Advertisement
The Rural Mirror ವಾರದ ವಿಶೇಷ

ತಾಲೂಕು ಮಟ್ಟದಲ್ಲಿ ಗೋಶಾಲೆ ತೆರೆಯಿರಿ | ಗೋಪ್ರೇಮಿ, ಸಾವಯವ ಕೃಷಿಕ ಎ ಪಿ ಸದಾಶಿವ ಅವರಿಂದ ಸರ್ಕಾರಕ್ಕೆ ಬಹಿರಂಗ ಪತ್ರ |

Share
ಸಾವಯವ ಕೃಷಿಕ ಎ ಪಿ ಸದಾಶಿವ ಮರಿಕೆ ಅವರು ದೇಸೀ ಗೋ ಸಂರಕ್ಷಣೆ ಹಾಗೂ ಗೋಸಂರಕ್ಷಣಗೆ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ. ಪ್ರತೀ ತಾಲೂಕಿನಲ್ಲಿ ಗೋಶಾಲೆ ತೆರೆಯಲು ಮನವಿ ಮಾಡಿದ್ದಾರೆ. ಅದರ ಜೊತೆಗೆ ಕೃಷಿಕರಾಗೊ, ಹೈನುಗಾರರಾಗಿ , ದೇಸೀ ಗೋತಳಿ ಸಂರಕ್ಷಕರಾಗಿ ಸ್ವತ: ಅನುಭವ ಇರುವ ಸದಾಶಿವ ಅವರು ಸರ್ಕಾರಕ್ಕೆ ಕೆಲವು ಸಲಹೆ ನೀಡಿದ್ದಾರೆ.

ಆತ್ಮೀಯ ಮುಖ್ಯಮಂತ್ರಿಗಳೇ, ಪಶು ಸಂಗೋಪನಾ ಸಚಿವರೇ,  ಘನ ಸರ್ಕಾರವು ಗೋ ಸಂರಕ್ಷಣೆಗೆ ಬದ್ಧವಾಗಿ ಕಾನೂನನ್ನು ಮತ್ತಷ್ಟು ಕಠಿಣ ಗೊಳಿಸಿದ ಬಗೆಗಿನ ಜಾಹೀರಾತೊಂದನ್ನು ಓದಿದೆ. ಸರ್ಕಾರಕ್ಕಿರುವ ಗೋವಿನ ಬಗೆಗಿನ ಪ್ರೀತಿ ಮತ್ತು ಕಾಳಜಿಗೆ ಅನಂತ ಧನ್ಯವಾದಗಳು…

ನಾನೋರ್ವ ಕೃಷಿಕ. ಕೃಷಿಗೆ ಪೂರಕವಾಗಿ ಗೋವು ಎಂದು ನಂಬಿಕೊಂಡು ಕಳೆದ 50 ವರುಷಗಳಿಗಿಂತಲೂ ಹೆಚ್ಚು ಸಮಯದಿಂದ 20ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಗೋವನ್ನು ಪ್ರೀತಿಯಿಂದ ಸಾಕಿ ಸಲಹುತ್ತಾ ಬಂದಿದ್ದೇನೆ. ಅದರಲ್ಲಿ ನೆಮ್ಮದಿಯನ್ನೂ ಕಂಡಿದ್ದೇನೆ. ಗೋವು ನನಗೆಂದೂ ಮೋಸ ಮಾಡಿಲ್ಲ. ಗೋ ಆಧಾರಿತ ಕೃಷಿಯ ಮೂಲಕ ನನ್ನ ಎಲ್ಲಾ ಅಗತ್ಯತೆಗಳನ್ನು ಮಿತವಾಗಿ ಗಳಿಸಿಕೊಂಡಿದ್ದೇನೆ ಮತ್ತು ಬಳಸಿಕೊಂಡಿದ್ದೇನೆ.

