ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ತತ್ವ ಸಿದ್ಧಾಂತ ವನ್ನು ಒಪ್ಪುವ ಸೂಕ್ತ ಅಭ್ಯರ್ಥಿ ಸಿಕ್ಕಿದಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೋಮಸುಂದರ ಕೆ.ಎಸ್. ತಿಳಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮೂಡಬಿದ್ರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಸುಳ್ಯ ಸೇರಿ ಉಳಿದ 5 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತಿದೆ. ಸ್ವಚ್ಚ, ಜನಪರ ಕಾಳಜಿಯುಳ್ಳ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭ್ಯರ್ಥಿ ಸಿಕ್ಕಿದಲ್ಲಿ ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು. ಪಕ್ಷದ ವತಿಯಿಂದ ನಡೆಸಿದ ಚೈತನ್ಯ ಯಾತ್ರೆಯಿಂದ ಪಕ್ಷ ಸಂಘಟನೆಗೆ ಹೆಚ್ಚು ಸಹಾಯಕವಾಗಿದೆ. ಸಾವಿರಾರು ಮಂದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಪದಾಧಿಕಾರಿಗಳನ್ನು ಸೋಮಸುಂದರ್ ಅವರು ಘೋಷಿಸಿದರು. ಸುಳ್ಯ ಕ್ಷೇತ್ರದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ, ಪ್ರಧಾನ ಕಾರ್ಯದರ್ಶಿಯಾಗಿ ಜೀವನ್ ನಾರ್ಕೋಡು, ಕಾರ್ಯದರ್ಶಿಯಾಗಿ ಇಕ್ಬಾಲ್ ಸುಣ್ಣಮೂಲೆ ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಆರ್ಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ಅವಿನಾಶ್ ಕಾರಿಂಜ, ಪ್ರಧಾನ ಕಾರ್ಯದರ್ಶಿ ಜೀವನ್ ನಾರ್ಕೋಡು, ಸದಸ್ಯ ಐವನ್ ಪೆರಾವೊ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel