ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಮಂಗಳೂರಿನಲ್ಲಿ ಹೇಳಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪಾಲನೆ ಮಾಡಿ ಕರಾವಳಿ ಭಾಗದಲ್ಲಿ , ಜನರಿಗೆ ವಿಶ್ವಾಸ ಮೂಡಿಸಲು ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು. ಕೋಮುಗಲಭೆ ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಪಡೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ಒಂದೆರಡು ವಾರದೊಳಗೆ ರಚಿಸಲಾಗುವುದು. ಇನ್ನು ಮುಂದೆ ಪ್ರಚೋದನಾಕಾರಿ ಹೇಳಿಕೆಗಳನ್ನು ಯಾರೇ ನೀಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದರು.
ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಕಾರಣಕ್ಕೂ ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.