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬುದು ಗಾದೆಯ ಮಾತು. ಇಂದು ಗೋ ಸಾಕುವ ರೈತರ ಪರಿಸ್ಥಿತಿ ಬರೆ ಕಾಯಿಸಿದ ಎಮ್ಮೆಯಂತಾಗಿದೆ. ತೀವ್ರವಾದ ಕಾರ್ಮಿಕ ಕೊರತೆಯಿಂದ ರೈತ ಇಂದು ಹೈರಾಣಾಗಿದ್ದಾನೆ. ಆ ಕಾರಣದಿಂದ ಕೃಷಿ ಕೆಲಸಕ್ಕಾಗಿ ಯಾಂತ್ರಿಕರಣದತ್ತ ಮುಖ ಮಾಡಿದ್ದಾನೆ. ಸರ್ಕಾರವು ಸಬ್ಸಿಡಿ, ಸಾಲ, ಉಚಿತಗಳ ಮೂಲಕ ಯಾಂತ್ರಿಕರಣಕ್ಕೆ ಒಂದಷ್ಟು ಪ್ರೋತ್ಸಾಹವನ್ನು ಕೊಡುತ್ತಿದೆ. ಯಾಂತ್ರಿಕರಣದಿಂದ ಆಗುವ ಶೀಘ್ರ ಕೆಲಸ ಮತ್ತು ಕಾರ್ಮಿಕ ಕೊರತೆಯ ಕಾರಣದಿಂದಾಗಿ ಇಂದು ಗದ್ದೆ ಉಳುವುದಕ್ಕಾಗಲಿ, ಸಾಗಾಟಕ್ಕಾಗಲಿ ಎತ್ತುಗಳ ಬಳಕೆ ಇಲ್ಲ. ಹಳ್ಳಿ ಹಳ್ಳಿಗಳಲ್ಲಿ ಕೃತಕ ಗರ್ಭಧಾರಣ ಕೇಂದ್ರಗಳಿರುವ ಕಾರಣ, ಗರ್ಭಧಾರಣೆಗೂ ಇಂದು ಹೋರಿಗಳ ಅಗತ್ಯತೆ ಇಲ್ಲವೆಂದಾಗಿದೆ. ಐವತ್ತು ವರುಷಗಳ ಹಿಂದಿನ ಗೋಮಾಳಗಳು ಇಂದು ಎಲ್ಲೂ ಇಲ್ಲ. ಆ ಕಾರಣದಿಂದ ಹೊರಗಡೆ ಬಿಟ್ಟರೆ ಇನ್ಯಾರೋ ಕಷ್ಟಪಟ್ಟು ಬೆಳೆಸಿದ ಕೃಷಿಯನ್ನು ಗೋವುಗಳು ತಿಂದು ಹಾಳು ಮಾಡುವ ಕಾರಣದಿಂದ ಕಟ್ಟಿ ಹಾಕಿ ಸಾಕುವುದು ಅನಿವಾರ್ಯ. ಒಂದು ಕಡೆಯಿಂದ ಕಾರ್ಮಿಕ ಕೊರತೆ,ತೀವ್ರವಾದ ಮೇವಿನ ಸಮಸ್ಯೆ, ಈ ಕಾರಣದಿಂದಾಗಿ ನಮ್ಮ ಕೃಷಿಯ ಅಗತ್ಯಕ್ಕಿಂತ ಜಾಸ್ತಿಯ ಜಾನುವಾರುಗಳನ್ನು ಸಾಕುವುದು ದುಸ್ತರವಾಗಿದೆ.

ಸರಿಯಾಗಿ ಸಾಕುವ ಯಾವುದೇ ಕೃಷಿಕನ ಹಟ್ಟಿಯಲ್ಲಿ, ಪ್ರತಿ ಮೂರು ವರ್ಷಕ್ಕೊಮ್ಮೆ ಸಂಖ್ಯೆ ದ್ವಿಗುಣವಾಗುತ್ತಾ ಹೋಗುತ್ತದೆ. ಹೊಸ ಕಾನೂನಿನಿಂದಾಗಿ ಹೆಚ್ಚಾದ ಸಂಖ್ಯೆಗೆ ಏನು ಗತಿ ಎಂಬ ಪ್ರಶ್ನೆ ಬೃಹದಾಕಾರವಾಗಿ ಕಾಡುತ್ತಿದೆ. ಗೋ ಭಕ್ಷಕರು ಎಷ್ಟು ಸಮಸ್ಯೆಯೋ ಅದಕ್ಕಿಂತ ಹೆಚ್ಚಿನ ಸಮಸ್ಯೆಯಾಗಿ ಕಾಡುವುದು ರೈತ ಗೋಸಾಕಣೆಯಿಂದ ವಿಮುಖರಾಗುವುದು. ಗೋಸಂತತಿ ವೃದ್ಧಿಸಬೇಕಾದರೆ ದನಗಳ ಸಂಖ್ಯೆ ಜಾಸ್ತಿಯಾಗಬೇಕೇ ವಿನಃ ಹೋರಿಗಳ ಸಂಖ್ಯೆ ಅಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಬಲಿತ ಹೋರಿಯನ್ನು ಹಿಡಿಯಬೇಕಾದರೆ ಕಟ್ಟು ಮಸ್ತಾದ ಎರಡಾದರೂ ಆಳುಬೇಕು. ಮೂರು ವರ್ಷಕ್ಕೊಮ್ಮೆ ಗರ್ಭಧಾರಣೆಯ ದೃಷ್ಟಿಯಿಂದ ಹೋರಿಗಳನ್ನು ಬದಲಾಯಿಸಲೇ ಬೇಕು. ಇಂತಹ ಅನಿವಾರ್ಯತೆಗಳಿಂದಾಗಿ ಹೆಚ್ಚಾದ ಸಂಖ್ಯೆಯ ಗಂಡು ಕರುಗಳನ್ನು, ಬದಲಾವಣೆಯ ಹೋರಿಯನ್ನು ಯಾರಿಗಾದರೂ ಕೊಡಲೇಬೇಕು. ಇಂದು ಯಾವುದೇ ಗೋಶಾಲೆಗಳಿಗೆ ಸಂಖ್ಯೆಯ ಅನಿವಾರ್ಯತೆಯಿಂದಾಗಿ ಗೋವುಗಳು ಬೇಡ. ಕೆಲವು ದೂರದ ಗೋಶಾಲೆಗಳಲ್ಲಿ ತೆಗೆದುಕೊಂಡರೂ ಸಾಗಣೆ ಖರ್ಚಿನ ವಿಪರೀತ ಹೊರೆ ಮತ್ತು ಸಾಕುವಿಕೆಗಾಗಿ ಕೊಡುವ ಒಂದಷ್ಟು ದೇಣಿಗೆ ಕೃಷಿಕ ಭರಿಸಲಾರದ ಸ್ಥಿತಿಯಲ್ಲಿದ್ದಾನೆ.

