ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

June 25, 2025
6:32 AM

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ವಿಶ್ವಾವಸು ಸಂವತ್ಸರದ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪರಮಪೂಜ್ಯರು ಆಶೀರ್ವಚನ ನೀಡಿದರು. ನಾವು ನಮ್ಮ ಭಾಷೆಯನ್ನು ಮಾತನಾಡುವುದು ದೇಶ, ಸಂಸ್ಕೃತಿ, ಭಾಷೆ, ಪರಂಪರೆಗೆ ನಾವು ಸಲ್ಲಿಸುವ ಅತಿದೊಡ್ಡ ಸೇವೆ. ಇದು ಜೀವನಕ್ಕೆ ಸ್ವಾರಸ್ಯವನ್ನೂ ತರುತ್ತದೆ ಎಂದರು.
ಶುದ್ಧವಾದ ಮಾತೃಭಾಷೆಯನ್ನು ಮಾತನಾಡುವ ಪ್ರಯತ್ನ ಸ್ವಭಾಷಾ ಚಾತುರ್ಮಾಸ್ಯದ ತಿರುಳು. ಮರೆತ ಪದಗಳನ್ನು ನೆನಪಿಸಿಕೊಳ್ಳೋಣ. ಪರಕೀಯತೆ ನಮ್ಮ ನಾಲಿಗೆಯಲ್ಲೇ ಇದೆ. ನಮ್ಮ ನಾಲಿಗೆ ಕೆಡಿಸಿಕೊಳ್ಳದಿರೋಣ. ಸಂಸ್ಕಾರದಿಂದ ಶಬ್ದ. ಶಬ್ದದಿಂದ ವಾಕ್ಯ; ಅದು ಭಾಷೆಯ ಮೂಲ. ಆದ್ದರಿಂದ ಪ್ರತಿ ಪದವೂ ತನ್ನೊಂದಿಗೆ ಆ ಭಾಷೆಯ ಸಂಸ್ಕಾರವನ್ನು ತರುತ್ತದೆ. ಈ ಬಗ್ಗೆ ಎಚ್ಚರ ಅಗತ್ಯ ಎಂದು ಪ್ರತಿಪಾದಿಸಿದರು.

ಇದೇ ಮೊಟ್ಟಮೊದಲ ಬಾರಿಗೆ ಇಂಥ ಸೂತ್ರ ಇಟ್ಟುಕೊಂಡು ಚಾತುರ್ಮಾಸ್ಯ ಆಚರಿಸಲಾಗುತ್ತಿದೆ. ಚಾತುರ್ಮಾಸ್ಯ ಧರ್ಮಕ್ಕೆ ಸೀಮಿತ ಎಂದು ವಾದಿಸುವವರಿದ್ದಾರೆ. ಭಾಷೆಯನ್ನು ಉಳಿಸುವುದು ಕೂಡಾ ಧರ್ಮದ ಒಂದು ಅಂಗ. ಉರಿಯುವುದು ಬೆಂಕಿಯ ಧರ್ಮ; ಹರಿಯುವುದು ನೀರಿನ ಧರ್ಮ; ಅಂತೆಯೇ ನಮ್ಮ ಭಾಷೆ ಮಾತನಾಡುವುದು ನಮ್ಮ ಧರ್ಮ ಎಂದು ವಿಶ್ಲೇಷಿಸಿದರು.

“ಮನೆಮಾತು ಮರೆತು ಹೋಗಿದೆ. ಉಪಭಾಷೆಗಳು ಬಹುತೇಕ ನಶಿಸಿವೆ. ಕನ್ನಡ ಮಾತನಾಡುವ ಸಂದರ್ಭದಲ್ಲೂ ಕನ್ನಡವನ್ನು ಕಡೆಗಣಿಸುತ್ತೇವೆ. ನಮ್ಮ ಭಾಷೆಯಲ್ಲಿ ಬೇರೆ ಭಾಷೆ ತೂರಿಕೊಂಡಿದೆ. ಈ ಬಾರಿಯ ಚಾತುರ್ಮಾಸ್ಯ ಭಾಷೆ ಶುದ್ಧಗೊಳಿಸುವ ಪ್ರಯತ್ನಕ್ಕೆ ಶ್ರೀಕಾರ ಹಾಕಲಿದೆ ಎಂದು ಬಣ್ಣಿಸಿದರು.
ಹಲವು ವರ್ಷಗಳ ಹಿಂದೆ ಬಿಎಂಶ್ರೀಯವರ ಕಾಲದಲ್ಲಿ ಒಂದು ಇಂಗ್ಲಿಷ್ ಪದ ಬಳಸಿದರೆ ಒಂದು ರೂಪಾಯಿ ತಪ್ಪುಕಾಣಿಕೆ ತೆಗೆದಿಡಬೇಕು ಎಂಬ ಕಾಸಿನ ಸಂಘ ಹಿಂದೆ ಅಸ್ತಿತ್ವದಲ್ಲಿತ್ತು. ಕನ್ನಡದ ಸಾರ ಉಳಿಸಿಕೊಳ್ಳುವುದು ಇದರ ಉದ್ದೇಶವಾಗಿತ್ತು. ಕನ್ನಡವನ್ನು ಶುದ್ಧವಾಗಿ ಮಾತನಾಡಲು ಕಲಿಯೋಣ. ಭಾಷೆಯಲ್ಲಿ ಒಂದು ಪದ ಮರೆಯಾದರೆ ಅದಕ್ಕೆ ಸಂಬಂಧಿಸಿದ ಸಂಸ್ಕøತಿ- ಸಂಸ್ಕಾರ ಎಲ್ಲವೂ ನಾಶವಾಗುತ್ತದೆ. ಒಂದು ಪರಕೀಯ ಪದ ಆಯಾ ಭಾಷೆಯ ಸಂಸ್ಕಾರವನ್ನು ತರುತ್ತದೆ. ನಮಗೆ ಗೊತ್ತಾಗದಂತೆ ನಾವೇ ಪರಕೀಯರಾಗುತ್ತಿದ್ದೇವೆ. ಉದಾಹರಣೆಗೆ ಇಂಗ್ಲಿಷ್ ನಾವು ಆವಾಹಿಸಿಕೊಂಡಿರುವ ಆಕ್ರಮಣ. ನಮ್ಮತನವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಭಾಷೆ ಉಳಿಸಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು.

ಗುಲಾಮಗಿರಿ, ದಾಸ್ಯದ ಸಂಕೇತ ಏಕೆ ಎಂದು ಈಗ ಪ್ರಶ್ನಿಸದಿದ್ದರೆ ಮುಂದಿನ ದಿನ ಈ ಪ್ರಶ್ನೆ ಎತ್ತುವವರೂ ಇರಲಾರರು. ರಾಮಚಂದ್ರಾಪುರ ಮಠ ಶುದ್ಧ ದೇಸಿ ತಳಿಯ ಗೋವು ಉಳಿಸಲು ಬಹುದೊಡ್ಡ ಆಂದೋಲನ ನಡೆಸಿದೆ. ಭಾರತೀಯ ತಳಿಗಳ ಪರಿಶುದ್ಧತೆ ಉಳಿಯಬೇಕು ಎಂಬ ಕಾರಣಕ್ಕೆ ತಳಿಸಂಕರ ವಿರೋಧಿಸುತ್ತಾ ಬಂದಿದೆ. ಗೋವಿನಲ್ಲಿ ತಳಿಸಂಕರ ಹೇಗೆ ಪ್ರಮಾದವೋ ಭಾಷೆಯಲ್ಲಿ ಕೂಡಾ ಸಂಕರ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು.

ನಮ್ಮ ಮಾತೃಭಾಷೆಯ ಹಲವು ಪದಗಳು ಮರೆತು ಹೋಗಿವೆ. ಕನ್ನಡ ಮಾತನಾಡುವ ಪ್ರಯತ್ನ ಇಂದಿನಿಂದಲೇ ಆರಂಭವಾಗಲಿ; ಕನ್ನಡ ಮಾತನಾಡಬೇಕಾದಲ್ಲಿ ಕನ್ನಡವನ್ನೇ ಮಾತನಾಡೋಣ. ಪರಿಸ್ಥಿತಿಗೆ ಅನುಗುಣವಾಗಿ ಆಂಗ್ಲಭಾಷೆ ಮಾನಾಡಿದರೆ ತಪ್ಪಲ್ಲ; ಆದರೆ ಕನ್ನಡದ ಜತೆ ಅದನ್ನು ಬೆರೆಸುವುದು ಬೇಡ. ಹಾಗೆ ಮಾಡಿದರೆ ಇಡೀ ಸಮಾಜವೇ ಭಾಷೆ ಇಲ್ಲದ ಸಮಾಜವಾಗಿ ಮಾರ್ಪಾಡಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಈ ಸಮಾಜವನ್ನು ಬದಲಾಯಿಸುವ ಕಾರ್ಯ ಇಂದಿನಿಂದಲೇ ಆರಂಭವಾಗಲಿ. ಮನೆಗಳಲ್ಲಿ ಕನ್ನಡ ಅಭ್ಯಸಿಸೋಣ. ಮರೆತು ಹೋದ ಹಳೆ ಪದಗಳ ಮರು ಅನ್ವೇಷಣೆ ನಡೆಯಲಿದೆ; ಮತ್ತೆ ಕೆಲ ಪದಗಳನ್ನು ಸೃಷ್ಟಿ ಮಾಡುವ ಪ್ರಮೇಯವೂ ಬರುತ್ತದೆ. ಅದನ್ನೂ ಮಾಡೋಣ ಎಂದು ಸಲಹೆ ಮಾಡಿದರು.
ಮೊದಲ ಹಂತದಲ್ಲಿ ಪರಕೀಯ ಶಬ್ದಗಳನ್ನು ಕಡಿಮೆ ಮಾಡೋಣ; ಅಂತಿಮವಾಗಿ ಶುದ್ಧವಾದ ಭಾಷೆಯನ್ನು ಉಳಿಸಿ ಬೆಳೆಸೋಣ. ಚಾತುರ್ಮಾಸ್ಯದಲ್ಲಿ ನಾಲಿಗೆ ಶುದ್ಧೀಕರಣದ ಕಾರ್ಯ ಮಾಡೋಣ. ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಆಶಿಸಿದರು.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಜಿ.ಎಲ್.ಗಣೇಶ್, ಚಾತುರ್ಮಾಸ್ಯ ಸಮಿತಿ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ ಹೆಗಡೆ, ಮಹಾಮಂಡಲ ಉಪಾಧ್ಯಕ್ಷ ಜಿ.ಜಿ.ಹೆಗಡೆ ತಲೆಕೇರಿ, ಯುಎಸ್‍ಜಿ ಭಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror