ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನ.25ರಂದು ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ತಮಿಳುನಾಡು ಮಾತ್ರವಲ್ಲದೇ, ನೆರೆಯ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಿಗೂ ನಿವಾರ್ ಚಂಡಮಾರುತದ ಎಪೆಕ್ಟ್ ತಟ್ಟಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್’ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.