ಗ್ರಾಮೀಣ ಭಾಗದಲ್ಲಿ ಮಾರ್ಗದರ್ಶನದ ಕೊರತೆ…. | ಇದಕ್ಕೆ ಕಾರಣ ಹಾಗೂ ಪರಿಹಾರದ ಬಗ್ಗೆ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ |

September 16, 2022
7:04 AM

ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ……. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ.

Advertisement

ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ ‌- ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ ಮಾನಸಿಕ ಒತ್ತಡ ಇವುಗಳಲ್ಲಿ ಸ್ಪಷ್ಟವಾದ ತೀರ್ಮಾನ ಕೈಗೊಳ್ಳುವಲ್ಲಿ ಯುವ ಜನಾಂಗ ವಿಫಲವಾಗುತ್ತಿದೆ.

ಕೆಲವು ಕಾರ್ಪೊರೇಟ್ ಸಂಸ್ಥೆಗಳು ವ್ಯಕ್ತಿತ್ವ ವಿಕಸನದ ಕೆಲವು ಸಲಹಾ ಕೇಂದ್ರಗಳನ್ನು ಅಲ್ಲಲ್ಲಿ ‌ಸ್ಥಾಪಿಸಿವೆ. ಆದರೆ ಅವುಗಳು ಸಂಪೂರ್ಣ ವಾಣಿಜ್ಯೀಕರಣವಾಗಿವೆ ಮತ್ತು ಅದರಲ್ಲಿ ಭಾರತೀಯ ಸಂಸ್ಕೃತಿಯ – ಈ ಮಣ್ಣಿನ ಮೂಲದ್ರವ್ಯವೇ ಇರುವುದಿಲ್ಲ.

ಎಸ್ಎಸ್ಎಲ್ ಸಿ , ಪಿಯುಸಿ ನಂತರದ ಶಿಕ್ಷಣದ ಆಯ್ಕೆಗಳ ಬಗ್ಗೆ ಪೋಷಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗುತ್ತದೆ. ಮಗ ಅಥವಾ ಮಗಳು ತೆಗೆದುಕೊಳ್ಳುವ ಅಂಕಗಳು, ಆ ಮಕ್ಕಳ ಆಸಕ್ತಿ, ಅದಕ್ಕಿರುವ ಅವಕಾಶ ಯಾವುದನ್ನೂ ಸರಿಯಾಗಿ ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಪರೀಕ್ಷೆಗಳಲ್ಲಿ ಅನುತ್ತೀರ್ಣವಾದರೆ ಆಗ ಇರುವ ಅವಕಾಶದ ಬಗ್ಗೆಯೂ ಮಾಹಿತಿ ಇರುವುದಿಲ್ಲ. ಆ ಮಕ್ಕಳ ಬದುಕೇ ಮುಗಿದು ಹೋದಂತೆ ಆಡುತ್ತಾರೆ.

ಆರೋಗ್ಯದಲ್ಲಿ ಆಗುವ ಬದಲಾವಣೆಗಳು – ಅದರ ಚಿಕಿತ್ಸಾ ವಿಧಾನಗಳ ಬಗ್ಗೆಯೂ ಸರಿಯಾದ ಗುಣಮಟ್ಟದ ಮಾರ್ಗದರ್ಶನ ದೊರಕದೆ ಮಾಧ್ಯಮಗಳ ಜಾಹೀರಾತುಗಳಿಗೆ ಮರುಳಾಗುವದನ್ನು ಗಮನಿಸಬಹುದು.

ಉದ್ಯೋಗದ ಆಯ್ಕೆ, ತದನಂತರ ಗಂಡ ಅಥವಾ ಹೆಂಡತಿಯ ಆಯ್ಕೆ, ಆ ಸಂದರ್ಭದಲ್ಲಿ ಪೋಷಕರ ಜವಾಬ್ದಾರಿ, ಸಾಮಾನ್ಯ ಕೌಟುಂಬಿಕ ಕಲಹಗಳ ನಿರ್ವಹಣೆ ಈ ವಿಷಯಗಳಲ್ಲಿ ತುಂಬಾ ಎಡುವುತ್ತಿದ್ದಾರೆ. ಪೋಲೀಸು ಕೋರ್ಟು ಕಚೇರಿ ಎಂದು ಅಲೆದಾಡುತ್ತಾ ಸಣ್ಣ ವಿಷಯಗಳಿಗೂ ಒತ್ತಡವನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿದ್ದಾರೆ.

ವ್ಯಾಪಾರ ವ್ಯವಹಾರ ಸಂಗೀತ ಸಾಹಿತ್ಯ ಕಲೆ ಕ್ರೀಡೆ ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಆಸಕ್ತಿ ಇರುವವರು ಬೆರಳೆಣಿಕೆಯಷ್ಟು ಯಶಸ್ವಿ ಜನರನ್ನು ಅನುಕರಣೆ ಮಾಡಲು ಹೋಗಿ ಸರಿಯಾದ ಮಾರ್ಗದರ್ಶವಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಜಾಗತೀಕರಣದ ಈ ಸಂದರ್ಭದಲ್ಲಿ ಬದಲಾದ ವ್ಯವಸ್ಥೆಯನ್ನು ಗುರುತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ.

ಮೊದಲಿದ್ದ ಹಿತೈಷಿಗಳ – ಗುರು ಹಿರಿಯರ ಮಾರ್ಗದರ್ಶನಕ್ಕೆ ಪರ್ಯಾಯವಾಗಿ ಈಗ ಇಂಟರ್ ನೆಟ್ ನಲ್ಲಿ ಎಲ್ಲಾ ಮಾಹಿತಿಗಳೂ ಸಿಗುತ್ತಿವೆ. ಇದು ಮೇಲ್ನೋಟಕ್ಕೆ ಉತ್ತಮ ಬೆಳವಣಿಗೆ. ಆದರೆ ನಿಜವಾದ ಅಂತಃಸತ್ವ ಇಲ್ಲದ ಯಾಂತ್ರಿಕ ಮತ್ತು ನಿರ್ಜೀವ ಸ್ಥಿತಿಯತ್ತ ಯುವ ಜನಾಂಗವನ್ನು ಕೊಂಡೊಯ್ಯುತ್ತಿದೆ.

ಮಾಹಿತಿಯೇ ಜ್ಞಾನ ಎಂಬ ತಪ್ಪು ಅಭಿಪ್ರಾಯ ಸಾಕಷ್ಟು ಜನರಲ್ಲಿ ಮನೆ ಮಾಡಿದೆ. ಇದು ವ್ಯಕ್ತಿಯ ಕ್ರಿಯಾತ್ಮಕತೆಯನ್ನು ಕೊಲ್ಲುತ್ತಿದೆ. ಹರಿಯುವ ನೀರಿನಂತೆ ಜ್ಞಾನವು ಸಹ ಸದಾ ಚಲಿಸುತ್ತಲೇ ಇರುತ್ತದೆ. ಅದು ನಿಂತ ನೀರಾದಾಗ ಕೊಳೆಯಲಾರಂಭಿಸುತ್ತದೆ. ನಮ್ಮೊಳಗಿನ ಅಜ್ಞಾನವನ್ನು ಹುಡುಕಿ ಹೋಗಲಾಡಿಸುವುದು ಸಹ ಜ್ಞಾನದ ಒಂದು ಭಾಗ. ಅದರ ಆಳಕ್ಕೆ ಇಳಿಯುವ ತಾಳ್ಮೆ, ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ವಾತಾವರಣ ಇಲ್ಲವಾಗಿದೆ.

ಇದು ಅಪಾಯಕಾರಿ ಎನ್ನುವುದಕ್ಕಿಂತಲೂ ಇದೊಂದು ಸವಾಲು ಎಂದು ಪರಿಗಣಿಸಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆ ಮಕ್ಕಳಿಗೆ ಪ್ರಬುದ್ದತೆಯ ಗುಣಮಟ್ಟದ ಮಾರ್ಗದರ್ಶನ ಸಿಗುವಂತೆ ಮಾಡುವ ಜವಾಬ್ದಾರಿ ಹಿರಿಯರು ತೆಗೆದುಕೊಳ್ಳಬೇಕಾಗಿದೆ.

ಏಕೆಂದರೆ……… ಕಳೆದು ಹೋಗಿವೆ ಮಕ್ಕಳು ಈಗಾಗಲೇ……… ಶಾಲೆಯ ಪುಸ್ತಕಗಳಲ್ಲಿ, ಅಂಕಗಳ ಪೈಪೋಟಿಯಲ್ಲಿ, ಮನೆಯ ಟಿವಿ ಮೊಬೈಲ್ ವಿಡಿಯೋ ಗೇಮುಗಳಲ್ಲಿ, 

ಕಳೆದು ಹೋಗಿವೆ ಮಕ್ಕಳು ಈಗಾಗಲೇ………….. ಹಿರಿಯರ ಹಣದ ‌ದಾಹದಲ್ಲಿ,ಪೋಷಕರ ಸಮಯದ ಅಭಾವದಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ ‌…………..ವಿಷಪೂರಿತ ಕಲಬೆರಕೆ ಆಹಾರ ನೀರು ಗಾಳಿ ಸೇವಿಸುವ ಪರಿಸರದಲ್ಲಿ, ಅಸಹನೆ ಆತಂಕ ಅನಾಹುತಕಾರಿ ವಾತಾವರಣದಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ……………..ಮೌಲ್ಯಗಳು ಸಂಬಂಧಗಳು ಶಿಥಿಲವಾದ ಕಾಲದಲ್ಲಿ, ಭಾವನೆಗಳು ಆತ್ಮೀಯ ಒಡನಾಟಗಳು ಸಂಸ್ಕಾರಗಳು ಮರೆಯಾದ ಸಮಯದಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ…………… ಭಯೋತ್ಪಾದಕರ ಮತಾಂಧರ ಜಾತಿವಾದಿಗಳ ವಿಷ ಚಕ್ರದಲ್ಲಿ, ಭ್ರಷ್ಟ ರಾಜಕೀಯ ಆಡಳಿತಶಾಹಿ ಮೌಡ್ಯ ತುಂಬಿದ ಮನಸ್ಸುಗಳಲ್ಲಿ.

ಇಂತಹ ಸಂದರ್ಭಗಳಲ್ಲಿ, ಹೀಗೆ ನಮ್ಮ ಕಣ್ಣ ಮುಂದೆಯೇ ಮಕ್ಕಳು ಕಳೆದು ಹೋಗುತ್ತಿರುವಾಗ ಯಾರೋ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಭ್ರಮೆಗೆ ಒಳಗಾಗಿ ಆತಂಕಕ್ಕೆ ಒಳಗಾಗಿದ್ದೇವೆ. ಕಳ್ಳರ ಸಂತೆಯಲ್ಲಿ ಮಕ್ಕಳನ್ನು ಆಟವಾಡಲು ಬಿಟ್ಟು, ಅಜಾಗರೂಕತೆಯಿಂದ – ಬೇಜವಾಬ್ದಾರಿಯಿಂದ -ದುರಾಸೆಯಿಂದ – ಮತಿಹೀನತೆಯಿಂದ ವರ್ತಿಸಿ, ಈಗ ಮಕ್ಕಳ ಕಳ್ಳರೆಂದು ಎಲ್ಲರನ್ನೂ ಅನುಮಾನಿಸುತ್ತಾ ಭಯಗೊಂಡಿದ್ದೇವೆ.

ವ್ಯವಸ್ಥೆಯೇ ಹಾದಿ ತಪ್ಪಿದಾಗ ನಾವು ನೀವು ಅವರು ಇವರು ಎಲ್ಲರೂ ಕಳ್ಳರೇ. ಎಲ್ಲರ ಬಗ್ಗೆಯೂ ಅನುಮಾನವೇ.
ಎಲ್ಲವೂ ಆತಂಕಕಾರಿಯೇ .

ಬದಲಾಗಬೇಕಿದೆ – ಬದಲಾಗೋಣ,ಹೊಸ ನಾಗರಿಕ ಸಮಾಜಕ್ಕೆ ಮುನ್ನುಡಿ ಬರೆಯೋಣ. ಕಳೆದು ಹೋದ ಮಕ್ಕಳನ್ನು ಹುಡುಕಿ ತರೋಣ. ನೆಮ್ಮದಿಯ ಸಮಾಜ ಕಟ್ಟೋಣ.

ಆಗ ಮುಂದಿನ ಪೀಳಿಗೆ ಉತ್ತಮ ಗುಣಮಟ್ಟದ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ.
ಆ ದಿನಗಳ ನಿರೀಕ್ಷೆಯಲ್ಲಿ…………

ಬರಹ :
ವಿವೇಕಾನಂದ ಎಚ್‌ ಕೆ

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್
April 11, 2026
6:16 PM
by: ದಿವ್ಯ ಮಹೇಶ್
ಕುಟುಂಬದಲ್ಲೇ ಆರೋಗ್ಯದ ಬೀಜ – ಕುಟುಂಬದಲ್ಲಿ ಆರೋಗ್ಯಕರ ಅಭ್ಯಾಸಗಳ ಬೆಳವಣಿಗೆ
April 10, 2026
6:11 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror