ಖಡ್ಗಕ್ಕೆ ನಡುಗದ ಹೃದಯ ಕರುಣೆಗೆ ಕರಗೀತು: #ರಾಘವೇಶ್ವರಶ್ರೀ

August 18, 2022
9:02 PM

ಖಡ್ಗಕ್ಕೆ ನಡುಗದ ಪಾಪಿಯ ಹೃದಯ ಕರುಣೆಯಿಂದ ಕರಗುತ್ತದೆ. ಕರುಣೆಯಿಂದ ಕ್ರೌರ್ಯವನ್ನು ಗೆದ್ದ ನಿದರ್ಶನಗಳು ಸಾಕಷ್ಟಿವೆ. ಆದ್ದರಿಂದಲೇ ಕರುಣೆ ಶ್ರೇಷ್ಠ ಭಾವ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕರುಣೆಯ ಶಕ್ತಿ ಖಡ್ಗಕ್ಕಿಂತಲೂ ಹೆಚ್ಚು ಎಂದು ವಿಶ್ಲೇಷಿಸಿದರು. ರಾಮ, ಸೀತೆ, ಹನುಮಂತನ ಗುಣ ಬೆಳೆಸಿಕೊಳ್ಳಬೇಕೆಂದರೆ, ದೇಹದಲ್ಲಿ ರಕ್ತ ಹರಿಯುವಂತೆ ಕರುಣೆ ಎಲ್ಲೆಡೆ ತುಂಬಿ ಹರಿಯಬೇಕು. ಜಗತ್ತಿನ ಪ್ರತಿಯೊಬ್ಬರ ಬಗ್ಗೆಯೂ ಕರುಣೆ ತೋರುವ ಮನಸ್ಸು ಬೆಳೆಸಿಕೊಳ್ಳೋಣ ಎಂದು ಹೇಳಿದರು.

ಸತ್ಪುರುಷರು ಕರುಣಾಪೂರ್ಣರು; ಸಾಮಾನ್ಯರು ತಮ್ಮ ಸಾರ್ಥ ಸಾಧಿಸಿ ಬೇರೆಯವರ ಬಗ್ಗೆ ಕರುಣೆ ತೋರುತ್ತಾರೆ; ಆದರೆ ಮಾನುಷ ರಾಕ್ಷಸರು ತಮ್ಮ ಹಿತಕ್ಕಾಗಿ ಪರಹಿತವನ್ನು ಕಿತ್ತುಕೊಳ್ಳುವಂತವರು; ಕೊನೆಯ ವರ್ಗ ಕರುಣೆಯ ಸುಳಿವೇ ಇಲ್ಲದವರು. ಇವರು ಕೊನೆಗೆ ಹೇಳ ಹೆಸರಿಲ್ಲದಂತೆ ನಾಶವಾಗಿ ಬಿಡುತ್ತಾರೆ ಎಂದು ಉದಾಹರಣೆ ಸಹಿತ ವಿವರಿಸಿದರು.
ತಾಟಕಿಯನ್ನು ಹತ್ಯೆ ಮಾಡುವಂತೆ ವಿಶ್ವಾಮಿತ್ರರು ಸೂಚಿಸಿದರೂ, ಹೆಣ್ಣು ಎಂಬ ಕಾರಣಕ್ಕೆ ರಾಮ ಕರುಣೆ ತೋರುತ್ತಾನೆ. ರಾಕ್ಷಸಿಯಾದರೂ, ಸ್ತ್ರೀಯೆಂಬ ಕಾರಣಕ್ಕೆ ಕರುಣೆ ತೋರಿದ ನಿದರ್ಶನ ರಾಮ ಎಷ್ಟು ಕರುಣಾಮೂರ್ತಿ ಎನ್ನುವುದನ್ನು ಸೂಚಿಸುತ್ತದೆ ಎಂದು ಬಣ್ಣಿಸಿದರು.

ಶುಕ-ಸಾರಣರೆಂಬ ರಾವಣನ ಗುಪ್ತಚರರು ರಾಮಸೈನ್ಯದ ಅವಲೋಕನ ಮಾಡುವ ವೇಳೆ ಕಪಿಸೈನ್ಯದ ಕೈಯಲ್ಲಿ ಸಿಕ್ಕಿಹಾಕಿಕೊಂಡ ಸಂದರ್ಭದಲ್ಲಿ ರಾಜದೂತನನ್ನು ಹತ್ಯೆ ಮಾಡುವುದು ರಾಜನೀತಿಗೆ ವಿರುದ್ಧ ಎಂದು ರಾಮ ಬಿಟ್ಟು ಬಿಡುತ್ತಾನೆ. ಇದು ರಾಮ ಕಾರುಣ್ಯದ ಮತ್ತೊಂದು ಮುಖ ಎಂದರು.

ವಿಭೀಷಣನಿಗೆ ರಾಮ ಆಸರೆ ನೀಡುವುದಕ್ಕೆ ಮುಂದಾದಾಗ ಸುಗ್ರೀವ ವಿರೋಧಿಸುತ್ತಾನೆ. ಆಗ ಶ್ರೀರಾಮ ಪಾರಿವಾಳದ ಕಥೆಯೊಂದನ್ನು ಹೇಳಿ ಸುಗ್ರೀವನ ಮನವೊಲಿಸುತ್ತಾರೆ. ಈ ಕಥೆಯಲ್ಲಿ ತನ್ನ ಸಂಗಾತಿಯನ್ನು ಕೊಂದ ಬೇಡನೊಬ್ಬನಿಗೆ ಗಂಡು ಪಾರಿವಾಳ ಮಳೆ- ಗಾಳಿಯಿಂದ ರಕ್ಷಣೆ ನೀಡುವುದಲ್ಲದೇ, ಆತನಿಗೆ ಬೆಂಕಿ ಕಾಯಿಸಲು ಬೆಂಕಿ ಸಾಮಗ್ರಿಗಳನ್ನೂ ನೀಡುತ್ತದೆ. ಕೊನೆಗೆ ಆತನ ಹಸಿವನ್ನು ನೋಡಲಾರದೇ ಉರಿಗೆ ಬಿದ್ದು ಸತ್ತು ಆತನಿಗೆ ಆಹಾರವಾಗುತ್ತದೆ. ಒಂದು ಪಾರಿವಾಳ ತನಗೆ ಕೇಡು ಬಗೆದವರಿಗೂ ಈ ಬಗೆಯ ಕರುಣೆ ತೋರಿದ ಮೇಲೆ ಮಾನವರಾದ ನಾವೇನು ಮಾಡಬೇಕು ಎಂದು ಸುಗ್ರೀವನನ್ನು ಪ್ರಶ್ನಿಸುವಲ್ಲಿ ಕಾಣುವುದೂ ರಾಮಕಾರುಣ್ಯದ ಮುಖ ಎಂದು ವಿವರಿಸಿದರು.

ಅಶೋಕವನದಲ್ಲಿ ಸೀತೆಗೆ ಒಂದು ವರ್ಷ ಚಿತ್ರಹಿಂಸೆ ನೀಡಿದ ರಕ್ಕಸಿಯರನ್ನು ಹತ್ಯೆ ಮಾಡಲು ಹನುಮಂತ ಮುಂದಾದಾಗ ಸೀತೆ, “ತಪ್ಪನ್ನೇ ಮಾಡದವರು ಯಾರೂ ಇಲ್ಲ; ಬದುಕಿನ ಪ್ರತಿ ಹಂತದಲ್ಲೂ ಒಂದಲ್ಲ ಒಂದು ತಪ್ಪು ಮಾಡಿರುತ್ತಾನೆ. ಹಾಗಿರುವಾಗ ಅವರ ಮೇಲೇಕೆ ಹಗೆ? ಆರ್ಯನಾದವನು ಅವರನ್ನು ಹತ್ಯೆ ಮಾಡಬಾರದು” ಎನ್ನುತ್ತಾಳೆ. ಇದು ಸೀತೆಯ ಕಾರುಣ್ಯ. ಇದು ರಾಮ-ಸೀತೆಯರಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ವಾಲ್ಮೀಕಿ ಬಣ್ಣಿಸಿದ್ದಾರೆ ಎಂದರು.

ಅಂತೆಯೇ ಹನುಮಂತ ಲಂಕೆಗೆ ಪ್ರವೇಶಿಸುವ ವೇಳೆ ಲಂಕಿಣಿ ಎದುರಾಗಿ ಪ್ರಹಾರ ಮಾಡಿದಾಗ ಪ್ರತಿಯಾಗಿ ಹನುಮಂತ ಎಡಗೈಯ ಮೆದು ಮುಷ್ಟಿಯಿಂದ ಹೊಡೆಯುತ್ತಾನೆ. ಆಗ ಲಂಕಿಣಿ ನೆಲಕ್ಕೆ ಬೀಳುತ್ತಾಳೆ. ಹನುಮಂತ ಹೆಣ್ಣೆಂಬ ಕಾರಣಕ್ಕೆ ಕರುಣೆ ತೋರುತ್ತಾನೆ. ಹೀಗೆ ಮಹಾಪುರುಷರು ಎಂಥ ಸಂದಿಗ್ಧ ಸ್ಥಿತಿಯಲ್ಲೂ ವಿರೋಧಿಗಳ ಮೇಲೂ ಕರುಣೆ ತೋರಿದ ಹಲವು ನಿದರ್ಶನಗಳು ರಾಮಾಯಣದಲ್ಲಿ ಕಂಡುಬರುತ್ತವೆ ಎಂದು ವಿಶ್ಲೇಷಿಸಿದರು.

ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳನ್ನು ಗುರುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಗೌರವಿಸಲಾಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಧಾರ್ಮಿಕ ವಿಭಾಗದ ಸಂಚಾಲಕ ಭಾನುಪ್ರಕಾಶ್ ಶ್ರೀರಂಗಪಟ್ಟಣ, ಉಪಾಧ್ಯಕ್ಷ ಶಶಿಭೂಷಣ ಹೆಗಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀಪಾದ ರಾಯಸದ, ನಾರಾಯಣ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror