ಸಾರ್ವಜನಿಕ ಉದ್ದಿಮೆಗಳು ದೇಶದ ಎಂಎಸ್‌ಎಂಇ ಗಳಿಂದ ಕಚ್ಚಾವಸ್ತುಗಳ ಖರೀದಿಗೆ ಆದ್ಯತೆ ನೀಡಬೇಕು | ಸಚಿವೆ ಶೋಭಾ ಕರಂದ್ಲಾಜೆ

August 30, 2024
3:50 PM
  •  ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ಆಯೋಜಿಸಿರುವ ಎರಡು ದಿನಗಳ ಸಮಾವೇಶ ಉದ್ಘಾಟನೆ
  • ಸೂಕ್ಷ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಪ್ರೋತ್ಸಹಕ್ಕೆ ಹೆಚ್ಚಿನ ಅನುದಾನಕ್ಕೂ ಮನವಿ

ದೇಶದ ದೊಡ್ಡ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಬಿಡಿಭಾಗಗಳ ಸಂಗ್ರಹಣೆಗೆ ದೇಶದಲ್ಲಿರುವ ಎಂಎಸ್‌ಎಂಇ ಗಳಿಗೆ ಆದ್ಯತೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ MSME ಮತ್ತು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು .

ಇಂದು ನಗರದ ಅರಮನೆ ಮೈದಾನದಲ್ಲಿ ಭಾರತ ಸರಕಾರದ ಎಂಎಸ್‌ಎಂಇ ಮಂತ್ರಾಲಯದ ಸಹಯೋಗದೊಂದಿಗೆ ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ಆಯೋಜಿಸಿರುವ ಎರಡು ದಿನಗಳ “ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಮಾವೇಶ – 2024” ಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಕೈಗಾರಿಕಾ ಕ್ಷೇತ್ರಕ್ಕೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೊಡುಗೆ ಅಪಾರ. ಹೆಚ್ಚಿನ ಉದ್ಯೋಗ ಸೃಷ್ಟಿಗೆ ಎಂಎಸ್‌ಎಂಇ ಗಳೂ ಕಾರಣ. ಇವುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ನನಸಾಗುವ ನಿಟ್ಟಿನಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಲಿವೆ. ಈ ಕ್ಷೇತ್ರದಲ್ಲಿರುವ ಮಾನವ ಸಂಪನ್ಮೂಲದ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ನಮ್ಮ ದೇಶದ ಜಿಡಿಪಿಯಲ್ಲಿ ಹೆಚ್ಚಿನ ಕೊಡುಗೆ ನೀಡುವುದಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸ ಕೈಗಾರಿಕೆಗಳನ್ನು ಪ್ರಾರಂಭಿಸಲು ಇರುವ ಸಬ್ಸಿಡಿಗಳನ್ನು ಪಡೆಯಲು ಪ್ರತಿ ವರ್ಷ ಸುಮಾರು 5 ಲಕ್ಷ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನಮ್ಮ ಇಲಾಖೆಯಿಂದ ಕೇವಲ 90 ಸಾವಿರ ಜನರಿಗೆ ಮಾತ್ರ ಸಬ್ಸಿಡಿ ನೀಡಲು ಸಾದ್ಯವಾಗುತ್ತಿದೆ. ಇದನ್ನ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ದೇಶದಲ್ಲಿರುವ ದೊಡ್ಡ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮಗೆ ಬೇಕಾದ ಬಹುತೇಕ ಕಚ್ಚಾವಸ್ತುಗಳನ್ನ ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿವೆ. ನಮ್ಮ ದೇಶದಲ್ಲಿರುವ ಎಂಎಸ್‌ಎಂಇ ಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಸಾರ್ವಜನಿಕ ಉದ್ದಿಮೆಗಳು ದೇಶದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ ಕಚ್ಚಾವಸ್ತುಗಳನ್ನು ಖರೀದಿಸುವಂತೆ ಸೂಚನೆ ನೀಡಲು ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದರು.

ಕೇಂದ್ರ ಸರಕಾರ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯಲ್ಲಿ ಆಯಾ ರಾಜ್ಯಗಳು ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಅಗತ್ಯ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಈ ರೀತಿಯ ಸಭೆಯನ್ನು ನಡೆಲಾಗುತ್ತಿದೆ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್‌ ಚಂದ್ರ ಲಹೋಟಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಅವುಗಳ ಅಭಿವೃದ್ದಿಗೆ ಅಗತ್ಯವಿರುವ ಮಾಹಿತಿಯನ್ನು ಪಡೆಯುವಂತಹ ವೇದಿಕೆಯನ್ನು ಒದಗಿಸಲಾಗಿದೆ. ಎಂಎಸ್‌ಎಂಇ ಗಳು ನಮ್ಮ ಕೈಗಾರಿಕಾ ಕ್ಷೇತ್ರದ ಬುನಾದಿಗಳಾಗಿವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಕೈಗಾರಿಕೆಗಳ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿವೆ. “ಎಂಎಸ್‌ಎಂಇ ಕಾನ್ಕ್ಲೇವ್ – 2024 ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇಗಳ ಬೆಳವಣಿಗೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಮ್ಮ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುವ ಮಹತ್ವದ ವೇದಿಕೆಯಾಗಿದೆ. ಉದ್ಯಮದ ನಾಯಕರು, ನೀತಿ ನಿರೂಪಕರು ಮತ್ತು ಹಣಕಾಸು ಸಂಸ್ಥೆಗಳನ್ನ ಒಟ್ಟುಗೂಡಿಸುವ ಮೂಲಕ ಎಂಎಸ್‌ಎಂಇಗಳು ಅಭಿವೃದ್ದಿ ಹೊಂದಲು ಅಗತ್ಯವಿರುವ ಮಾಹಿತಿಯನ್ನು ನೀಡುವುದು ನಮ್ಮ ಉದ್ದೇಶವಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅರ್ಥಪೂರ್ಣವಾಗಿ ಕೊಡುಗೆ ನೀಡುವ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹಾಗೆಯೇ, ರಾಷ್ಟ್ರೀಯ ಮತ್ತು ಜಾಗತಿಕ ಹಂತಗಳಲ್ಲಿ ತಮ್ಮ ಸೇವೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಸಣ್ಣ ಉದ್ಯಮಗಳನ್ನು ಸಶಕ್ತಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಪ್ರಸಿಡೆಂಟ್‌ ಎಲೆಕ್ಟ್‌ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷರಾದ ಉಮಾ ರೆಡ್ಡಿ, ಎಫ್‌ಕೆಸಿಸಿಐ ಇಂಡಸ್ಟ್ರಿ ಕಮಿಟಿ ಅಧ್ಯಕ್ಷರಾದ ಅರವಿಂದ ಬುರ್ಜಿ, ಕಾಸಿಯಾ ಅಧ್ಯಕ್ಷರಾದ ಎಂ.ಜಿ ರಾಜಗೋಪಾಲ್‌, ಪೀಣ್ಯ ಇಂಡಸ್ಟ್ರಿಯ ಅಸೋಸಿಯೇಷನ್‌ ಅಧ್ಯಕ್ಷರಾದ ಶಿವಕುಮಾರ್‌ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror