ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಿಲ್ಲ್ಲ ಎಂದು ರೈತರು ದೂರುಗಳನ್ನು ಸಲ್ಲಿಸಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ್ದಾರೆ. ಸಕ್ಕರೆ ಆಯುಕ್ತರು ನೀಡುವ ದಿನಾಂಕದಂದು ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಗೆ ನಿಗದಿಪಡಿಸಿರುವ ಕಬ್ಬನ್ನು ಮಾತ್ರ ಕಟಾವು ಮಾಡಲು ಅವಕಾಶವಿರುತ್ತದೆ. ಇದನ್ನು ಮನದಟ್ಟು ಮಾಡಿಕೊಂಡು ಕಾರ್ಖಾನೆಗಳಲ್ಲಿ ಸಣ್ಣ ಪುಟ್ಟ ಆಂತರಿಕ ತೊಂದರೆಗಳಿದ್ದಲ್ಲಿ ಈಗಲೇ ಸರಿಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯು 4 ಲಕ್ಷದ 20 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ. ಪ್ರತಿ ದಿನ 4000ಮೆಟ್ರಿಕ್ ಟನ್ ಕಬ್ಬು ನುರಿಸುವ ಸಾಮರ್ಥ್ಯವಿದೆ ಎಂದು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.