ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ ಮುಂದುವರೆದಿದೆ. ಬೆಳಗ್ಗಿನಂದಲೇ ಸುರಿಯುತ್ತಿರುವ ಮಳೆಯಿಂದ ಅನೇಕ ಕಡೆ ಮರಗಳು ಉರುಳಿಬಿದ್ದಿವೆ. ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಉತ್ತಮ ಮಳೆ ಬೀಳುತ್ತಿದ್ದರೂ ಹೋಲಿಕೆಯಲ್ಲಿ ಕಳೆದ ವರ್ಷಕ್ಕಿಂತ ಕಡಮೆ ಮಳೆಯಾಗಿದೆ. ಜನವರಿಯಿಂದ ಈವರೆಗೆ ಕೊಡಗಿನಲ್ಲಿ ಕಳೆದ ವಷ 250 ಮಿಲಿ ಮೀಟರ್ ಮಳೆ ಬಿದ್ದಿದ್ದರೆ, ಈ ವರ್ಷ 216 ಮಿಲಿಮೀಟರ್ ಮಳೆಯಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಸೋಮವಾರಪೇಟೆ ತಾಲೂಕಿನಲ್ಲಿ ಕಡಮೆ ಮಳೆಯಾಗಿದೆ. ಮುಂದಿನ ವಾರ ಕೇರಳದ ಮೂಲಕ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದ್ದು, ಈ ವರ್ಷ ಮುಂಗಾರು ಪೂರ್ವ ಮಳೆಯು ಮೇ ತಿಂಗಳಿನಲ್ಲಿಯೇ ಪ್ರಾರಂಭವಾಗಿದೆ.