ಕೇರಳದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆ ಮತ್ತಷ್ಟು ಆತಂಕ ಸೃಷ್ಟಿಸಿದ್ದು, ಮಲಪ್ಪುರಂ ಜಿಲ್ಲೆಯ ನಾಡುಕಾಣಿ–ಪರಪ್ಪನಂಗಾಡಿ ರಾಜ್ಯ ಹೆದ್ದಾರಿಯಲ್ಲಿ ಸರಣಿ ಭೂಕುಸಿತ ಸಂಭವಿಸಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಒಂದೇ ಸ್ಥಳದಲ್ಲಿ ಹಲವು ಬಾರಿ ಗುಡ್ಡ ಕುಸಿದಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಎಡೆಯಪಾಲಂ ಮತ್ತು ಕರತೋಡು ನಡುವಿನ ಮಲಪ್ಪುರಂ–ವೆಂಗರ ಮಾರ್ಗದಲ್ಲಿ ಗುಡ್ಡದ ದೊಡ್ಡ ಭಾಗವೇ ರಸ್ತೆ ಮೇಲೆ ಕುಸಿದಿದೆ. ಅಪಾರ ಪ್ರಮಾಣದ ಮಣ್ಣು, ಬಂಡೆಗಳು ಹಾಗೂ ಮರಗಳು ರಸ್ತೆಗೆ ಮತ್ತು ಸಮೀಪದ ಕದಲುಂಡಿ ನದಿಯತ್ತ ಉರುಳಿಬಿದ್ದಿವೆ. ರಕ್ಷಣಾ ಕಾರ್ಯ ನಡೆಯುತ್ತಿರುವಾಗಲೇ ಮತ್ತೊಮ್ಮೆ ಭೂಕುಸಿತ ಸಂಭವಿಸಿರುವುದಾಗಿ ವರದಿಯಾಗಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ರಕ್ಷಣಾ ಹಾಗೂ ಮಣ್ಣು ತೆರವು ಕಾರ್ಯ ನಡೆಸುತ್ತಿದ್ದಾರೆ. ಹೆಚ್ಚಿನ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಪ್ರದೇಶವನ್ನು ಅಪಾಯ ವಲಯ ಎಂದು ಘೋಷಿಸಲಾಗಿದೆ. ಮಲಪ್ಪುರಂ ಕಡೆಗೆ ತೆರಳುವ ವಾಹನಗಳನ್ನು ಪರ್ಯಾಯ ಮಾರ್ಗದ ಮೂಲಕ ಸಂಚರಿಸಲು ಸೂಚಿಸಲಾಗಿದೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂಕುಸಿತ ಹಾಗೂ ವ್ಯಾಪಕ ಹಾನಿ ಉಂಟಾಗಿದೆ. ಹಲವೆಡೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿರಾರು ಮಂದಿ ಪರಿಹಾರ ಶಿಬಿರಗಳಿಗೆ ಸ್ಥಳಾಂತರಗೊಂಡಿದ್ದಾರೆ.
ಸ್ಥಳೀಯರ ಪ್ರಕಾರ, ಇದೇ ಪ್ರದೇಶದಲ್ಲಿ 2019ರಲ್ಲಿಯೂ ಇದೇ ರೀತಿಯ ಭೂಕುಸಿತ ಸಂಭವಿಸಿತ್ತು. ನಿರಂತರ ಮಳೆ ಮುಂದುವರಿದಿರುವುದರಿಂದ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದ ಪರಿಸ್ಥಿತಿ ಗಂಭೀರವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 15 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ. ಸಾವಿರಾರು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ
Heavy rainfall has triggered a major landslide on the Nadukani–Parappanangadi State Highway in Kerala’s Malappuram district, forcing authorities to suspend traffic. Rescue teams are clearing debris as officials warn of further landslides amid continuing heavy rain.

