ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಕೆಂಗೇರಿಯಲ್ಲಿ ಸುಮಾರು 100 ಮನೆಗಳು ಜಲಾವೃತಗೊಂಡಿದ್ದು, ನೀರನ್ನು ಹೊರಹಾಕಲು ಪಂಪ್ ಸೆಟ್ಗಳನ್ನು ಬಳಸಲಾಗಿದೆ. ನಗರದಲ್ಲಿ ರಾತ್ರಿ 66 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಆಲರ್ಟ್ ಘೋಷಿಸಲಾಗಿದೆ…..ಮುಂದೆ ಓದಿ….
ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಸಿಲ್ಕ್ ಬೋರ್ಡ್ ಜಂಕ್ಷನ್, ಶ್ರೀ ಸಾಯಿ ಲೇಔಟ್, ರೇನ್ಬೋ ಡ್ರೈವ್ ಲೇಔಟ್ ರಸ್ತೆಗಳ ಮೇಲೆ ಮತ್ತು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ನಿಂತ ನೀರಿನಲ್ಲಿ ಹಲವಾರು ವಾಹನಗಳು ಮುಳುಗಿವೆ. ಉಕ್ಕಿ ಹರಿಯುವ ನೀರಿನ ಚರಂಡಿಗಳು ಬೈರಸಂದ್ರ ಲೇಔಟ್, ಕೆಂಪೇಗೌಡ ರಸ್ತೆ ಮತ್ತು ಕಾಮರಾಜ್ ನಗರದ ವಸತಿ ಪ್ರದೇಶಗಳು ಜಲಾವೃತವಾಗಿದೆ. ಮಳೆ ನೀರಿನಿಂದ ಮುಳುಗಿರುವ ಮಹದೇವಪುರದಲ್ಲಿ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಲು ಎನ್ಡಿಆರ್ಎಫ್ ತಂಡಗಳೊಂದಿಗೆ ಮಹಾನಗರ ಪಾಲಿಕೆಯು ಟ್ರ್ಯಾಕ್ಟರ್ಗಳು, ಜೆಸಿಬಿಗಳು, ಪಂಪ್ ಸೆಟ್ಗಳು ಮತ್ತು ಅಗ್ನಿಶಾಮಕ ಸೇವಾ ಸಿಬ್ಬಂದಿಯನ್ನು ರವಾನಿಸಿದೆ. ನಗರದಾದ್ಯಂತ ಬಿದ್ದ ಮರಗಳು ಮತ್ತು ಪ್ರವಾಹವನ್ನು ತೆರವುಗೊಳಿಸಲಾಗುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಬಿಎಂಪಿ ವಾರ್ ರೂಂಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎನ್ ಪುವಿಯರಸು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರ, ರೆಂಬೆ, ಕೊಂಬೆಗಳು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಗರದ ವಿವಿಧೆಡೆ ರಸ್ತೆಗಳು ಜಲಾವೃತಗೊಂಡ ಪರಿಣಾಮ ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 103 ಮಿಲಿಮೀಟರ್ ಮಳೆಯಾಗಿದೆ. ಇದುವರೆಗೆ ಅತಿ ಹೆಚ್ಚು ಮಳೆ ಪೀಡಿತ ಪ್ರದೇಶಗಳಲ್ಲಿ ಬೆಂಗಳೂರು ಒಂದಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎನ್ ಪುವಿಯರಸು ತಿಳಿಸಿದ್ದಾರೆ.ವಿಶೇಷವಾಗಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಪ್ರವಾಸಿಗರು, ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ದೇಶನ ನೀಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಮಾವು, ಟೊಮೆಟೊ ಸೇರಿದಂತೆ ತರಕಾರಿ ಬೆಳೆಗಳಿಗೆ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಟೊಮೆಟೊ ಬೆಳೆಗೆ ವೈರಸ್ ಹರಡುವ ಸಾಧ್ಯತೆ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ವಾರ್ಷಿಕ ಬೆಳೆಯಾದ ಮಾವು ಇನ್ನೇನು ಒಂದು ವಾರದಲ್ಲಿ ಮಾರುಕಟ್ಟೆ ಪ್ರವೇಶ ಮಾಡಲಿದೆ. ಕೋಲಾರ ಜಿಲ್ಲೆಯ ಕೊಂಡೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಮಳೆಯ ಜೊತೆಗೆ ಬಿರುಗಾಳಿಯು ಬೀಸುತ್ತಿರುವುದರಿಂದ ಮಾವಿನ ಕಾಯಿಗಳು ಕೆಲವೆಡೆ ನೆಲಕಚ್ಚಿವೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಚಿಕ್ಕಮಗಳೂರಿನ ಅಲ್ಲಂಪುರ ಬಳಿ 8 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ. ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ ಹಾನಿಯನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ. ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.