ಕಳೆದ ವರ್ಷದ ಭೀಕರ ಭೂಕುಸಿತದ ನೋವಿನಿಂದ ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದ ವಯನಾಡಿನಲ್ಲಿ ಮತ್ತೊಮ್ಮೆ ಆತಂಕದ ಘಟನೆ ನಡೆದಿದೆ. ಜಿಲ್ಲೆಯ ಮೆಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿರುವ ನಿರ್ಮಾಣ ಹಂತದ ಸುರಂಗ ರಸ್ತೆ ಯೋಜನಾ ಪ್ರದೇಶದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮೆಪ್ಪಾಡಿಯ ಮೀನಾಕ್ಷಿ ಸೇತುವೆ ಸಮೀಪ ಈ ಘಟನೆ ನಡೆದಿದ್ದು, ನಿರ್ಮಾಣ ಹಂತದಲ್ಲಿರುವ ಅನಕ್ಕಂಪೊಯಿಲ್–ಮೆಪ್ಪಾಡಿ ಜೋಡಿ ಸುರಂಗ (Twin Tunnel) ಯೋಜನೆ ಪ್ರದೇಶದಲ್ಲಿ ನಡೆದಿದೆ. ನಿರಂತರ ಮಳೆಯಿಂದ ಗುಡ್ಡದ ಒಂದು ಭಾಗ ಕುಸಿದು ಸುರಂಗದ ಪ್ರವೇಶ ಭಾಗದ ಮೇಲೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದ ವರದಿ ಪ್ರಕಾರ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ವಯನಾಡು ಪ್ರದೇಶದಲ್ಲಿ 265 ಮಿ.ಮೀ. ಮಳೆಯಾಗಿರುವುದಾಗಿ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ತಿಳಿಸಿದೆ. ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಸುರಂಗ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ಕಾರಣದಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ತಕ್ಷಣ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳೀಯರು ಆರಂಭಿಕ ಹಂತದಲ್ಲೇ ಮೂವರನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಇನ್ನೂ ಕೆಲವರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲೆಯಲ್ಲಿ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಅತ್ಯಂತ ಎಚ್ಚರಿಕೆಯಿಂದ ನಡೆಸಲಾಗುತ್ತಿದೆ. ಸಚಿವ ಟಿ. ಸಿದ್ದೀಕ್ ಹಾಗೂ ವಯನಾಡು ಜಿಲ್ಲಾಧಿಕಾರಿ ಸ್ಥಳದಲ್ಲಿದ್ದು ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರದೇಶವೇ 2024 ರ ಜುಲೈನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಿಂದ ನೂರಾರು ಜೀವಗಳನ್ನು ಕಳೆದುಕೊಂಡ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶದ ಸಮೀಪದಲ್ಲಿದೆ. ಆ ದುರಂತದ ನೆನಪು ಮಾಸುವ ಮುನ್ನವೇ ಮತ್ತೊಮ್ಮೆ ಸಂಭವಿಸಿರುವ ಈ ಘಟನೆ ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
A landslide struck the under-construction twin-tunnel road project at Kalladi near Meppady in Kerala’s Wayanad district on July 7, 2026. Rescue teams, including Fire and Rescue Services, Police and NDRF, are searching for people feared trapped under the debris after heavy rainfall triggered the collapse.

