಯರು ಸ್ವಲ್ಪ ಕಾಲ ಕಲಾವಿದರಾಗಿದ್ದರು. “ನಾವು ಮಯ್ಯರ ಅಂಗಳದಲ್ಲಿ ನಾಟಕ ಪ್ರಾಕ್ಟೀಸ್ ಮಾಡುತ್ತಿದ್ದೆವು. ಅವರದೇ ಆತಿಥ್ಯ. ಅವರೂ ಪಾತ್ರ ಮಾಡುತ್ತಿದ್ದರು. ನಾಟಕ ರಂಗದಲ್ಲಿ ಹಾಸ್ಯ ಮತ್ತು ಗಂಭೀರ ಪಾತ್ರಗಳಲ್ಲಿ ಮಯ್ಯರದು ಗುರುತರ ಅಭಿವ್ಯಕ್ತಿ.” ಹೀಗೆಂದವರು ರಂಗ ಕಲಾವಿದ ಚಿದಾನಂದ ಕಾಮತ್ ಕಾಸರಗೋಡು. ಈಗವರು ವಿಧಿವಶ.

ಸಾಂಸಾರಿಕವಾಗಿ ನೆಮ್ಮದಿಯಾಗಿದ್ದು, ನಿಸ್ಪೃಹ ಮನಸ್ಥಿತಿಯನ್ನು ರೂಢಿಸಿಕೊಂಡಿದ್ದ ಮಯ್ಯರ ಕೊನೆಯ ಕ್ಷಣ ಮರೆಯಲಾಗದು. ಕೆಲವು ವರುಷಗಳಿಂದ ಬಾಧಿಸುತ್ತಿದ್ದ ಕಫವೇ ಮೊದಲಾದ ವಯೋಸಹಜ ತೊಂದರೆಗಳಿಗೆ ಯೋಗ, ಮುದ್ರೆಗಳಿಂದ ಪರಿಹಾರವನ್ನು ಕಂಡುಕೊಂಡಿದ್ದರು. ಸೆ.21ರಂದು ಬೆಳಿಗ್ಗೆ ಸುಮಾರು ಆರುವರೆ ಗಂಟೆ ಇರಬಹುದು. ದೈನಂದಿನ ಅನುಷ್ಠಾನದ ವಿಚಾರಗಳನ್ನು ಮಗನೊಂದಿಗೆ ಚರ್ಚಿಸಿ ಯೋಗ ಮಾಡಲು ತನ್ನ ಕೋಣೆಗೆ ತೆರಳಿದ್ದರು. ಯೋಗದ ಕೊನೆಗೆ ‘ಶವಾಸನ’ದಲ್ಲಿರುವಾಗಲೇ ಇಹಲೋಕ ತ್ಯಜಿಸಿದರು.

ಮೂರು ವರುಷದ ಹಿಂದೆ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಕೂಡ್ಲು’ ಇವರು ಕೃಷ್ಣ ಮಯ್ಯರನ್ನು ಶ್ರೀ ರಾಘವೇಂದ್ರಾನುಗ್ರಹ ಪ್ರಶಸ್ತಿ’ ನೀಡಿ ಪುರಸ್ಕರಿಸಿದ್ದರು.

ಮಡದಿ ಗಂಗಮ್ಮ. ಐವರು ಮಕ್ಕಳು. ಮಗಳಂದಿರಾದ ಗೀತಾ, ವೀಣಾ, ಪ್ರಶಾಂತಿ, ಪ್ರತಿಮಾ ಹಾಗೂ ಮಗ ರಾಮಪ್ರಸಾದ ಮಯ್ಯ. ಅಳಿಯಂದಿರು : ನೇಪಾಳದ ಪಶುಪತಿ ದೇವಸ್ಥಾನದ ಅರ್ಚಕ ರಘುರಾಮ ಕಾರಂತ, ಪುತ್ತೂರಿನ ನಾರಾಯಣ ಕಾರಂತ, ಅರ್ಚಕರಾದ ಮಂಗಳಾದೇವಿಯ ಸುಬ್ರಹ್ಮಣ್ಯ ಐತಾಳ ಮತ್ತು ತ್ರಿಶೂರಿನ ಸುಧೀರ್ ನಾವುಡ. ಮೊಮ್ಮಕ್ಕಳು : ಭಾರ್ಗವ, ಶಿವಾಂಗಿ, ಸುಕನ್ಯಾ, ವೈಶಾಲಿ, ಅಶ್ವಿನ್

ಕಳೆದ ವರುಷವಷ್ಟೇ ತನ್ನ ಪುತ್ರನ ವಿವಾಹವು ಶ್ರೀಲಕ್ಷ್ಮೀಯೊಂದಿಗೆ ಜರುಗಿತ್ತು. ಆ ಸಮಯದಲ್ಲಿ “ನನ್ನ ಬದುಕಿನ ಬಹುದೊಡ್ಡ ಜವಾಬ್ದಾರಿ ಮುಗಿಯಿತು.” ಎಂದಿದ್ದ ಕೃಷ್ಣ ಮಯ್ಯರು ತನ್ನೆಲ್ಲಾ ಜವಾಬ್ದಾರಿಯನ್ನು ಮುಗಿಸಿ ಕಾಣದ ಲೋಕಕ್ಕೆ ತೆರಳಿದರು. ಬದುಕಿನಲ್ಲಿ ಬದ್ಧತೆಯನ್ನು ರೂಢಿಸಿಕೊಂಡಿದ್ದ ಹಿರಿಯ ಚೇತನ ಮಯ್ಯರಿಗೆ ಅಕ್ಷರ ನಮನವಿದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago