ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶವಾಗಿದೆ. ಇಂದು ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ ಗಾಳಿಯ ಪರಿಣಾಮವಾಗಿ ಹಲವೆಡೆ ಮರಗಳು ಧರೆಗುರುಳಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಧಾರಕಾರ ಮಳೆಯಾಗುತ್ತಿದು ಜನ ಜೀವನ ಬಾಧಿತಗೊಂಡಿದೆ. ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಹೊರನಾಡು, ಶೃಂಗೇರಿ, ಕಲ್ಲತಗಿರಿ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ಇದೀಗ ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಶಿವಮೊಗ್ಗದಲ್ಲಿ ಜಲಾ ನಯನ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ತುಂಗಾ ನದಿಗೆ ಕಟ್ಟಲಾದ ಗಾಜನೂರು ಜಲಾಶಯ ಭರ್ತಿಯಾಗಿದೆ.ಜಲಾಶಯ ಮುಂಗಾರು ಪೂರ್ವದಲ್ಲಿಯೇ ಭರ್ತಿಯಾಗಿದ್ದು, 3.71 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯಕ್ಕೆ 2000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಭಾರೀ ಮಳೆಯ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಎಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.