ಅನೇಕ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ ರೈತನಿಗೆ ಮತ್ತಷ್ಟು ಸಮಸ್ಯೆಯೊಡ್ದುವ ಕಾನೂನಿನಿಂದ ಮುಕ್ತವಾಗಲು ನನ್ನದೊಂದೆರಡು ಸಲಹೆಯನ್ನು ಸ್ವೀಕರಿಸುತ್ತೀರಿ ಎಂದು ನಂಬುತ್ತೇನೆ.

ಅದೆಷ್ಟೋ ಕೋಟಿ ಸಬ್ಸಿಡಿಯನ್ನು ಕೊಟ್ಟು ರಾಸಾಯನಿಕ ಕೃಷಿಯನ್ನು ಪ್ರೋತ್ಸಾಹಿಸುವ ಸರ್ಕಾರ, ಸಾವಯವ ಪ್ರೀತಿಯಿಂದ ಯಾವುದೇ ಸಹಾಯಧನ ಇಲ್ಲದೆ ಗೋವಾಧಾರಿತ ಕೃಷಿಯಲ್ಲಿ ನಿರತರಾದ ಕೃಷಿಕನಲ್ಲಿ ಹೆಚ್ಚಾದ ಗಂಡು ಕರುಗಳಿಗೆ ತಾಲೂಕು ಮಟ್ಟದಲ್ಲಾದರೂ ಒಂದು ಗೋಶಾಲೆಯನ್ನು ತೆರೆದು ರೈತನ ಕಡೆಯಿಂದ ಸ್ವೀಕರಿಸುವಂತೆ ಆಗಬೇಕು ಮತ್ತು ಅಲ್ಲಿಯವರೆಗೆ ಗೋಶಾಲೆಯವರೆಗಿನ ಸಾಗಾಟ ವ್ಯವಸ್ಥೆಯನ್ನು ಉಚಿತವಾಗಿ ಮಾಡಲೇಬೇಕು. ಸಾಕುವುದಕ್ಕೆ ಪೂರಕ ವಾತಾವರಣವಿಲ್ಲದೆ ಕಾನೂನು ಮಾಡಿರುವುದರಿಂದ ಮತ್ತಷ್ಟು ಗೋಸಾಕಣಿಕೆಯಿಂದ ವಿಮುಖರಾಗುವುದು ನಿಶ್ಚಯ.

ಕಾಲ ನದಿಯಲಿ ನಮ್ಮ ಬಾಳ ದೋಣಿಯು ಮೆರೆದು,
ತೇಲುತ್ತೆ ಭಯವ ಕಾಣದೆ ಸಾಗುತಿರಲು,
ಗಾಳಿ ಯಾವಾಗಮೊ ಬಂದೆತ್ತಣಿನೋ ಬೀಸುತ್ತಾ,
ಮೇಲು ಕೀಳಾಗಿಪುದು ಮಂಕುತಿಮ್ಮ.

ಕಾಲ ನದಿಯಲ್ಲಿ ಸಾಗುತ್ತಿದ್ದ ಗೋ ಎಂಬ ಬಾಳ ದೋಣಿಯು, ಗೋ ರಕ್ಷಣೆ ಎಂಬ ಬಿರುಗಾಳಿಗೆ ಸಿಕ್ಕಿ ಮೇಲು ಕೆಳಗಾಗುತ್ತಿದೆ. ಗಾಳಿ ತಡೆಯುವ ಕೆಲಸವಾಗಲಿ ಎಂಬ ಭಿನ್ನಹ. ಕೃಷಿಕನ ರೋದನ ಅರಣ್ಯರೋದನವಾಗದೇ ಇರಲಿ ಎಂದು ಆಶಿಸುತ್ತೇನೆ.

ಬರಹ :
# ಎ.ಪಿ.ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 hours ago