ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ ಮೂಲಕ ನಡೆಸಲಾಗುತ್ತಿದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಕ್ಯಾಂಪ್ಕೋ ಸಹಯೋಗದೊಂದಿಗೆ ನಡೆಸಲಾಗುವ 5ನೇ ಕೃಷಿ ಯಂತ್ರಮೇಳದ ರೂಪು ರೇಷೆಯನ್ನು, ಕೃಷಿಕರ ನಿರೀಕ್ಷೆಗಳನ್ನು ಕ್ರೋಢೀಕರಿಸುವ ಸಲುವಾಗಿ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದರು. ಕೃಷಿಕರಿಗೆ ಬಳಸುವುದಕ್ಕೆ ಅನುಕೂಲಕರವಾದ ಸಣ್ಣ ಸಣ್ಣ ಯಂತ್ರೋಪಕರಣಗಳ ಲಭ್ಯತೆ ಮತ್ತು ಅದರ ಬಳಕೆಗೆ ಪೂರಕವಾದ ಮಾಹಿತಿಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಐದನೇ ಯಂತ್ರಮೇಳದ ಮೂಲ ಉದ್ದೇಶವೂ ಆಗಿದೆ ಎಂದ ಡಾ.ಕಲ್ಲಡ್ಕ ಪ್ರಭಾಕರ ಭಟ್, ದಿನ ದಿನವೂ ಹೊಸ ಹೊಸ ತಂತ್ರಜ್ಞಾನಗಳು ಅಭಿವೃದ್ಧಿಯಾಗುತ್ತಿದೆ ತನ್ಮೂಲಕ ನೂತನ ಯಂತ್ರಗಳ ಆವಿಷ್ಕಾರವಾಗುತ್ತಿದೆ ಇವೆಲ್ಲವನ್ನೂ ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಗರಿಷ್ಟ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ ಬೆಳೆಗಾರರ ಹಿತ ಕಾಪಾಡುವುದಕ್ಕೆ ಕ್ಯಾಂಪ್ಕೋ ಸಂಸ್ಥೆಯು ಬದ್ದವಾಗಿದೆ ಎಂದರು. ಅಡಿಕೆ, ತೆಂಗು, ಬಾಳೆ, ಕಾಳುಮೆಣಸು, ರಬ್ಬರ್ ಮುಂತಾದವಲ್ಲದೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸುವ ಬಗ್ಗೆ ಸಂಸ್ಥೆಯು ಯೋಚಿಸುತ್ತಿದೆ ಎಂದರು. ಸಣ್ಣ ರೈತರಿಗೆ ನೆರವಾಗುವ ಕಡಿಮೆ ವೆಚ್ಚದ ಸಣ್ಣ ಉಪಕರಣಗಳ ಲಭ್ಯತೆಯ ಕೊರತೆಯ ಬಗ್ಗೆ ಅನೇಕ ರೈತರು ಹೇಳಿದ್ದಾರೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.
ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ಕುಮಾರ್.ಎಚ್.ಎಮ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಹ್ಮಣ್ಯ ಭಟ್.ಟಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಂದಿಸಿದರು. ಕಾಲೇಜಿನ ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.ಸಂವಾದದಲ್ಲಿ ಕೃಷಿಕರ ನಿರೀಕ್ಷೆಗಳು ಹಾಗೂ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು. ಯಂತ್ರ ಮೇಳವನ್ನು ರೈತ ಸ್ನೇಹಿಯಾಗಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಗುಣಮಟ್ಟದ ಚರ್ಚೆ ನಡೆಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…