ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |

June 20, 2024
1:05 PM

ಈ ಬಾರಿ ಮುಂಗಾರು(Mansoon Rain) ಬಂದಷ್ಟೇ ವೇಗದಲ್ಲಿ ಹಿಂದೆ ಸರಿದಿದೆ. ಉತ್ತರ ಭಾರತ(North India) ತಲುಪಬೇಕಾದ ನೈರುತ್ಯ ಮಾರುತಗಳು ಕಾಣೆಯಾಗಿವೆ. ಇತ್ತ ಕೇರಳ, ಮಲೆನಾಡು, ಕರಾವಳಿಯಲ್ಲೂ ಮುಂಗಾರು ಮಳೆ ಕ್ಷೀಣಿಸಿದೆ. ಮಳೆ ಇಲ್ಲದೆ ಭೂಮಿ ಇನ್ನು ತಂಪಾಗಲಿಲ್ಲ. ಉತ್ತರ ಮತ್ತು ಪೂರ್ವ ಭಾರತದಲ್ಲಿ ಸೂರ್ಯನ ಪ್ರಖರತೆಯ(Heat) ಅಬ್ಬರ ಮುಂದುವರೆದಿದೆ. ತೀವ್ರ ತಾಪಮಾನದಿಂದಾಗಿ(Temperature) ಇಲ್ಲಿನ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೀವ್ರ ತಾಪಮಾನ ಸಾವು ನೋವುಗಳನ್ನು(Death) ಹೆಚ್ಚಿಸಿದೆ. ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವ ನೆರವಿಗೆ ಕೇಂದ್ರ ಸರ್ಕಾರ(Central Govt) ಬಂದಿದೆ. ರೋಗಿಗಳ(Patients) ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ(Hospital) ಸಲಹೆ ಹಾಗೂ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ಮಾನ್ಸೂನ್​​​​​​ ಪ್ರವೇಶಿಸಲಿದೆ ಎಂದು ಹೇಳಿದೆ. ಈ ಮೂಲಕ ಈಗ ಉಂಟಾಗಿರುವ ಹೀಟ್​ ವೇವ್​ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್ 12 ಮತ್ತು 18 ರ ನಡುವೆ ಮಾನ್ಸೂನ್​​​ನಲ್ಲಿ ಯಾವುದೇ ಮಹತ್ವದ ಪ್ರಗತಿ ಸಾಧಿಸಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಉತ್ತಮ ಮಾನ್ಸೂನ್​​ ಮಳೆ ಆಗಲಿದೆ ಎಂದು ಇಲಾಖೆ ಹೇಳಿದೆ. ಹೀಗಾಗಿ ಬಿಸಿಲಿನ ಶಾಖದಿಂದ ತತ್ತರಿಸುತ್ತಿರುವ ಉತ್ತರ ಭಾರತದಲ್ಲಿ ಮಳೆಗಾಗಿ ಎದುರು ನೋಡುವಂತಾಗಿದೆ. ಆದರೆ, ಹವಾಮಾನ ಇಲಾಖೆ ಅಂದಾಜಿಸಿದಂತೆ ಮುಂಗಾರು ಮಳೆ ಆಗುತ್ತಿಲ್ಲ ಎಂಬ ವಿಚಾರ ಹೊರ ಬಿದ್ದಿದೆ. ಇದು ಇಲ್ಲಿನ ಜನರನ್ನು ಇನ್ನಷ್ಟು ಕಂಗಾಲಾಗುವಂತೆ ಮಾಡಿದೆ. ಆದರೂ, ಉತ್ತಮ ಮಳೆಯ ಮುನ್ಸೂಚನೆಯನ್ನು ಐಎಂಡಿ ನೀಡಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 43 ರಿಂದ 45 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ ಎಂದು IMD ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಲ್ಲಿ ಹೀಟ್ ಸ್ಟ್ರೋಕ್ ಮತ್ತು ಶಾಖದ ಬಳಲಿಕೆಯಿಂದ ಹಲವಾರು ಸಾವುಗಳು ಸಂಭವಿಸಿವೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ವರದಿಗಳು ಹೇಳುತ್ತಿವೆ.

48 ಗಂಟೆಯಲ್ಲಿ 50 ಕ್ಕೂ ಹೆಚ್ಚು ಸಾವುಗಳ ವರದಿ: ಕಳೆದ 48 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ 50 ಶವಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದರೆ ಸಾವಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ ಅಧಿಕವಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನವು 35.2 ಡಿಗ್ರಿ ಸೆಲ್ಸಿಯಸ್ ಆಗಿತ್ತು, ಇದು 1969 ರಿಂದ ಜೂನ್‌ನಲ್ಲಿ ದಾಖಲಾಗಿದ್ದ ತಾಪಮಾನಕ್ಕಿಂತ ಅತಿ ಹೆಚ್ಚು ಎಂದು ತಿಳಿದು ಬಂದಿದೆ.

ಎಲ್ಲೆಲ್ಲಿ ಎಷ್ಟು ಸಾವು: ಆರ್‌ಎಂಎಲ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ 22 ರೋಗಿಗಳು ದಾಖಲಾಗಿದ್ದಾರೆ. ಐದು ಸಾವುಗಳು ಸಂಭವಿಸಿವೆ ಮತ್ತು 12 ರೋಗಿಗಳು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ದಾಖಲಾಗಿರುವ 42 ರೋಗಿಗಳು ಸೇರಿದಂತೆ ಒಟ್ಟು 60 ಹೀಟ್‌ಸ್ಟ್ರೋಕ್ ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಮೃತಪಟ್ಟ 60 ವರ್ಷದ ಮಹಿಳೆ ಮತ್ತು 50 ವರ್ಷದ ಪುರುಷ ಸೇರಿದಂತೆ ಆರು ಸಾವುನೋವುಗಳು ಈ ಆಸ್ಪತ್ರೆಯಿಂದ ವರದಿಯಾಗಿವೆ. ಇನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ ಶಂಕಿತ ಹೀಟ್​​ವೇವ್​​ನಿಂದ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮೂಲಗಳು ತಿಳಿಸಿವೆ.

ಎಚ್ಚೆತ್ತ ಕೇಂದ್ರ, ಪರಿಸ್ಥಿತಿಯ ಪರಿಶೀಲನೆ: ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಸಿಗಾಳಿಯಿಂದಾಗಿ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವವರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಬಿಸಿಗಾಳಿಯಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದಾರೆ. ಕೇಂದ್ರ ಸರಕಾರದಿಂದ ಚಾಲನೆಯಲ್ಲಿರುವ ಆಸ್ಪತ್ರೆಗಳಲ್ಲಿ ವಿಶೇಷ ಘಟಕಗಳನ್ನು ಆರಂಭಿಸುವಂತೆ ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಆರೋಗ್ಯ ಸೌಲಭ್ಯದ ಸನ್ನದ್ಧತೆಗೆ ನಿರ್ದೇಶನಗಳನ್ನು ನೀಡಿದೆ. ಉತ್ತರ ಭಾರತ ಹಾಗೂ ಇನ್ನಿತರ ರಾಜ್ಯಗಳಿಗೂ ಕೇಂದ್ರ ಸೂಚನೆ ನೀಡಿದ್ದು, ಬಿಸಿಗಾಳಿಯಿಂದ ಉಂಟಾಗಿರುವ ಪರಿಣಾಮಗಳನ್ನು ಎದುರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ ಕಾರ್ಯಕ್ರಮದ (NPCCHH) ಅಡಿ ರಾಜ್ಯ ನೋಡಲ್ ಅಧಿಕಾರಿಗಳು, ಮಾರ್ಚ್ 1 ರಿಂದ ಶಾಖದ ಅಲೆಗಳಿಂದ ಉಂಟಾಗಿರುವ ಸಾವು ನೋವುಗಳ ಅಂಕಿ- ಅಂಶಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶ, ದಕ್ಷಿಣ ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ಮತ್ತು ಒಡಿಶಾ, ಜಾರ್ಖಂಡ್, ಬಿಹಾರ ಮತ್ತು ಜಮ್ಮು ವಿಭಾಗದ ಕೆಲವು ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರ ಸಂಕಷ್ಟದ ಪರಿಸ್ಥಿತಿಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror