ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನ. ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ , ರಾಜ್ಯಕ್ಕೆ ಕೊಡಬೇಕಾದ ಕ್ಯಾಂಪಾ ನಿಧಿಯನ್ನೇ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.
ಆನೆ-ಮಾನವ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವರ ಮಟ್ಟದ ಸಭೆಯಲ್ಲಿ ಅರಣ್ಯ ಸಚಿವರುಗಳಾದ ಎಂ. ಮದಿವೇಂಧನ್ (ತಮಿಳುನಾಡು), ಸಸೀಂದ್ರನ್ (ಕೇರಳ), ಬೈದ್ಯಾನಾಥ್ ರಾಮ್ (ಜಾರ್ಖಂಡ್) ಮತ್ತು ಕೊಂಡ ಸುರೇಖಾ (ತೆಲಂಗಾಣ) ಮತ್ತು ಉನ್ನತ ಐ.ಎಫ್.ಎಸ್. ಅಧಿಕಾರಿಗಳು ಪಾಲ್ಗೊಂಡಿದ್ದರು. ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.
ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆ ಮಾಡಲಾಯ್ತು. ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂದು ಅಭಿಪ್ರಾಯ ವ್ಯಕ್ತವಾಯಿತು. ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು. ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…