Advertisement
MIRROR FOCUS

ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾದ ಸಹಕಾರ ವಲಯಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು..?

Share

ಗ್ರಾಮೀಣ ಆರ್ಥಿಕತೆಯ(Rural Economy) ಜೀವನಾಡಿಯಾಗಿರುವ ಸಹಕಾರ ವಲಯವನ್ನು(Cooperative sector) ಬಲಪಡಿಸುವುದು ನಮ್ಮ ಸರ್ಕಾರದ(Govt) ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ವೇಳೆ ಹೇಳಿದರು.ಅವರು ಹೇಳಿದ ವಿವರ ಇಲ್ಲಿದೆ.

1. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.

2. ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ
7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು.
ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು
132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
• ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು
57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ.
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು.

3. ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 1೬ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.

4. ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

5. ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು.

6. ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ
ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.
• ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
• ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ
35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು.
• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ಼್ ಮಾಡಲಾಗುವುದು.
• ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ
Bio CNG Plant ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
• ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು
PPP ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು.

7. ಎ.ಪಿ.ಎಂ.ಸಿ ಗಳನ್ನು ಬಲಪಡಿಸುವ ಮೂಲಕ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಈ ಕೆಳಕಂಡ ಕ್ರಮಗಳನ್ನು ಪ್ರಸ್ತಾಪಿಸಿದೆ;
• ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲು ಕ್ರಮವಹಿಸಲಾಗುವುದು.
• ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು.
• ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು.

8. ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ. ಗಳ ಮೂಲಕ ಸ್ಥಾಪಿಸಲಾಗುವುದು.

9. ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದ್ದು, ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.

10. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

16 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

27 minutes ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

40 minutes ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

54 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

10 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago