Advertisement
Opinion

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |

Share
ನ ಮಂತ್ರನ್ನೋ ಯಂತ್ರಂ ತ ದ ಪಿ ಚನ ಜಾನೇ ಸ್ತುತಿಮಹೋ ನ ಚಾಹ್ವಾನಂ ಧ್ಯಾನಂ ತದಪಿ ಚ ನ ಜಾನೇ ಸ್ತುತಿ ಕಥಾ ನ ಜಾನೇ ಮುದ್ರಾಸ್ಥೇ ತದಪಿ ಚ ನ ಜಾನೇ ವಿಲಪನಂ ಪರಂ ಜಾನೇ ಮಾತಸ್ತ್ವದನುಸರಣಂ ಕ್ಲೇಶಹರಣಮ್….

ಅಮ್ಮಾ, ನಿನ್ನನ್ನ ಸ್ತುತಿಸುವ ಮಂತ್ರಗಳಾಗಲಿ, ಯಂತ್ರಗಳಾಗಲಿ,ಮುದ್ರೆಗಳಾಗಲೀ,ಅಥವಾ ಕ್ಷೀಣವಾದ ಕೂಗಾಗಲೀ ನನಗರಿಯದು, ಆದರೆ, ಅಮ್ಮಾ ನಿನ್ನನ್ನ ಅನುಸರಿಸಿದರೆ ನೀನು ಕೈ ಬಿಡುವವಳಲ್ಲವೆಂಬ ದೃಢ ವಿಶ್ವಾಸವಿದೆಯಮ್ಮಾ……………ಮುಂದೆ ಓದಿ……..

ಎಂಬ ಶಾಂಕರ ಕ್ಷಮಾಪಣಾ ಸ್ತೋತ್ರದಂತೆ ನಮ್ಮನ್ನೂ ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು ಎಂಬುದು ವಿವರಣೆಗೆ ನಿಲುಕದ್ದು.ಹೌದು, ನೂರನಲ್ವತ್ತನಾಲ್ಕು ವರ್ಷಕ್ಕೊಮ್ಮೆ ಗುರುಗ್ರಹನ ಸೂರ್ಯದೇವನ ಸುತ್ತಲ ಪರಿಭ್ರಮಣ ಮುಗಿದಾಗ ಘಟಿಸುವ ಪೂರ್ಣಕುಂಭ ಮೇಳಕ್ಕೆ ನಮ್ಮ ಪಯಣ ಆಧ್ಯಾತ್ಮಿಕವೋ, ಸಾಂಸ್ಕೃತಿಕವೋ, ಮನರಂಜನವೋ ಎಂದು ವಿಮರ್ಷಿಸಿಕೊಂಡರೆ, ಅದು ಅವರವರ ಭಾವ ನಾವೆಯ ಭಾವದುತ್ತುಂಗ ಪಯಣವಷ್ಟೇ, ತುಂಗ ಬಿಂದುವಿನ ಅಳತೆ ಅವರವರ ಮನದ ಸಂವೇದನೆಯಷ್ಟೇ. ಈ ಕುಂಭಮೇಳದೆಡೆಗಿನ ಸೆಳೆತವಿದೆಯಲ್ಲಾ, ಹಲವು ಮಜಲುಗಳ ಯಾನ, ನಾನು ಸೊನ್ನೆ ನೀನು ಸನ್ನೆ, ನಾನು ಎಂಬುದು ಕೇವಲ ನಶ್ವರ ನಾವು ಎಂಬುದೇ ಪರಮ ಸತ್ಯ ಎಂಬ ನೋಟವನ್ನು ಸ್ಥಾಯೀಯಾಗಿಸಿದ ಭಾವ ಯಾನವಾಗಿತ್ತು.

ನಮ್ಮ ಪಯಣಕ್ಕೂ ಮುನ್ನ ತಯಾರಿ ತಯಾರಿ ತಯಾರಿ, ನಾನಿಲ್ಲದಾಗ ನಮ್ಮ ವ್ಯವಸ್ಥೆಗಳು ಹೇಗೆ ನಡೆದಾವೋ, ಉಳಿದಾವೋ ಎಂಬ ಆತಂಕ…. ನಾನಿಲ್ಲದಾಗ , ನಾನು ಮಾಡಿದ ಕೆಲಸ ಕಾರ್ಯಗಳು ಮುಂದುವರಿಯಬಹುದೇ ಎಂಬ ಮನದಾಳದ ದುಗುಡ……ಹೊರಟು ನಿಂತಾಗ ಮನದೊಳಗೆ ಭಾರ ಭಾರ ಛಾಯೆ….ಹೊರಟು ಮುಂದೆ ಮುಂದೆ ಸಾಗಿದಂತೆಯೇ ದುಗುಡಗಳೆಲ್ಲ ಮರೆಯಾಗಿ ಹೋಗಿ ಗಮ್ಯ ಸ್ಥಾನದತ್ತ ಕೇಂದ್ರೀಕೃತವಾಗಿ, ಆ ಪರಮ ವೈಭವದ ಮಹಾಮಾತೆ ಗಂಗೆಯ ಮಡಿಲಿಗೆ ತಲುಪಿದಾಗ ನಿರಾಳ ಭಾವ, ಮನಸ್ಸು ಹಗುರ ಹಗುರ….ನಾನೆಂಬುದು ಸೊನ್ನೆಯಾಗಿ ಪ್ರಾಪಂಚಿಕ ಭಾರವೇ ಮರೆತು ಹೋಗಿತ್ತು. ಅಮ್ಮನ ಮಡಿಲಲ್ಲಿ ಕುಳಿತ, ಪವಡಿಸಿದ ಮಗುವಿನ ನಿರಾಳತೆ ಮನಸ್ಸನ್ನು ತುಂಬಿತ್ತು…… ಅದ್ಭುತ ಸಾಮೂಹಿಕ ಜೀವ ಜಗತ್ತಿನ ನಿಜ ದರ್ಶನವಾಗಿತ್ತು. ಯಾವುದೇ ನಿಯತಿ ಶಾಸನಗಳ ಆವರಣವಿಲ್ಲ, ಆದೇಶಗಳಿಲ್ಲ, ಗೌಜು ಗದ್ದಲಗಳಿಲ್ಲ, ಹಗುರಾದ ಮನಸ್ಸಿನಿಂದ ಅನುಶಾಸನ ಪಾಲಕನಾಗಿ ತಲೆ ತಗ್ಗಿಸಿ ಗಮ್ಯ ಸ್ಥಾನದೆಡೆಗೆ ಮುನ್ನಡೆಯುದಷ್ಟೇ ನಮ್ಮ ಮನದ ಸೆಳೆತವಾಗಿತ್ತು.

ಹೌದಲ್ಲವೇ, ಕೊನೆಗೊಂದು ದಿನ ನಾನು ಇಲ್ಲದಾಗ ಕೂಡಾ ಇಷ್ಟೇ ಅಲ್ಲವೇ….ಗಮ್ಯದತ್ತ ಅನುಶಾಸನಾತ್ಮಕವಾಗಿ ಪಯಣವಷ್ಟೇ…ನಿರ್ಗಮಿತ ಸ್ಥಾನದಲ್ಲಿ ಅದೇ ಯಾಂತ್ರಿಕ ನಿಯತಿ ಪ್ರಭೃತಿ ಚಲನೆಗಳು ಮುಂದುವರಿದು ಕೊನೆಗೊಮ್ಮೆ ವಿಶ್ವಚೇತನದಲ್ಲಿ ಲಯಗೊಳ್ಳುವುದಷ್ಟೇ ಅಲ್ಲವೇ..

ಪಯಣದ ಮಾರ್ಗಕ್ಕೆ ಬರೋಣವಂತೆ…., ಹದಿನೈದನೇ ತಾರೀಕಿನ ಶುಭ ಶನಿವಾರದಂದು ಅರುಣೋದಯಕ್ಕೆ ಮುಂಚೆ ನಾವೈವರು ನನ್ನ ಸೋದರ ಬಾವ ಶಂಕರರ ಸಾರಥ್ಯದಲ್ಲಿ ಹೊರಟೇ ಬಿಟ್ಟೆವು.ಮೊದಲೇ ನಿರ್ಧರಿಸಿದಂತೆ ಪಯಣಿಸಿದ ನಾವು, ಪ್ರಯಾಗದಲ್ಲಿ ರವಿವಾರದ ಜನನಿಬಿಡತೆಯಿಂದ ತಪ್ಪಿಸಿಕೊಳ್ಳಲೋಸುಗ ನೇರವಾಗಿ ದೇಶದ ಪೂರ್ವ ಭಾಗದತ್ತ ಅಂದರೆ ಮಂಗಳೂರು, ಅಂಕೋಲಾ,ಖಾನಾಪುರ,ಬೆಳಗಾಮ್, ಕಿತ್ತೂರು ಸಂಕೇಶ್ವರದ ಮೂಲಕ ಮಹಾರಾಷ್ಟ್ರ ಪ್ರವೇಶಿಸಿ ಸಂಜೆ ಸುಮಾರು ಆರುವರೆಗೆ ಪಂಡರಾಪುರದ ವಿಠ್ಠಲನ ಸನ್ನಿಧಿ ತಲುಪಿದ್ದೆವು.ನೇರವಾಗಿ ವಿಠ್ಠಲ ದರ್ಶನಕ್ಕೆ ಹೋದ ನಾವು ಕಣ್ಣೆತ್ತದ ಸರತಿ ಸಾಲಿನಲ್ಲಿ ಕಾದು ಕುಳಿತ ಭಕ್ತ ಸಂದೋಹವನ್ನು ಕಂಡಾಗ ಬೆಚ್ಚಿದರೂ, ಧುತ್ತೆಂದು ನಮ್ಮೆದುರು ಪ್ರತ್ಯಕ್ಷನಾದ ವ್ಯಕ್ತಿಯೊಬ್ಬ ನಮ್ಮನ್ನು ನೋಡನೋಡುತ್ತಿದ್ದಂತೆಯೇ ವಿಠ್ಠಲನ ಮುಂದೆ ನಿಲ್ಲಿಸಿಬಿಟ್ಟಾಗ ಆಹಾ, ಮನಮೋಹಕನಾಗಿ ಅರಸಿನ ತಿಲಕದ ಮಧ್ಯೆ ಕೆಂಪು ತಿಲಕದಾರಿಯಾಗಿ, ಅರಸಿನ ಕಚ್ಚೆ ಪೀತಾಂಬರ ಉಟ್ಟು, ಭಕ್ತನ ಮೊರೆಯ ಆಲಿಸಲೋ ಎಂಬಂತೆ ಸೊಂಟಕ್ಕೆ ಕೈಯನಿಟ್ಟು, ಭಕ್ತನ ಮನೆಯ ಇಟ್ಟುಗೆಯ ಮೆಟ್ಟಲ ದಾಟಲೋ ಎಂಬಂತೆ ನಿಂತ ಜಗದೋದ್ಧಾರಕನ ಪ್ರಸನ್ನ ಮುಖ ದರ್ಶನವಾಯಿತು.ಧನ್ಯೋಸ್ಮಿ ಧನ್ಯೋಸ್ಮಿ…. ಮೊದಲ ದರ್ಶನ ಪಡೆದು ಹೊರಬಂದ ನಾವು ಮಗದೊಮ್ಮೆ ತಿರುಗಿ ಚೆಲುವ ಕಳ್ಳ ಕೃಷ್ಣನ ದರ್ಶನಕ್ಕಾಗಿ ಒಳಗೋಡಿದೆವು…ಪುನಃ ಪುನಃ ಪಂಡರೀಶನ ರೂಪ ಚೈತನ್ಯಗಳ ಮಧುರ ಸಾನ್ನಿಧ್ಯವನ್ನು ಮನದಣಿಯೆ ತುಂಬಿಕೊಳ್ಳುತ್ತಾ…..

ಕಾನಡಾ ರಾಜಾ ಪಂಡರಿಚಾ…
ವೇದಾ ನಾಹೀ ನಾಹೀ ಕಳ್ಹಲಾ
ಅಂತಪಾರಯಾ ಛಾ…ಕಾನಡಾ…

ನಿರಾಕಾರ ತೋ ನಿರ್ಗುಣ ಈಶ್ವರ್ , ಕಸ ಪ್ರಕಟಲೋ ಅಸ ವಿಟೇವರ್..ಉಭಯ ಠೇವಿಲೇ ಹಾತ್ ಕಟೀವರ್….ಪುತಲಾ ಚೈತನ್ಯಾಚಾ…ಕಾನಡಾ ರಾಜಾ ಪಂಡರಿಚಾ..ಎಂಬ ಅಭಂಗ್ ಹಾಡಿನ ಮೂರ್ತರೂಪ ದರ್ಶನ ಪಡೆದಿದ್ದೆವು.ನಮ್ಮ ಮನದೊಳಗಿನ ಕುಂಭದಲ್ಲಿ ತುಂಬುವಷ್ಟು, ಮಹಾ ಮಹಿಮನ, ಪರಮಪುರುಷನ ಸಂದರ್ಶನವಾಗಿತ್ತು ಮನ ನಿರಾಳವಾಗಿತ್ತು….

ಅಲ್ಕಿಂದ ನೇರವಾಗಿ ರಾತ್ರಿ ಊಟ ಮುಗಿಸಿ, ವಸತಿ ಕೋಣೆಗೆ ಬಂದು, ಮರುದಿನದ ಉಜೈನಿ ಪಯಣದ ದೂರ ದಿಕ್ಕು ದೆಸೆಗಳ ಬಗ್ಗೆ ಮಾತನಾಡುತ್ತಾ ಇದ್ದಾಗ ನಿದ್ರಾದೇವಿ ನಮ್ಮನ್ನು ಆವರಿಸಿದ್ದಳು.

ಮುಂದುವರಿಯುವುದು... (ಉಜೈನಿಯತ್ತ ಪಯಣ, ಮಹಾಕಾಲನ ದರ್ಶನ, ಕುಂಭಮೇಳಕ್ಕೆ ಓಟ.)

ಬರಹ :
ಸುರೇಶ್ಚಂದ್ರ ತೊಟ್ಟೆತ್ತೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

14 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago