ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ

July 18, 2025
10:31 PM

ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ. ಅಂತೆಯೇ ಜೀವನದಲ್ಲೂ ಪ್ರತಿದಿನ ಒಂದೊಂದೇ ಸತ್ಕಾರ್ಯಗಳನ್ನು ಎಡೆಬಿಡದೇ ಮಾಡಿದರೆ ಅದ್ಭುತ ಶಕ್ತಿ ಬರುತ್ತದೆ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ  ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಶುಕ್ರವಾರ ‘ದಿನಚರ್ಯ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು. ಜೀವನದಲ್ಲಿ ನಿರಂತರತೆಗೆ ಇರುವ ಶಕ್ತಿ ಯಾವುದಕ್ಕೂ ಇಲ್ಲ ಎಂದು ವಿಶ್ಲೇಷಿಸಿದರು. ಒಂದು ಒಳ್ಳೆಯ ಅಭ್ಯಾಸ ನಮ್ಮನ್ನು ಉದ್ಧರಿಸುತ್ತದೆ ಅಂತೆಯೇ ಒಂದು ದುರಭ್ಯಾಸ ನಮ್ಮನ್ನು ನರಕಕ್ಕೆ ಇಳಿಸೀತು; ಆದ್ದರಿಂದ ಕುಂದು ಇಲ್ಲದ ದಿನಚರ್ಯಕೆ ಮನ ಮಾಡಬೇಕು ಎಂದು ಸಲಹೆ ಮಾಡಿದರು.

ಜೀವನದಲ್ಲಿ ಒಂದು ಕೆಡುಕು ಮಾಡಿದರೂ, ಸತ್ಕಾರ್ಯಗಳ ದಿನಚರಿಯಲ್ಲಿ ಒಂದು ದಿನ ಲೋಪವಾದರೂ ಅದು ಕಪ್ಪುಚುಕ್ಕೆಯಾಗಿಯೇ ಉಳಿಯುತ್ತದೆ. ಒಂದು ದಿನವನ್ನು ವ್ಯರ್ಥಮಾಡಿದರೂ ಬಟ್ಟೆಯಲ್ಲಿ ರಂಧ್ರವಾದಂತೆ ಆಗುತ್ತದೆ. ಕೆಲವೊಮ್ಮೆ ಇದು ದೊಡ್ಡ ಅನಾಹುತಕ್ಕೂ ಕಾರಣವಾಗಬಹುದು ಎಂದು ಎಚ್ಚರಿಸಿದರು.

ಜೀವನ ಒಂದು ಹಳ್ಳವಾದರೆ ಅದರಲ್ಲಿ ದಿನ ಒಂದು ಹನಿ ಇದ್ದಂತೆ. ಜೀವನ ಒಂದು ಭವನವಾದರೆ ದಿನ ಇಟ್ಟಿಗೆ ಇದ್ದಂತೆ. ಒಂದು ಇಟ್ಟಿಗೆ ಓರೆಯಾದರೆ ಗೋಡೆ ಡೊಂಕಾಗುತ್ತದೆ. ಜೀವನ ಒಂದು ಪಯಣವಾದರೆ ದಿನ ಒಂದು ಹೆಜ್ಜೆ. ಒಂದು ಹೆಜ್ಜೆ ತಪ್ಪಿದರೂ ಗುರಿ ತಲುಪಲು ಸಾಧ್ಯವಾಗದು ಎಂಬ ಉದಾಹರಣೆ ನೀಡಿದರು.

ಪ್ರತಿದಿನವೂ ಕೆಡುಕು ಮಾಡುವುದಿಲ್ಲ ಎಂಬ ಸಂಕಲ್ಪ ತೊಟ್ಟರೆ ಜೀವನದಲ್ಲಿ ಒಳಿತು ಸಾಧಿಸಬಹುದು ಎಂದರು. ಗಂಗಾಜಲ ಪಾನ ಮಾಡಿದರೆ ಅದರ ಪರಿಣಾಮ ಒಂದು ವರ್ಷ ಇರುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ಆದ್ದರಿಂದ ಪ್ರತಿದಿನ ಒಂದೊಂದು ಗುಟುಕು ಗಂಗಾಜಲ ಸೇವಿಸಿದರೆ ಶುದ್ಧವಾಗಿರಬಹುದು. ಜೀವನದಲ್ಲೂ ಪ್ರತಿದಿನ ಒಂದು ಒಳ್ಳೆಯ ಕೆಲಸ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ವಿಶ್ಲೇಷಿಸಿದರು.

ರಾಮಚಂದ್ರಾಪುರ ಮಂಡಲದ ಹೊಸನಗರ, ಸಂಪೆಕಟ್ಟೆ, ನಿಟ್ಟೂರು, ತುಮರಿ ಮತ್ತು ಹೊಸಕೊಪ್ಪ ವಲಯಗಳ ಶಿಷ್ಯರಿಂದ ಸರ್ವಸೇವೆ ನೆರವೇರಿತು.
ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ವಿದ್ವಾನ್ ಸತ್ಯನಾರಾಯಣ ಶರ್ಮಾ, ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಉಪಾಧ್ಯಕ್ಷ ಶಾಂತಾರಾಮ ಹೆಗಡೆ ಹಿರೇಮನೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ರಾಮಚಂದ್ರಾಪುರ ಮಂಡಲದ ಅಧ್ಯಕ್ಷ ಪ್ರಕಾಶ್ ಜೆ.ಎನ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror